ಉಡುಪಿ ಜಿಲ್ಲೆಯ ಕಾರ್ಕಳದ ಬೈಲೂರಿನಲ್ಲಿ ನಿರ್ಮಿಸಿದ್ದ ಪರಶುರಾಮ ಥೀಮ್ ಪಾರ್ಕ್ ಹಗರಣದ ತನಿಖೆ ಪ್ರಾರಂಭವಾಗುವವರೆಗೆ ಪಕ್ಷದ ಯಾವುದೇ ಚಟುವಟಿಕೆಗಳಲ್ಲಿ ಭಾಗವಹಿಸುವುದಿಲ್ಲ ಎಂಬ ನಿರ್ಧಾರಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಬಂದಿದ್ದಾರೆ.
“ತನಿಖೆಯ ಬಗ್ಗೆ ಸರ್ಕಾರ ಇದೇ ರೀತಿ ನಿರ್ಲಕ್ಷ್ಯ ವಹಿಸಿದರೆ, ನಮ್ಮ ಹೋರಾಟಕ್ಕೆ ಯಾವುದೇ ಬೆಲೆ ಇಲ್ಲದಂತಾಗುತ್ತದೆ. ಆದ್ದರಿಂದ ತನಿಖೆ ಆರಂಭಿಸುವ ತನಕ ಪಕ್ಷದ ಯಾವುದೇ ಕಾರ್ಯಕ್ರಮಗಳಲ್ಲಿ ತಮ್ಮನ್ನೂ ಸೇರಿಕೊಂಡು ಕಾರ್ಕಳದ ಕಾಂಗ್ರೆಸ್ ಕಾರ್ಯಕರ್ತರು ದೂರ ಉಳಿಯಲಿದ್ದಾರೆ” ಎಂದು ಕಾರ್ಕಳ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಯೋಗೀಶ್ ಆಚಾರ್ಯ ತಿಳಿಸಿದ್ದಾರೆ.
“ಇದು ಕೇವಲ ನನ್ನೊಬ್ಬನ ನಿರ್ಧಾರವಲ್ಲ ಇತ್ತೀಚೆಗೆ ಕಾರ್ಕಳ ಬ್ಲಾಕ್ ಸಮಿತಿಯ ಸಭೆಗೆ ಕಾಂಗ್ರೆಸ್ ಪಕ್ಷದ ವೀಕ್ಷಕರಾಗಿ ಕುಶಲ ಶೆಟ್ಟಿ ಅವರು ಆಗಮಿಸಿದ್ದು ಅವರು ಸೇರಿದಂತೆ ಕಾರ್ಕಳದ ನಾಯಕರಾದ ಮುನಿಯಾಲು ಉದಯ ಕುಮಾರ್ ಶೆಟ್ಟಿ, ಕಾರ್ಕಳ ಬ್ಲಾಕ್ ಅಧ್ಯಕ್ಷರ ಸಮ್ಮುಖದಲ್ಲೇ ಎಲ್ಲಾ ಕಾರ್ಯಕರ್ತರು ತಮ್ಮ ನಿರ್ಧಾರವನ್ನು ಪ್ರಕಟಿಸಿದ್ದಾರೆ” ಎಂದಿದ್ದಾರೆ.
ಈ ಬೆಳವಣಿಗೆ ಸ್ಥಳೀಯ ಕಾಂಗ್ರೆಸ್ಸಿಗರಲ್ಲಿ ಸಂಚಲನವನ್ನು ಉಂಟುಮಾಡಿದೆ. “ನನ್ನ ನಿರ್ಧಾರವು ಕಾರ್ಕಳದ ಸಾವಿರಾರು ನಿಷ್ಠಾವಂತ ಕಾರ್ಯಕರ್ತರ ನಿರ್ಧಾರವೂ ಆಗಿದೆ ಎಂದು ಭಾವಿಸುತ್ತೇನೆ” ಎಂದು ಯೋಗೀಶ್ ಆಚಾರ್ಯ ಹೇಳಿಕೊಂಡಿದ್ದಾರೆ.
ಬುಧವಾರ ಕಾರ್ಕಳದ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರ ಜೊತೆಗೆ ಸ್ಥಳೀಯ ಮಟ್ಟದ ನಾಯಕರು ಸಭೆ ನಡೆಸಿದ್ದಾರೆ. ತನಿಖೆಯ ಬಗ್ಗೆ ಮತ್ತೊಮ್ಮೆ ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಚರ್ಚೆ ನಡೆಸುವ ಭರವಸೆ ನೀಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಂಗ್ರೆಸ್ಸಿನ ದಿಲ್ಲಿ ಚಲೋ ಮತ್ತು ಬಿಜೆಪಿಯ ಭಂಡತನ
ಏನಿದು ಪ್ರಕರಣ
ಕಾರ್ಕಳ ತಾಲೂಕಿನ ಬೈಲೂರಿನ ಉಮಿ ಕುಂಜ ಬೆಟ್ಟದ ಮೇಲೆ ಪರಶುರಾಮ ಥೀಮ್ ಪಾರ್ಕ್ ನಿರ್ಮಿಸಲಾಗಿದೆ. ಈ ಪಾರ್ಕ್ ಅನ್ನು ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, 2023ರ ಜ. 17ರಂದು ಉದ್ಘಾಟಿಸಿದ್ದರು. ಇಡೀ ಥೀಮ್ ಪಾರ್ಕ್ ಅನ್ನು 15 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದ್ದು, ಅದರಲ್ಲಿ ಬೃಹತ್ತಾದ ಪರಶುರಾಮನ ಪುತ್ಥಳಿ, ಬಯಲು ರಂಗ ಮಂದಿರ, ಆರ್ಟ್ ಗ್ಯಾಲರಿ, ಭಜನಾ ಮಂದಿರ ಇವೆ.
ಪರಶುರಾಮನ ಪುತ್ಥಳಿಯು 53 ಅಡಿ ಎತ್ತರವಿದ್ದು, 15 ಟನ್ ತೂಕವಿದೆ. ಇದನ್ನು ಉತ್ತರ ಕನ್ನಡದ ಹೊನ್ನಾವರ ತಾಲೂಕಿನ ಕೃಷ್ಣನಾಯ್ಕ ಅವರು ನಿರ್ಮಿಸಿದ್ದಾರೆ. ಈ ಮೂರ್ತಿಗೆ ಕಂಚು ಮತ್ತು ಉಕ್ಕು ಬಳಸಲಾಗಿದೆ ಎಂದು ಹೇಳಲಾಗಿದೆ. ಆದರೆ, ಕಾಂಗ್ರೆಸ್ ನಾಯಕರು ಈ ಪುತ್ಥಳಿಯನ್ನು ಫೈಬರ್ನಿಂದ ನಿರ್ಮಿಸಲಾಗಿದ್ದು, ಉಕ್ಕು ಮತ್ತು ಕಂಚಿನ ಪುತ್ಥಳಿಗಿಂತ ಕಡಿಮೆ ಖರ್ಚಿನಲ್ಲಿ ಈ ಪುತ್ಥಳಿ ನಿರ್ಮಿಸಲಾಗಿದೆ. ಕಂಚು, ಉಕ್ಕು ಬಳಸಲಾಗಿದೆ ಎಂದು ಹೇಳಿ ಆ ಹಣವನ್ನು ಈ ಥೀಮ್ ಪಾರ್ಕ್ ನಿರ್ಮಿಸುವ ಜವಾಬ್ದಾರಿ ಹೊತ್ತಿದ್ದ ಸ್ಥಳೀಯ ಶಾಸಕರು (ಸುನಿಲ್ ಕುಮಾರ್) ಲೂಟಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.