- ಶರದ್ ಪವಾರ್ ಮಾತಿಗೆ ಕಾಂಗ್ರೆಸ್ ಸಮ್ಮತಿ
- ಪ್ರತಿಪಕ್ಷಗಳ ಸಭೆಗೆ ಗೈರಾದ ಉದ್ಧವ್ ಠಾಕ್ರೆ
“ನಮ್ಮ ನಿಜವಾದ ಹೋರಾಟ ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧವಾಗಿದೆ. ಆದ್ದರಿಂದ ವಿ.ಡಿ.ಸಾವರ್ಕರ್ ವಿರುದ್ಧ ಹೇಳಿಕೆ ಸಲ್ಲ” ಎಂದು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ನಾಯಕ ಶರದ್ ಪವಾರ್ ಹೇಳಿದ್ದಾರೆ ಎಂದು ಮಂಗಳವಾರ (ಮಾರ್ಚ್ 28) ವರದಿಯಾಗಿದೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸೋಮವಾರ (ಮಾರ್ಚ್ 27) ಸಂಜೆ ನಡೆದ ಪ್ರತಿಪಕ್ಷ ನಾಯಕರ ಸಭೆಯಲ್ಲಿ ಶರದ್ ಪವಾರ್ ಕಾಂಗ್ರೆಸ್ಗೆ ಈ ಸಲಹೆ ನೀಡಿದ್ದಾರೆ. ಮಹಾರಾಷ್ಟ್ರದ ಗೌರವಾನ್ವಿತ ವ್ಯಕ್ತಿಯಾಗಿರುವ ಸಾವರ್ಕರ್ ಅವರನ್ನು ಗುರಿಯಾಗಿಸಿ ಹೇಳಿಕೆ ನೀಡಿರುವುದರಿಂದ ರಾಜ್ಯದಲ್ಲಿ ಕಾಂಗ್ರೆಸ್ಗೆ ಪ್ರತಿಪಕ್ಷಗಳ ಜೊತೆ ಮೈತ್ರಿಗೆ ಧಕ್ಕೆಯಾಗುತ್ತದೆ ಎಂದು ಅವರು ಹೇಳಿದ್ದಾರೆ.
ಈ ಸಲಹೆಯನ್ನು ಕಾಂಗ್ರೆಸ್ ಸ್ವೀಕರಿಸಿದೆ ಎಂದು ವರದಿಯಾಗಿದೆ. ವಿ.ಡಿ ಸಾವರ್ಕರ್ ಕುರಿತು ರಾಹುಲ್ ಗಾಂಧಿ ನೀಡಿದ್ದ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ್ದ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಪ್ರತಿಪಕ್ಷಗಳ ಸಭೆಯಿಂದ ದೂರ ಉಳಿದಿದ್ದಾರೆ. ಈ ವಿಷಯದ ಬಗ್ಗೆ ಶಿವಸೇನೆಯ ಕಳವಳವನ್ನು ಕಾಂಗ್ರೆಸ್ ನಾಯಕತ್ವಕ್ಕೆ ಶರದ್ ಪವಾರ್ ಮನವರಿಕೆ ಮಾಡಿಕೊಟ್ಟಿದ್ದಾರೆ.
ಮಹಾರಾಷ್ಟ್ರದಲ್ಲಿ ಶಿವಸೇನೆಯ ಅಸಮಾಧಾನಕ್ಕೆ ಕಾರಣವಾದ ಸಾವರ್ಕರ್ ವಿರುದ್ಧದ ಟೀಕೆಯನ್ನು ಕಡಿಮೆ ಮಾಡಿ ಮೃದುಧೋರಣೆ ತಳೆಯುವಂತೆ ಶರದ್ ಪವಾರ್ ಅವರು ಕಾಂಗ್ರೆಸ್ಗೆ ಸೂಚಿಸಿದ್ದಾರೆ.
“ಸಾವರ್ಕರ್ ಎಂದಿಗೂ ಆರ್ಎಸ್ಎಸ್ ಸದಸ್ಯರಾಗಿರಲಿಲ್ಲ. ಪ್ರತಿಪಕ್ಷಗಳ ನಿಜವಾದ ಹೋರಾಟ ಪ್ರಧಾನಿ ಮೋದಿ ಮತ್ತು ಬಿಜೆಪಿಯೊಂದಿಗೆ ಇದೆ” ಎಂದು ಶರದ್ ಪವಾರ್ ತಿಳಿಸಿದರು.
ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರತಿಪಕ್ಷಗಳ ನಾಯಕರು ಈ ಸಭೆಯಲ್ಲಿ ಭಾಗವಹಿಸಿದ್ದರು.
‘ಮೋದಿ ಉಪನಾಮ’ದ ಕುರಿತ ಮಾಡಿದ ಟೀಕೆಗೆ ಸಂಬಂಧಿಸಿ ಸೂರತ್ ನ್ಯಾಯಾಲಯದಿಂದ ಎರಡು ವರ್ಷ ಶಿಕ್ಷೆಗೆ ಒಳಪಟ್ಟ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ರಾಹುಲ್ ಗಾಂಧಿ, “ನನ್ನ ಹೆಸರು ಸಾವರ್ಕರ್ ಅಲ್ಲ, ನಾನು ಕ್ಷಮೆಯಾಚಿಸುವುದಿಲ್ಲ” ಎಂದು ಹೇಳಿದ್ದರು.
ಈ ಸುದ್ದಿ ಓದಿದ್ದೀರಾ? ಪಾನ್-ಆಧಾರ್ ಜೋಡಣೆ | ಕೆಳ ವರ್ಗಕ್ಕೆ ಆಗುತ್ತಿರುವ ಅನ್ಯಾಯಕ್ಕೆ ಹೊಣೆ ಯಾರು?
ರಾಹುಲ್ ಗಾಂಧಿ ಅವರ ಈ ಹೇಳಿಕೆಗೆ ಶಿವಸೇನಾ ನಾಯಕ ಉದ್ಧವ್ ಠಾಕ್ರೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದರು. “ನಮ್ಮ ಆರಾಧ್ಯ ವ್ಯಕ್ತಿಯನ್ನು ಅವಮಾನಿಸುವುದನ್ನು ನಿಲ್ಲಿಸದಿದ್ದರೆ ಮಹಾರಾಷ್ಟ್ರದಲ್ಲಿ ಪ್ರತಿಪಕ್ಷಗಳ ಮೈತ್ರಿಯಲ್ಲಿ ಬಿರುಕು ಮೂಡುತ್ತದೆ” ಎಂದು ಎಚ್ಚರಿಸಿದ್ದರು.
ಸೂರತ್ ನ್ಯಾಯಾಲಯ ಮಾರ್ಚ್ 23 ರಂದು ರಾಹುಲ್ ಗಾಂಧಿ ಅವರಿಗೆ ಜೈಲು ಶಿಕ್ಷೆ ವಿಧಿಸಿತು. ಮಾರ್ಚ್ 24 ರಂದು ರಾಹುಲ್ ಅವರನ್ನು ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಳಿಸಿ ಲೋಕಸಭೆ ಕಾರ್ಯಾಲಯ ಅಧಿಸೂಚನೆ ಹೊರಡಿಸಿತ್ತು.