- ಕೇಂದ್ರದ ನಡೆ ವಿರೋಧಿಸಿ ಪ್ರತಿಭಟನೆಗೆ ಕರೆ ನೀಡಿದ ಸಿದ್ದರಾಮಯ್ಯ
- ಭಾರತದ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಇದೊಂದು ಕರಾಳ ದಿನ
ಮೋದಿ ಉಪನಾಮ ವಿವಾದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ರಾಹುಲ್ ಗಾಂಧಿ ಅವರು 2019ರ ಲೋಕಸಭಾ ಚುನಾವಣೆಯ ಪ್ರಚಾರದ ವೇಳೆ ಕರ್ನಾಟಕದಲ್ಲಿ ಮೋದಿ ಉಪನಾಮದ ಕುರಿತು ವ್ಯಂಗ್ಯವಾಡಿದ್ದರು. ರಾಹುಲ್ ಗಾಂಧಿ ಹೇಳಿಕೆ ಖಂಡಿಸಿ ಗುಜರಾತಿನ ಮಾಜಿ ಸಚಿವ ಪೂರ್ಣೇಶ್ ಮೋದಿ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್ ಜಿಲ್ಲಾ ನ್ಯಾಯಾಲಯವು ರಾಹುಲ್ ಗಾಂಧಿ ಅವರನ್ನು ದೋಷಿ ಎಂದು ಆದೇಶಿಸಿ ಎರಡು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದೆ. ನ್ಯಾಯಾಲಯದ ತೀರ್ಪು ಹೊರಬಿದ್ದ ಬೆನ್ನಲ್ಲೇ ರಾಹುಲ್ ಗಾಂಧಿ ಅವರನ್ನು ವಯನಾಡ್ ಕ್ಷೇತ್ರದ ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. “ರಾಹುಲ್ ಗಾಂಧಿಯವರು ಹೇಳುವ ಸತ್ಯವನ್ನು ಎದುರಿಸಲಾಗದ ನರೇಂದ್ರ ಮೋದಿ ಸರ್ಕಾರ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ತನ್ನ ಹೇಡಿತನವನ್ನು ಜಾಹೀರುಗೊಳಿಸಿದೆ. ಭಾರತದ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಇದೊಂದು ಕರಾಳ ದಿನ” ಎಂದು ಕಿಡಿಕಾರಿದ್ದಾರೆ.
“ಬಿಜೆಪಿಯ ಪಾಪದ ಕೊಡ ತುಂಬಿದೆ. ತನ್ನ ನಾಶದ ಶವದಪೆಟ್ಟಿಗೆಗೆ ತಾನೇ ಕೊನೆಯ ಮೊಳೆ ಬಡಿದಿದೆ. ಈ ಫ್ಯಾಸಿಸ್ಟ್ ನಡವಳಿಕೆಗೆ ಹೆದರುವ, ಹಿಂಜರಿಯುವ ಪ್ರಶ್ನೆಯೇ ಇಲ್ಲ. ಈ ಅನ್ಯಾಯದ ವಿರುದ್ಧ ನ್ಯಾಯಾಲಯ ಮತ್ತು ಬೀದಿಗಳಲ್ಲಿ ಹೋರಾಟ ಮಾಡುತ್ತೇವೆ” ಎಂದು ಎಚ್ಚರಿಕೆ ನೀಡಿದ್ದಾರೆ.
ಭಾರತದಲ್ಲಿ ಅನಧಿಕೃತವಾಗಿ ತುರ್ತುಪರಿಸ್ಥಿತಿ ಘೋಷಿಸಲಾಗಿದೆ ಎಂದಿರುವ ಸಿದ್ದರಾಮಯ್ಯ, “ಇದು ಕೇವಲ ಕಾಂಗ್ರೆಸ್ ಪಕ್ಷ ಇಲ್ಲವೇ ರಾಹುಲ್ ಗಾಂಧಿಯವರಿಗೆ ನೀಡಿರುವ ಬೆದರಿಕೆ ಅಲ್ಲ, ಅನ್ಯಾಯ – ಅಕ್ರಮದ ವಿರುದ್ಧ ದನಿ ಎತ್ತುವ ಎಲ್ಲ ಪ್ರಜಾಪ್ರಭುತ್ವ ಪ್ರೇಮಿಗಳಿಗೆ ಒಡ್ಡಿರುವ ಬೆದರಿಕೆ. ಪಕ್ಷ, ಪಂಥ ಮರೆತು ಎಲ್ಲರೂ ಒಟ್ಟಾಗಿ ಇದರ ವಿರುದ್ಧ ಪ್ರತಿಭಟನೆ ನಡೆಸಬೇಕಾಗಿದೆ” ಎಂದು ಕರೆ ಕೊಟ್ಟಿದ್ದಾರೆ.
“ರಾಹುಲ್ ಗಾಂಧಿಯವರ ವಿರುದ್ಧ ಕೈಗೊಳ್ಳಲಾದ ಕ್ರಮದಿಂದ ಕಾಂಗ್ರೆಸ್ ಪಕ್ಷದ ಲಕ್ಷಾಂತರ ಕಾರ್ಯಕರ್ತರ ಮನಸ್ಸಿಗೆ ನೋವಾಗಿರುವುದು ನಿಜವಾದರೂ, ಈ ಸಂದರ್ಭದಲ್ಲಿ ಸಂಯಮದಿಂದ ವರ್ತಿಸುವುದು ಅಗತ್ಯ. ಯಾರೂ ಕೂಡಾ ಸಿಟ್ಟು-ಆಕ್ರೋಶದ ಕೈಗೆ ಬುದ್ಧಿ ಕೊಡದೆ ಶಾಂತಿಯುತ ಪ್ರತಿಭಟನೆ ನಡೆಸಬೇಕೆಂದು ಕೋರುತ್ತೇನೆ” ಎಂದಿದ್ದಾರೆ.