ಫ್ರಾನ್ಸ್ನ ಪ್ಯಾರಿಸ್ನಲ್ಲಿ ನಡೆಯಲಿರುವ ಒಲಿಂಪಿಕ್ಸ್ನಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ಒಂಬತ್ತು ಮಂದಿ ಕ್ರೀಡಾಪಟುಗಳಿಗೆ ತಲಾ ಐದು ಲಕ್ಷ ರೂಪಾಯಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಜೂರು ಮಾಡಿದ್ದಾರೆ.
ಕರ್ನಾಟಕ ಒಲಿಂಪಿಕ್ಸ್ ಅಸೋಸಿಯೇಷನ್ ಅಧ್ಯಕ್ಷರು ಆಗಿರುವ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಾ. ಕೆ. ಗೋವಿಂದರಾಜು ಅವರು ರಾಜ್ಯದ ಕ್ರೀಡಾಪಟುಗಳಿಗೆ ಪ್ರೋತ್ಸಾಹದಾಯಕವಾಗಿ ತಲಾ 5 ಲಕ್ಷ ರೂಪಾಯಿ ಮಂಜೂರು ಮಾಡುವಂತೆ ಮನವಿ ಮಾಡಿದ್ದರು. ಈ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಹಣ ಮಂಜೂರು ಮಾಡಿದ್ದಾರೆ.
ಜುಲೈ 26 ರಿಂದ ಆಗಸ್ಟ್ 11ರವರೆಗೆ ಫ್ರಾನ್ಸ್ನ ಪ್ಯಾರಿಸ್ನಲ್ಲಿ ಒಲಿಂಪಿಕ್ಸ್ ಕ್ರೀಡಾಕೂಟ ನಡೆಯಲಿದೆ. ಈ ಕ್ರೀಡಾಕೂಟದಲ್ಲಿ ರಾಜ್ಯದ ಪರವಾಗಿ ಮಹಿಳಾ ಡಬಲ್ಸ್ ಬ್ಯಾಡ್ಮಿಂಟನ್ನಲ್ಲಿ ಕುಮಾರಿ ಅಶ್ವಿನಿ ಪೊನ್ನಪ್ಪ, ಮಹಿಳಾ ಗಾಲ್ಫ್ ವಿಭಾಗದಲ್ಲಿ ಕುಮಾರಿ ಅದಿತಿ ಅಶೋಕ್, ಮಹಿಳಾ ಫ್ರೀ-ಸ್ಟೈಲ್ ಈಜು ಸ್ಫರ್ಧೆಯಲ್ಲಿ ಕುಮಾರಿ ಧಿನಿಧಿ ದೇಸಿಂಗೂ, ಮಿಕ್ಸೆಡ್ ರಿಲೇ ಓಟದಲ್ಲಿ ಎಂ.ಆರ್.ಪೂವಮ್ಮ, ಟೇಬಲ್ ಟೆನ್ನಿಸ್ನಲ್ಲಿ ಕುಮಾರಿ ಅರ್ಚನಾ ಕಾಮತ್, ಪುರುಷರ ಈಜು ಸ್ಫರ್ಧೆಯಲ್ಲಿ ಶ್ರೀಹರಿ ನಟರಾಜ್, ಪುರುಷರ ಟೆನ್ನಿಸ್ ಡಬಲ್ಸ್ನಲ್ಲಿ ರೋಹನ್ ಭೋಪಣ್ಣ, ಪುರುಷರ 71 ಕೆಜಿ ಬಾಕ್ಸಿಂಗ್ ನಲ್ಲಿ ನಿಶಾಂತ್ ದೇವ್, ಮಿಕ್ಸೆಡ್ ರಿಲೇ ಓಟದಲ್ಲಿ ಮಿಜೋ ಚಾಕೋ ಅವರುಗಳು ಭಾರತವನ್ನು ಪ್ರತಿನಿಧಿಸುತ್ತಿದ್ದಾರೆ.
ಪ್ಯಾರಿಸ್ನಲ್ಲಿ ನಡೆಯಲಿರುವ ಒಲಿಂಪಿಕ್ಸ್ನಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ 9 ಕ್ರೀಡಾಪಟುಗಳಿಗೆ ತಲಾ ಐದು ಲಕ್ಷ ರೂಪಾಯಿಯನ್ನು ಸಿಎಂ ಸಿದ್ದರಾಮಯ್ಯ ಮಂಜೂರು ಮಾಡಿದ್ದಾರೆ. ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷ, ಸಿಎಂ ರಾಜಕೀಯ ಕಾರ್ಯದರ್ಶಿ ಡಾ.ಕೆ.ಗೋವಿಂದರಾಜು ಈ ಬಗ್ಗೆ ಮನವಿ ಮಾಡಿದ್ದರು. pic.twitter.com/STj12b3WI4
— Irshad Venur ಇರ್ಷಾದ್ ವೇಣೂರು (@muhammadirshad6) July 20, 2024
ಈ ಒಂಬತ್ತು ಮಂದಿಗೆ ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ನಿಂದ ಪ್ರತ್ಯೇಕ ನೆರವು ದೊರೆಯಲಿದೆ ಎಂದು ತಿಳಿಸಿರುವ ಡಾ.ಕೆ.ಗೋವಿಂದರಾಜು, ಕ್ರೀಡಾಪಟುಗಳಿಗೆ ಸರ್ಕಾರದ ನೆರವು ದೊರಕಿಸಿಕೊಟ್ಟು ಪ್ರೋತ್ಸಾಹಿಸಿದ ಮುಖ್ಯಮಂತ್ರಿಗಳಿಗೆ ಧನ್ಯವಾದ ಸಲ್ಲಿಸಿದ್ದಾರೆ.
