ಸಾಮಾಜಿಕ ನ್ಯಾಯದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಒಳಮೀಸಲಾತಿ ಪರವಾಗಿ ನಿರ್ಣಯ ತೆಗೆದುಕೊಂಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಒಳಮೀಸಲಾತಿ ಕುರಿತ ಸಚಿವ ಸಂಪುಟ ನಿರ್ಣಯಕ್ಕಾಗಿ ತಮ್ಮನ್ನು ಅಭಿನಂದಿಸಿದ ಮಾದಿಗ ಸಮುದಾಯದ ರಾಜ್ಯ ಮುಖಂಡರು, ಪ್ರತಿಷ್ಠಿತರು, ಒಳಮೀಸಲಾತಿ ಹೋರಾಟದ ನಾಯಕರು, ಪದಾಧಿಕಾರಿಗಳು ಮತ್ತು ಸಮುದಾಯದ ಜನಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದರು.
“ಒಳಮೀಸಲಾತಿಗಾಗಿ ಮಾದಿಗ ಸಮುದಾಯ ದಶಕಗಳಿಂದ ಹೋರಾಟ ನಡೆಸಿದೆ. ಈಗ ಸುಪ್ರೀಂಕೋರ್ಟ್ ಕೂಡ ತೀರ್ಪು ನೀಡಿದೆ. ನಾವು ಜಾರಿ ಮಾಡಲೇಬೇಕಿದೆ. 101 ಪರಿಶಿಷ್ಟ ಜಾತಿಗಳಿವೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಮುಖ್ಯ. ಎಲ್ಲರನ್ನೂ ಸಮಾಧಾನ ಮಾಡುವುದು ಸಾಧ್ಯವಿಲ್ಲದಿದ್ದರೂ ಶೇ.90 ರಷ್ಟು ಸಮುದಾಯಗಳಿಗೆ ಸಮಾಧಾನ ಆಗುವ ತೀರ್ಮಾನ ತೆಗೆದುಕೊಳ್ಳಬೇಕಿದೆ. ಇದನ್ನು ನಮ್ಮ ಸರ್ಕಾರ ಮಾಡಲಿದೆ” ಎಂದರು.
“ತೆಲಂಗಾಣ ಸರ್ಕಾರ ಈಗಾಗಲೇ ಒಳಮೀಸಲಾತಿ ಜಾರಿ ಸಂಬಂಧ ಒಂದು ಆಯೋಗ ರಚನೆ ಮಾಡಿದ್ದಾಗಿದೆ. ನಾನು ತೆಲಂಗಾಣ ಸಿಎಂ ಜೊತೆಗೂ ಇತ್ತೀಚಿಗೆ ಮೈಸೂರಿನಲ್ಲಿ ಈ ಬಗ್ಗೆ ಚರ್ಚೆ ಮಾಡಿದ್ದೇನೆ. ಹರಿಯಾಣದಲ್ಲೂ ಕ್ಯಾಬಿನೆಟ್ ನಿರ್ಣಯ ಆಗಿದೆ. ಆದರೆ ಆದೇಶ ಆಗಿಲ್ಲ. ನಮ್ಮ ಕ್ಯಾಬಿನೆಟ್ ನಲ್ಲೂ ಹಿಂದೊಮ್ಮೆ ಅನೌಪಚಾರಿಕ ಚರ್ಚೆ ಮಾಡಿದ್ದೆ. ನೆನ್ನೆಯ ಕ್ಯಾಬಿನೆಟ್ ನಲ್ಲಿ ಸಚಿವ ಮಹದೇವಪ್ಪ ಒಳಮೀಸಲಾತಿ ವಿಚಾರ ಪ್ರಸ್ತಾಪಿಸಿದರು. ಸಚಿವರಾದ ಪ್ರಿಯಾಂಕ್ ಖರ್ಗೆ, ತಿಮ್ಮಾಪುರ ಅವರು, ಮುನಿಯಪ್ಪ ಅವರು ಎಲ್ಲರೂ ಮಾತನಾಡಿ ದರು. ಎಲ್ಲರೂ ಒಳ ಮೀಸಲಾತಿಗೆ ಒಪ್ಪಿಕೊಂಡರು. ಯಾರದ್ದೂ ವಿರೋಧ ಇರಲಿಲ್ಲ. ಆದರೆ ಅಗತ್ಯ ಡಾಟಾ ಅಗತ್ಯವಿದೆ ಎನ್ನುವ ಸಂಗತಿ ಕೂಡ ಚರ್ಚೆಗೆ ಬಂದಿದೆ. ಹೀಗಾಗಿ ಆಯೋಗ ರಚನೆ ಮಾಡಿದ್ದೇವೆ” ಎಂದು ಹೇಳಿದರು.
“ಆಯೋಗ ಎಲ್ಲ ವರದಿಗಳನ್ನೂ ಅಧ್ಯಯನ ಮಾಡಿ ಅಗತ್ಯ ಅಂಕಿ ಅಂಶ ಸಮೇತ ವರದಿ ನೀಡುತ್ತದೆ. ವರದಿ ಬರುವವರೆಗೂ ಹೊಸದಾಗಿ ಯಾವ ನೇಮಕಾತಿ ನೋಟಿಫಿಕೇಶನ್ ಹೊರಡಿಸುವುದು ಬೇಡ ಎನ್ನುವ ನಿರ್ಣಯ ಆಗಿದೆ. ಸಾಮಾಜಿಕ ನ್ಯಾಯದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇವೆ” ಎಂದರು.
ಸಭೆಯಲ್ಲಿ ಉಪಸ್ಥಿತರಿದ್ದ ಸಚಿವ ಆರ್.ಬಿ.ತಿಮ್ಮಾಪುರ್ ಅವರು ಒಳಮೀಸಲಾತಿ ಹೋರಾಟಕ್ಕೆ ನಿನ್ನೆ ಚರಿತ್ರಾರ್ಹ ದಿನ. ಇದು ಸಾಧ್ಯವಾಗಿದ್ದು ಸಿಎಂ ಸಿದ್ದರಾಮಯ್ಯ ಅವರಿಂದ ಎಂದರು. ಎಲ್.ಹನುಮಂತಯ್ಯ ಅವರು ಮಾತನಾಡಿ, “ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಹು ಮಹಾರಾಜ್ ಮತ್ತು ನಾಲ್ವಡಿ ಅರಸರ ಪರಂಪರೆಯವರು. ಅದಕ್ಕೆ ಇದು ಸಾಧ್ಯವಾಗಿದೆ” ಎಂದರು.