ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ ಕಾರ್ಯಕ್ರಮಕ್ಕೆ ಬಂದವರ ವಿಡಿಯೋ ಮಾಡಿಕೊಂಡು, ಅಧಿಕಾರಿಗಳಿಗೆ ಹೇಳಿ ಕೇಸ್ ಹಾಕಿಸಿದ್ದಾರೆ. ಕಾಂಗ್ರೆಸ್ನವರು ಯಾವ ಚುನಾವಣೆ ನಡೆಸಲು ಹೋಗ್ತಿದ್ದಾರೆ? ನಮ್ಮ ಪಕ್ಷದ ಅಧ್ಯಕ್ಷರಿಗೆ ಇದರ ಬಗ್ಗೆ ಒಂದು ನೋಟಿಸ್ ಕೊಟ್ಟಿದ್ದಾರೆ. ಕಾಂಗ್ರೆಸ್ನವರು ದಬ್ಬಾಳಿಕೆ ಮೂಲಕ ಇವರು ಚುನಾವಣೆ ನಡೆಸಲು ಹೊರಟಿದ್ದಾರೆ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, “ಚನ್ನಪಟ್ಟಣದಲ್ಲಿ ಎನ್ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ನಾಮಪತ್ರ ಸಲ್ಲಿಸಿದ್ದಾರೆ. ಆ ಸಂದರ್ಭದಲ್ಲಿ ಕ್ಷೇತ್ರದ ಕಾರ್ಯಕರ್ತರು, ಸಾರ್ವಜನಿಕರು ಸೇರಿದ್ದರು. ಎನ್ಡಿಎ ಮೈತ್ರಿಕೂಟದ ನಾಯಕರು ದೊಡ್ಡ ಪ್ರಮಾಣದಲ್ಲಿ ಸೇರಿದ್ದರು. ಇದು ಐತಿಹಾಸಿಕ ಸಭೆ ಆಗಿತ್ತು. ಇದು ಕಾಂಗ್ರೆಸ್ ನಾಯಕರ ಕಣ್ಣು ಕುಕ್ಕಿದೆ” ಎಂದರು.
“ಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ವಿರೋಧ ಪಕ್ಷಗಳ ಮೇಲೆ ದಬ್ಬಾಳಿಕೆ ನಡೆಸುತ್ತಿದೆ. ಜನ ಕಾರ್ಯಕ್ರಮಕ್ಕೆ ಬರಬಾರದಾ? ಶುಕ್ರವಾರ ನಾಮಪತ್ರ ಸಲ್ಲಿಕೆಯ ನಂತರ ಒಂದು ನೊಟೀಸ್ ಕೊಟ್ಟಿದ್ದಾರೆ. ಬರುವವರ ಮೇಲೆಲ್ಲಾ ಕೇಸ್ ಹಾಕಿಕೊಂಡು ಚುನಾವಣೆ ನಡೆಸಲು ಹೊರಟಿದ್ದಾರೆ ಇವರು. ಇದಕ್ಕೆಲ್ಲಾ ನಾವು ಹೆದರುವ ಪ್ರಶ್ನೆ ಇಲ್ಲ. ಜನರ ಬಳಿ ನಾವು ಮತ ಕೇಳುತ್ತೇವೆ. ಅವರೇ ತೀರ್ಪು ಕೊಡುತ್ತಾರೆ” ಎಂದು ಗುಡುಗಿದರು.
“ಸರ್ಕಾರ ಈ ಕಾರ್ಯಕ್ರಮಕ್ಕೆ ಬಂದ ವಾಹನಗಳಿಗೆ ನೋಟಿಸ್ ನೀಡಿದೆ. ಸಿಎಂ, ಡಿಸಿಎಂ ಆದಿಯಾಗಿ ಅವರ ಕಡೆಯಿಂದ ಎಲ್ಲರೂ ಚನ್ನಪಟ್ಟಣಕ್ಕೆ ಹೋಗಿದ್ದರಲ್ಲವೇ? ಹಾಗಿದ್ದರೆ, ಅವರ ಸಭೆಗಳಿಗೆ ಬಂದ ಜನರಿಗೆ ವಾಹನದ ವ್ಯವಸ್ಥೆ ಮಾಡೇ ಇರಲಿಲ್ಲವೇ ಎಂದು ಪ್ರಶ್ನಿಸಿದರು.
“ನಾವು ಮೂರೂ ಕ್ಷೇತ್ರ ಗೆದ್ದಾಗಿದೆ ಎಂದು ಸಿಎಂ ಹೇಳುತ್ತಿದ್ದಾರೆ. ಕುಮಾರಸ್ವಾಮಿಯವರ ಭಾವನಾತ್ಮಕ ಮಾತು ಮತ್ತು ಕಣ್ಣೀರು ಜನರಿಗೆ ಬೇಸರವಾಗಿ ಹೋಗಿದೆ ಅಂದಿದ್ದಾರೆ. ಪಾಪ, ಇವರು ಎಂದೂ ಜನರ ಮುಂದೆ ಕಣ್ಣೀರೇ ಹಾಕಿಲ್ಲವೇ? ಹೌದು, ನಾನು ಜನರ ಕಷ್ಟ ನೋಡಿ ಕಣ್ಣೀರು ಹಾಕ್ತಿದ್ದೇನೆ. ಇವರು ಅಧಿಕಾರ, ಹಣದ ದುರ್ಬಳಕೆಯಿಂದ ಗೆದ್ದಾಗಿದೆ ಎಂದು ಬೀಗುತ್ತಿದ್ದಾರೆ. ಇವರಿಗೆ ಚನ್ನಪಟ್ಟಣದಲ್ಲಿ ನಿಲ್ಲಿಸೋಕೆ ಕಾಂಗ್ರೆಸ್ ಪಕ್ಷದಿಂದ ಒಬ್ಬ ಅಭ್ಯರ್ಥಿ ಸಿಗಲಿಲ್ಲ. ಬಿಜೆಪಿಯಿಂದ ಅಭ್ಯರ್ಥಿ ಹೈಜಾಕ್ ಮಾಡಿಕೊಂಡು ಹೋಗಿದ್ದಾರೆ, ಇಷ್ಟಾದರೂ ಕುತಂತ್ರ ಬೇರೆ ಮಾಡಿದ್ದಾರೆ” ಎಂದು ಟೀಕಿಸಿದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೂರು ಪಕ್ಷಗಳಿಂದಲೂ ಕುಟುಂಬ ಅಭ್ಯರ್ಥಿಗಳ ದುರಂತ ರಾಜಕಾರಣ
ಏನಿದು ಪ್ರಕರಣ
ಉಪ ಚುನಾವಣೆಯ ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಜೆಡಿಎಸ್ನಿಂದ ನಿಖಿಲ್ ಕುಮಾರಸ್ವಾಮಿ ಅವರು ಶುಕ್ರವಾರ ನಾಮಪತ್ರ ಸಲ್ಲಿಸಿದ ಸಂದರ್ಭದಲ್ಲಿ ನಡೆದ ರೋಡ್ ಷೋ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ, ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಚುನಾವಣಾ ಅಧಿಕಾರಿಗಳು ಆಯೋಜಕರಿಗೆ ನೋಟಿಸ್ ನೀಡಿದ್ದಾರೆ.
ರೋಡ್ ಷೋ ಕಾರ್ಯಕ್ರಮಕ್ಕೆ ವಿವಿಧ ಭಾಗಗಳಿಂದ ಸುಮಾರು ಖಾಸಗಿ 96 ಬಸ್ಗಳಲ್ಲಿ ಜನರನ್ನು ಕರೆತರಲಾಗಿತ್ತು. ಈ ಕುರಿತು ಪರಿಶೀಲನೆ ನಡೆಸಿದಾಗ ಬಸ್ಗಳಿಗೆ ಅನುಮತಿ ಪಡೆಯದಿರುವುದು ಕಂಡುಬಂತು. ಹಾಗಾಗಿ, ಆಯೋಜಕರು ಹಾಗೂ ಬಸ್ಗಳ ಮಾಲೀಕರಿಗೆ ನೋಟಿಸ್ ನೀಡಲಾಗಿದೆ. ನೀತಿ ಸಂಹಿತೆ ಉಲ್ಲಂಘನೆ ಕುರಿತು ಚನ್ನಪಟ್ಟಣ ಪೂರ್ವ ಪೊಲೀಸ್ ಠಾಣೆಯಲ್ಲಿ ಎನ್ಸಿಆರ್ ಕೂಡ ಮಾಡಿಕೊಳ್ಳಲಾಗಿದೆ. ಇಂದು ನ್ಯಾಯಾಲಯದ ಅನುಮತಿ ಪಡೆದು, ಸಂಬಂಧಪಟ್ಟವರ ಮೇಲೆ ಪ್ರಕರಣ ದಾಖಲಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.