- ಕೋಲಾರದಿಂದಲೇ ರಾಹುಲ್ ಗಾಂಧಿ ಪ್ರಚಾರ ಆರಂಭ
- ಪ್ರಧಾನಿ ಮೋದಿ ವಿರುದ್ಧ ಸಲೀಂ ಅಹ್ಮದ್ ವಾಗ್ದಾಳಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೋಲಾರಕ್ಕೆ ಆಗಮಿಸುವ ದಿನಾಂಕವನ್ನು ಏಪ್ರಿಲ್ 9ಕ್ಕೆ ಮುಂದೂಡಲಾಗಿದೆ. ‘ಸತ್ಯಮೇವ ಜಯತೇ’ ಸಮಾವೇಶದಲ್ಲಿ ಭಾಗವಹಿಸಲು ಏಪ್ರಿಲ್ 5ರಂದು ರಾಜ್ಯಕ್ಕೆ ಬರಬೇಕಾಗಿತ್ತು.
ಕಾಂಗ್ರೆಸ್ನ ‘ಸತ್ಯಮೇವ ಜಯತೇ’ ಸಮಾವೇಶದಲ್ಲಿ ಪಾಲ್ಗೊಳ್ಳಲು ಏಪ್ರಿಲ್ 5ರಂದು ದಿನಾಂಕ ನಿಗದಿ ಮಾಡಲಾಗಿತ್ತು. ಆದರೆ, ರಾಹುಲ್ ಗಾಂಧಿ ಅವರ ಬರುವಿಕೆ ಏಪ್ರಿಲ್ 9ಕ್ಕೆ ಮುಂದೂಡಲಾಗಿದೆ.
ಈ ಕುರಿತು ಸುದ್ದಿ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, “ರಾಹುಲ್ ಗಾಂಧಿ ಕಾರ್ಯಕ್ರಮವನ್ನು ಏ. 9ಕ್ಕೆ ನಿಗದಿಪಡಿಸಲಾಗಿದೆ. ಇನ್ನುಳಿದ ವಿಚಾರಗಳ ಬಗ್ಗೆ ಸದ್ಯದಲ್ಲೇ ಮಾಹಿತಿ ನೀಡಲಿದ್ದೇವೆ” ಎಂದು ತಿಳಿಸಿದ್ದಾರೆ.
2019ರ ಲೋಕಸಭಾ ಚುನಾವಣೆಯ ವೇಳೆ ರಾಹುಲ್ ಗಾಂಧಿ ಕೋಲಾರದಲ್ಲಿ ಮೋದಿ ಉಪನಾಮದ ಕುರಿತು ಹೇಳಿಕೆ ನೀಡಿ ಈಗ ಎರಡು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ. ಸಂಸತ್ ಸದಸ್ಯ ಸ್ಥಾನದಿಂದಲೂ ಅನರ್ಹಗೊಳಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ವಯನಾಡ್ನಿಂದ ಸ್ಪರ್ಧಿಸಿದ್ದ ರಾಹುಲ್ ಗಾಂಧಿ ಹೆಸರಿನ ಮತ್ತೊಬ್ಬ ಅಭ್ಯರ್ಥಿ ಅನರ್ಹ
ಈ ನಡುವೆ ರಾಹುಲ್ ಗಾಂಧಿ ರಾಜ್ಯ ವಿಧಾನಸಭಾ ಚುನಾವಣೆಗೆ ಕೋಲಾರದಿಂದಲೇ ಪ್ರಚಾರ ಕಾರ್ಯ ಆರಂಭಿಸುತ್ತಿರುವುದು ಕಾಂಗ್ರೆಸ್ಗೆ ಮಹತ್ವದ್ದಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ರಾಮರಾಜ್ಯ ಹೇಳಿಕೆ ಉಲ್ಲೇಖಿಸಿದ ಸಲೀಂ ಅಹ್ಮದ್, “ದೇಶದಲ್ಲಿ ಪ್ರಜಾಪ್ರಭುತ್ವ ಇದೆಯೋ ಇಲ್ಲವೋ ಎಂಬ ಅನುಮಾನ ಮೂಡುತ್ತಿದೆ. ಈ ಹಿಂದೆ ಪ್ರಧಾನಿ ಮೋದಿ ಅವರು ರಾಮರಾಜ್ಯ ಮಾಡುವುದಾಗಿ ಹೇಳಿದ್ದರು. ಆದರೆ, ಈಗ ರಾವಣ ರಾಜ್ಯ ಮಾಡಿದ್ದಾರೆ. ಸ್ವರ್ಗ ತೋರಿಸುವುದಾಗಿ ಹೇಳಿ ನರಕ ತೋರಿಸುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದ್ದಾರೆ.
“ರಾಹುಲ್ ವಿರುದ್ಧ ಬಿಜೆಪಿ ಷಡ್ಯಂತ್ರ ನಡೆಸುತ್ತಿದೆ. ಇದಕ್ಕೆಲ್ಲಾ ಕಾಂಗ್ರೆಸ್ ಹೆದರುವುದಿಲ್ಲ. ಎಲ್ಲಿ ಹೋರಾಟ ಆರಂಭವಾಯಿತೋ ಅಲ್ಲಿಂದ ಮತ್ತೆ ಹೋರಾಟ ಆರಂಭಿಸಲು ಸಮಾವೇಶ ಹಮ್ಮಿಕೊಳ್ಳುತ್ತಿದ್ದೇವೆ” ಎಂದು ತಿಳಿಸಿದ್ದಾರೆ.