- ಈ ಹಿಂದೆ ಸಚಿನ್ ಪೈಲಟ್, ಗೆಹ್ಲೋಟ್ ಸಂಧಾನ ಸಭೆ ನಡೆಸಿದ್ದ ಖರ್ಗೆ, ರಾಹುಲ್ ಗಾಂಧಿ
- ಪೈಲಟ್ ಹೊಸ ಪಕ್ಷ ಸ್ಥಾಪನೆಗೆ ಚುನಾವಣಾ ನೀತಿ ತಜ್ಞ ಪ್ರಶಾಂತ್ ಕಿಶೋರ್ ನೆರವು
ರಾಜಸ್ಥಾನ ಕಾಂಗ್ರೆಸ್ನಲ್ಲಿ ಬಿಕ್ಕಟ್ಟು ಉಲ್ಭಣಿಸಿದ್ದು ಪಕ್ಷದ ಭಿನ್ನಮತೀಯ ನಾಯಕನಾಗಿ ಗುರುತಿಸಿಕೊಂಡಿರುವ ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಅವರು ಹೊಸ ಪಕ್ಷ ಸ್ಥಾಪನೆಗೆ ಮುಂದಾಗಿದ್ದಾರೆ ಎಂದು ಮಂಗಳವಾರ (ಜೂನ್ 6) ವರದಿಯಾಗಿದೆ.
ಸಚಿನ್ ಪೈಲಟ್ ಅವರು ತಮ್ಮ ತಂದೆ ರಾಜೇಶ್ ಪೈಲಟ್ ಅವರ ಪುಣ್ಯಸ್ಮರಣೆ ದಿನವಾದ ಜೂನ್ 11ರಂದು ಹೊಸ ಪಕ್ಷ ‘ಪ್ರಗತಿಶೀಲ ಕಾಂಗ್ರೆಸ್’ ಘೋಷಿಸುವ ಸಾಧ್ಯತೆ ಇದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಸಚಿನ್ ಪೈಲಟ್ ಅವರ ಹೊಸ ಪಕ್ಷ ಸ್ಥಾಪನೆಗೆ ಚುನಾವಣಾ ನೀತಿ ತಜ್ಞ ಪ್ರಶಾಂತ್ ಕಿಶೋರ್ ಅವರ ರಾಜಕೀಯ ಸಲಹಾ ಸಂಸ್ಥೆ ಇಂಡಿಯನ್ ಪೊಲಿಟಿಕಲ್ ಆ್ಯಕ್ಷನ್ ಕಮಿಟಿ (ಐಪಿಎಸಿ) ನೆರವಾಗುತ್ತಿದೆ.
ಅಷ್ಟೇ ಅಲ್ಲದೆ, ರಾಜಸ್ಥಾನದಲ್ಲಿ ತೃತೀಯ ರಂಗ ರಚನೆ ಸಲುವಾಗಿ ಹನುಮಾನ್ ಬೆನಿವಾಲ್ ಅವರ ರಾಷ್ಟ್ರೀಯ ಲೋಕತಾಂತ್ರಿಕ್ ಪಾರ್ಟಿ (ಆರ್ಎಲ್ಪಿ) ಮತ್ತು ಅಮ್ ಆದ್ಮಿ ಪಕ್ಷದ (ಎಎಪಿ) ಜೊತೆಗೆ ಹೊಂದಾಣಿಕೆ ಮಾಡಿಕೊಳ್ಳುವ ಬಗ್ಗೆಯೂ ಮಾತುಕತೆ ನಡೆಯುತ್ತಿದೆ ಎನ್ನಲಾಗಿದೆ.
ಸಚಿನ್ ಪೈಲಟ್ ಅವರು ಕಾಂಗ್ರೆಸ್ನಿಂದ ಹೊರಗೆ ಬಂದರೆ ಅವರ ಜೊತೆ ಎಷ್ಟು ಶಾಸಕರು ಹೆಜ್ಜೆ ಇಡಲಿದ್ದಾರೆ, ಇದರಿಂದ ರಾಜ್ಯ ಸರ್ಕಾರಕ್ಕೆ ತೊಂದರೆಯಾಗಲಿದೆಯೇ ಎಂಬ ಲೆಕ್ಕಾಚಾರವನ್ನು ರಾಜಕೀಯ ವಿಶ್ಲೇಷಕರು ಹಾಕತೊಡಗಿದ್ದಾರೆ.
ಭ್ರಷ್ಟಾಚಾರ ಮತ್ತು ಸರ್ಕಾರಿ ನೇಮಕಾತಿ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆಯನ್ನು ಖಂಡಿಸಿ, ಏಪ್ರಿಲ್ 11 ರಂದು ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಿದ್ದ ಪೈಲಟ್ ಅವರು ಮೇ 11 ರಂದು ಐದು ದಿನಗಳ ಪಾದಯಾತ್ರೆ ನಡೆಸಿದ್ದರು. ಈ ಹಿನ್ನೆಲೆ ಜೂನ್ 11ರಂದು ಹೊಸ ಪಕ್ಷ ಘೋಷಿಸಲಿದ್ದಾರೆ ಎಂಬ ಸುದ್ದಿ ರಾಜಕೀಯ ಪಡಸಾಲೆಯಲ್ಲಿ ಹರಿದಾಡುತ್ತಿದೆ.
ಸಚಿನ್ ಪೈಲಟ್ ಅವರು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರೊಂದಿಗೆ ಅಧಿಕಾರ ಹಂಚಿಕೆ, ಇತರ ವಿಷಯಗಳ ಸಂಬಂಧ ವಿಚಾರವಾಗಿ ಹಲವು ವರ್ಷಗಳಿಂದ ಭಿನ್ನಾಭಿಪ್ರಾಯ ಹೊಂದಿದ್ದಾರೆ.
ಈ ವರ್ಷದ ಅಂತ್ಯದಲ್ಲಿ ರಾಜಸ್ಥಾನ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಈ ಹಿನ್ನೆಲೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮೇ 29ರಂದು ಅಶೋಕ್ ಗೆಹ್ಲೊಟ್ ಮತ್ತು ಸಚಿನ್ ಪೈಲಟ್ ಅವರೊಂದಿಗೆ ಸುದೀರ್ಘ ಮಾತುಕತೆ ನಡೆಸಿದ್ದರು.
ಬಿಜೆಪಿಯನ್ನು ಸೋಲಿಸುವ ಉದ್ದೇಶದಿಂದ ಇಬ್ಬರೂ ನಾಯಕರು ಒಗ್ಗಟ್ಟಾಗಿ ಚುನಾವಣೆ ಎದುರಿಸಲಿದ್ದಾರೆ ಎಂದು ಕಾಂಗ್ರೆಸ್ ಪ್ರಕಟಿಸಿತ್ತು. ಆದರೆ ಸಚಿನ್ ಪೈಲಟ್ ಮರುದಿನ ಮಾತನಾಡಿ, ಬಿಜೆಪಿ ನಾಯಕರು ಮತ್ತು ಮಾಜಿ ಮುಖ್ಯಮಂತ್ರಿ ವಸುಂಧರ ರಾಜೇ ವಿರುದ್ಧದ ಭ್ರಷ್ಟಾಚಾರ ಆರೋಪ, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ತನಿಖೆಗಾಗಿ ತಮ್ಮ ಬೇಡಿಕೆಗಳಿಂದ ಹಿಂದೆ ಸರಿಯುವುದಿಲ್ಲ ಎಂದಿದ್ದರು.
ಈ ಸುದ್ದಿ ಓದಿದ್ದೀರಾ? ಒಡಿಶಾ ರೈಲು ದುರಂತಕ್ಕೆ ಟಿಎಂಸಿ ಪಿತೂರಿ: ಬಿಜೆಪಿ ಮುಖಂಡ ಸುವೇಂದು ಅಧಿಕಾರಿ ಆರೋಪ
ಗೆಹ್ಲೋಟ್ ಅವರ ಜೊತೆ ಹೊಂದಾಣಿಕೆ ಸಾಧ್ಯವಿಲ್ಲ ಎಂಬುದನ್ನು ಸಚಿನ್ ಪೈಲಟ್ ಸ್ಪಷ್ಟಪಡಿಸಿದ್ದರು.
ಸಚಿನ್ ಪೈಲಟ್ ಕಾಂಗ್ರೆಸ್ ತೊರೆಯುವುದು ಖಚಿತವಾದರೆ, ಈ ಹಿಂದೆ ಕಾಂಗ್ರೆಸ್ ತ್ಯಜಿಸಿದ ಗುಲಾಂ ನಬಿ ಆಜಾದ್, ಜ್ಯೋತಿರಾದಿತ್ಯ ಸಿಂದಿಯಾ, ಕಪಿಲ್ ಸಿಬಲ್, ಜಿತೇಂದ್ರ ಪ್ರಸಾದ್, ಆರ್ಪಿಎನ್ ಸಿಂಗ್, ಸುನಿಲ್ ಝಾಖರ್, ಅಶ್ವಿನಿ ಕುಮಾರ್, ಹಾರ್ದಿಕ್ ಪಟೇಲ್ ಮತ್ತು ಅಲ್ವೇಶ್ ಠಾಕೂರ್ ಅವರಂತಹ ಪ್ರಮುಖ ನಾಯಕರ ಸಾಲಿಗೆ ಸೇರಲಿದ್ದಾರೆ ಎಂದು ವರದಿ ಹೇಳಿದೆ.