ಮುಂದಿನ ವರ್ಷ ಫ್ರಾನ್ಸ್ ದೇಶದ ರಾಜಧಾನಿ ಪ್ಯಾರಿಸ್ನಲ್ಲಿ ನಡೆಯಲಿರುವ ಒಲಿಂಪಿಕ್ಸ್ನಲ್ಲಿ ಪದಕ ವಿಜೇತರಾಗುವ ಸಾಮರ್ಥ್ಯವುಳ್ಳ ಪ್ಯಾರಾ ಕ್ರೀಡಾಪಟುಗಳನ್ನೊಳಗೊಂಡಂತೆ 75 ಕ್ರೀಡಾಪಟುಗಳನ್ನು ರಾಜ್ಯದಲ್ಲಿ ಅಮೃತ ಕ್ರೀಡಾ ದತ್ತು ಯೋಜನೆಯಡಿ ಆಯ್ಕೆ ಮಾಡಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಬಿ.ನಾಗೇಂದ್ರ ತಿಳಿಸಿದ್ದಾರೆ.
ಅವರು ಇಂದು ವಿಧಾನಪರಿಷತ್ನಲ್ಲಿ ಸದಸ್ಯ ಎಸ್.ರುದ್ರೇಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆ 566 (562)ಕ್ಕೆ ಉತ್ತರಿಸಿದರು.
ಪ್ಯಾರಿಸ್ನಲ್ಲಿ ನಡೆಯುವ ಒಲಿಂಪಿಕ್ಸ್ನಲ್ಲಿ ಭಾಗವಹಿಸಲು ಸಹಾಯವಾಗುವಂತೆ ರಾಜ್ಯದ ಕ್ರೀಡಾಪಟುಗಳಿಗೆ 2021-22 ನೇ ಸಾಲಿನಿಂದ ಅಮೃತ ಕ್ರೀಡಾ ದತ್ತು ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ. ಒಲಿಂಪಿಕ್ಸ್ ಸೇರಿದಂತೆ ಅಂತಾರಾಷ್ಟಿಯ ಮಟ್ಟದಲ್ಲಿ ಸಾಧನೆ ಮಾಡುವ ಸಾಮರ್ಥ್ಯ ಹೊಂದಿರುವ ಪ್ರತಿಭಾವಂತ ಕ್ರೀಡಾಪಟುಗಳನ್ನು ಗುರುತಿಸಿ, ಪೋಷಿಸಿ, ಸಾಧನೆಗೆ ಅಗತ್ಯವಾದ ಬೆಂಬಲ ವ್ಯವಸ್ಥೆ ನೀಡುವುದು ಈ ಯೋಜನೆಯ ಗುರಿಯಾಗಿದೆ ಎಂದು ತಿಳಿಸಿದರು.
“ಈ ಯೋಜನೆಯ ಫಲಾನುಭವಿಗಳಿಗೆ ತರಬೇತಿಗಾಗಿ ಕ್ರೀಡಾ ವಿಜ್ಞಾನದ ಬೆಂಬಲ, ಪೌಷ್ಟಿಕ ಆಹಾರ, ತರಬೇತಿಗೆ ಅಗತ್ಯವಿರುವ ಕ್ರೀಡಾ ಕಿಟ್ ಖರೀದಿ, ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸಲು, ದೈನಂದಿನ ಅಗತ್ಯಗಾಗಿ ಮತ್ತು ಇತರೆ ವೆಚ್ಚಗಳಿಗಾಗಿ ತಲಾ ರೂ 10 ಲಕ್ಷ ವಾರ್ಷಿಕ ಗರಿಷ್ಠ ಪ್ರೋತ್ಸಾಹ ಧನ ನೀಡಲಾಗುತ್ತಿದೆ” ಎಂದು ಸಚಿವ ಬಿ.ನಾಗೇಂದ್ರ ತಿಳಿಸಿದರು.