- ‘ಹೊರಗುತ್ತಿಗೆ ನೇಮಕ ಎನ್ನುವುದನ್ನು ದಂಧೆ ಆಗಿದೆ’
- ‘3 ರೂ. ಪೂರ್ತಿಯಾಗಿ ನೇರ ರೈತರಿಗೆ ತಲುಪಲಿ’
ಹಾಲು ಒಕ್ಕೂಟಗಳಿಗೆ ಮನಸೋ ಇಚ್ಛೆ ನೇಮಕ ಮಾಡಿಕೊಳ್ಳಬಾರದು. ಹೊರಗುತ್ತಿಗೆ ಎನ್ನುವುದನ್ನು ದಂಧೆ ಮಾಡಿಕೊಳ್ಳಲಾಗಿದೆ. ಇನ್ಮುಂದೆ ಹೊರಗುತ್ತಿಗೆ ನೌಕರರ ನೇಮಕವನ್ನು ಮೀಸಲಾತಿ ಮಾನದಂಡದಲ್ಲಿ ತೆಗೆದುಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.
ಮೈಸೂರು ಜಿಲ್ಲಾ ಪಂಚಾಯಿತಿಯಲ್ಲಿ ಸೋಮವಾರ ನಡೆದ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, “ಒಕ್ಕೂಟಗಳಲ್ಲಿ ಅನಗತ್ಯವಾಗಿ ಬಹಳಷ್ಟು ಮಂದಿಯನ್ನು ನೇಮಕ ಮಾಡಿಕೊಂಡಿದ್ದೀರಿ. ಒಕ್ಕೂಟದ ನಿರ್ದೇಶಕರೋ, ಶಾಸಕರೋ ಹೇಳಿದರೆಂದು ನೇಮಕ ಮಾಡಿಕೊಳ್ಳುತ್ತೀರಿ. ತೊಂದರೆ ಅನುಭವಿಸುತ್ತಿದ್ದೀರಿ. ಮಂಜೂರಾತಿಯನ್ನೇ ಜಾಸ್ತಿ ಮಾಡಿಕೊಳ್ಳುತ್ತೀರಿ. ಇದರಿಂದ ನಿಮಗೆ ನಷ್ಟವಾಗುತ್ತಿದೆ” ಎಂದು ತರಾಟೆಗೆ ತೆಗೆದುಕೊಂಡರು.
“ಪಶುಪಾಲಕರಿಗೆ ಅನುಕೂಲ ಆಗಲಿ ಎನ್ನುವ ಕಾರಣದಿಂದ ನಂದಿನಿ ಹಾಲಿನ ದರವನ್ನು 3 ರೂ. ಹೆಚ್ಚಿಸಿದೆವು. ಆ 3 ರೂ. ಪೂರ್ತಿಯಾಗಿ ನೇರ ರೈತರಿಗೆ ತಲುಪಬೇಕು. ರೈತರಿಗೆ 3ರೂ ಹೆಚ್ಚುವರಿವಾಗಿ ಸಿಕ್ಕ ಮೇಲೆ ನಂದಿನಿಗೆ ಬರುವ ಹಾಲಿನ ಪ್ರಮಾಣ ಹೆಚ್ಚಾಗಿದೆ. ಈಗ ಹಾಲು ಒಕ್ಕೂಟಗಳು ಲಾಭ ಮಾಡಿಕೊಳ್ಳಬೇಕು. ಆ ಲಾಭ ರೈತರಿಗೆ ಸೇರಬೇಕು” ಎಂದು ಸೂಚಿಸಿದರು.
“ಕುರಿ ಮತ್ತು ಹಸು ಹಾಗೂ ಎತ್ತುಗಳು ಮೃತಪಟ್ಟಾಗ ಪರಿಹಾರ ಒದಗಿಸಬೇಕು. ಅಗತ್ಯ ಹಣವನ್ನು ಸರ್ಕಾರಕ್ಕೆ ಕೇಳಿ. ರಾಸುಗಳಿಗೆ ಅಗತ್ಯ ಔಷಧಗಳನ್ನು ಸಂಗ್ರಹಿಸಿಟ್ಟುಕೊಳ್ಳಬೇಕು. ಸಂಭಾವ್ಯ ಕಾಯಿಲೆಗಳಿಗೆ ಔಷಧಿ ರೆಡಿ ಇಟ್ಟುಕೊಂಡಿರಬೇಕು. ರೈತರಿಗೆ ಒಮ್ಮೆ ಬೀಜಗಳನ್ನು ಒದಗಿಸಿಬಿಟ್ಟರೆ ತಮ್ಮ ಜವಾಬ್ದಾರಿ ಮುಗಿಯಿತು ಎಂದು ಕೃಷಿ ಅಧಿಕಾರಿಗಳು ಕೈಕಟ್ಟಿ ಕುಳಿತುಕೊಳ್ಳಬಾರದು. ಯಾವುದೇ ಕಾರಣದಿಂದ ಬೆಳೆ ನಷ್ಟವಾದರೆ ಮತ್ತೊಂದು ಸುತ್ತು ಬೀಜ ವಿತರಣೆ ಮಾಡಬೇಕು. ಇಡೀ ಜಿಲ್ಲೆಯಲ್ಲಿ ಎಲ್ಲೇ ಬೀಜ-ಗೊಬ್ಬರದ ಕೊರತೆ ಬಗ್ಗೆ ದೂರು ಬಂದರೆ ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದರು.
ರೈತರ ಮಾತುಗಳಿಗೆ ಗಮನಕೊಡಿ
“ಹಳ್ಳಿಗಳಿಗೆ ಹೋಗಿ ರೈತರ ಸಮಸ್ಯೆಗಳನ್ನು ಸಮಾಧಾನದಿಂದ ಕೇಳಿಸಿಕೊಳ್ಳಬೇಕು. ಬಳಿಕ ಸಮಸ್ಯೆ ಪರಿಹಾರ ಮಾಡಬೇಕು. ರೈತರ ಜತೆ ಗೌರವಯುತವಾಗಿ ನಡೆದುಕೊಳ್ಳಬೇಕು. ಕಚೇರಿಗೆ ಬರುವ ರೈತರ ಜತೆ ಆರೋಗ್ಯಕರವಾದ ನಡವಳಿಕೆ ಇಟ್ಟುಕೊಳ್ಳಬೇಕು. ರೈತ ಸಂಪರ್ಕ ಕೇಂದ್ರಗಳು ಇರುವುದೇ ರೈತರಿಗೆ ಮಾಹಿತಿ ಕೊಟ್ಟು ಸಹಕಾರ ಕೊಡುವುದಕ್ಕೆ. ರೈತರ ಮಾತುಗಳಿಗೆ ಗಮನಕೊಡಿ” ಎಂದರು.
“ಮಳೆ ಇಲ್ಲದೆ ರೈತರು ಸಂಕಷ್ಟದಲ್ಲಿದ್ದಾರೆ. ಕೃಷಿ ಅಧಿಕಾರಿಗಳು ಅವರಿಗೆ ಮಾನವೀಯವಾಗಿ ಸ್ಪಂದಿಸಬೇಕು. ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಉದಾರವಾಗಿ ವರ್ತಿಸಿ. ಸರ್ಕಾರ ಹಣ ಕೊಡುತ್ತದೆ. ತಡ ಮಾಡದೆ ಪರಿಹಾರ ಅವರಿಗೆ ತಲುಪಬೇಕು. ಅನಗತ್ಯ ತಡ ಮಾಡಬಾರದು” ಎಂದು ಜಿಲ್ಲಾಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಈ ಸುದ್ದಿ ಓದಿದ್ದೀರಾ? ಕಾಂಗ್ರೆಸ್ ಸಿದ್ಧಾಂತ ಒಪ್ಪಿಕೊಂಡು ಯಾರು ಬರುತ್ತಾರೋ ಬರಲಿ: ಮುಕ್ತ ಆಹ್ವಾನ ನೀಡಿದ ಸಿಎಂ ಸಿದ್ದರಾಮಯ್ಯ
ಇಲಾಖೆಗಳ ನಡುವೆ ಹೊಂದಾಣಿಕೆ ಇರಲಿ
“ಇಲಾಖೆಗಳ ನಡುವೆ ಹೊಂದಾಣಿಕೆ ಇರಬೇಕು. ಬಹಳಷ್ಟು ಇಲಾಖೆಗಳ ನಡುವೆ ಅಂತರ್ ಸಂಬಂಧ ಇರುತ್ತದೆ. ಹೀಗಾಗಿ ಪರಸ್ಪರ ಹೊಂದಾಣಿಕೆಯಿಂದ ಸಮಸ್ಯೆಗಳನ್ನು ಗುರುತಿಸಿ, ಪರಿಹಾರ ಕಂಡುಕೊಳ್ಳಬೇಕು. ಜಿಲ್ಲಾಧಿಕಾರಿಗಳು ಎಲ್ಲಾ ಇಲಾಖೆಗಳ ನಡುವೆ ಹೊಂದಾಣಿಕೆಯಿಂದ ತೀರ್ಮಾನ ತೆಗೆದುಕೊಳ್ಳುವಂತೆ ನೋಡಿಕೊಳ್ಳಬೇಕು. ನಾನು ಕೆಡಿಪಿ ಸಭೆ ಕರೆದಾಗ ರಾಜ್ಯ ಮಟ್ಟದ ಅಧಿಕಾರಿಗಳೂ ಸಭೆಗೆ ಬರಬೇಕು. ಸಭೆಗೆ ಆಹ್ವಾನ ಹೋದರೂ ಬರದಿದ್ದರೆ ಅಂತಹ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು” ಎಂದರು.
ರೈತರ ಹಿತ ಕಾಪಾಡುತ್ತೇವೆ
“ನಮ್ಮ ರೈತರಿಗೆ ಅನ್ಯಾಯ ಮಾಡಿ ಕಾವೇರಿ ನೀರನ್ನು ತಮಿಳುನಾಡಿಗೆ ನೀರು ಕೊಡಬೇಕು ಎನ್ನುವ ಸೂಚನೆ ಯಾವ ಆದೇಶದಲ್ಲೂ ಇಲ್ಲ. ನಮ್ಮ ಬೆಳೆ ಮತ್ತು ಕುಡಿಯುವ ನೀರಿನ ರಕ್ಷಣೆ ಮಾಡಿಕೊಳ್ಳಬೇಕು. ಸಂಕಷ್ಟ ಪರಿಹಾರ ಸೂತ್ರ ಇನ್ನೂ ಸಿದ್ದಗೊಳ್ಳಬೇಕಿದೆ. ಕುಡಿಯುವ ನೀರಿಗೆ ಮತ್ತು ಕೃಷಿಗೆ ಅಗತ್ಯವಾದ ನೀರಿನ ಪ್ರಮಾಣ ಎಷ್ಟು? ನಮ್ಮಲ್ಲಿ ಸಂಗ್ರಹದಲ್ಲಿರುವ ನೀರಿನ ಪ್ರಮಾಣ ಎಷ್ಟು ಎನ್ನುವ ಕುರಿತಾಗಿ ವೈಜ್ಞಾನಿಕ ತಿಳಿವಳಿಕೆ ಮತ್ತು ಮಾಹಿತಿ ಸಿದ್ದವಿಟ್ಟುಕೊಂಡು ನಮ್ಮ ರೈತರ ಹಿತ ಕಾಪಾಡುವುದೇ ನಮ್ಮ ಮೊದಲ ಆದ್ಯತೆ” ಎಂದು ಹೇಳಿದರು.