- ರಾಜ್ಯಪಾಲರ ಭೇಟಿಗೆ ಸಮಯಾವಕಾಶ ಕೇಳಿದ ಕಾಂಗ್ರೆಸ್
- ಪ್ರತಿಭಟನೆಯಲ್ಲಿ ದಲಿತ ಸಂಘಟನೆಗಳು ಪಾಲ್ಗೊಳ್ಳಲು ಮನವಿ
ಪರಿಶಿಷ್ಟರ ಮೀಸಲಾತಿ ಹೆಚ್ಚಳ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸದೇ ಮೋಸ ಮಾಡಲು ಹೊರಟ ರಾಜ್ಯ ಬಿಜೆಪಿ ಸರ್ಕಾರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಂಡಿದೆ.
ಶುಕ್ರವಾರ ಬೆಳಿಗ್ಗೆ 10 ರಾಜಭವನದ ಎದುರು ಪ್ರತಿಭಟನೆ ನಡೆಸಲಿರುವ ಕಾಂಗ್ರೆಸ್ ನಾಯಕರು ಮೀಸಲಾತಿ ವಿಚಾರದಲ್ಲಿ ಸಮುದಾಯಗಳ ಮೂಗಿಗೆ ತುಪ್ಪ ಸವರಿದ ಸರ್ಕಾರದ ಧೋರಣೆಯ ವಿರುದ್ಧ ಆಕ್ರೋಶ ಹೊರ ಹಾಕಲಿದೆ.
ನಾಳಿನ ಪ್ರತಿಭಟನೆ ವಿಚಾರವಾಗಿ ಮಾಹಿತಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, “ಸಂವಿಧಾನದ 9ನೇ ಶೆಡ್ಯೂಲ್ನಲ್ಲಿ ಮೀಸಲಾತಿ ಹೆಚ್ಚಳದ ವಿಷಯ ಸೇರಿಸದೆ, ಬಿಜೆಪಿ ಸರ್ಕಾರ ಕೊಟ್ಟ ಮಾತಿಗೆ ವಿರುದ್ಧವಾಗಿ ನಡೆದುಕೊಂಡಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರದ ಸಮುದಾಯ ವಿರೋಧಿ ನೀತಿ ಬಗ್ಗೆ ರಾಜ್ಯಪಾಲರ ಗಮನ ಸೆಳೆಯಲು ಪಕ್ಷ ಪ್ರಮುಖರು ನಿರ್ಧರಿಸಿದ್ದೇವೆ. ಇದಕ್ಕಾಗಿ ರಾಜ್ಯಪಾಲರ ಬಳಿ ಸಮಯಾವಕಾಶ ಕೇಳುತ್ತಿದ್ದೇವೆ ಎಂದ ಶಿವಕುಮಾರ್, ಪ್ರತಿಭಟನೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ನಾಯಕರು ಹಾಗೂ ಬೇರೆ ಸಮುದಾಯದ ನಾಯಕರುಗಳು ಭಾಗವಹಿಸಬೇಕೆಂದು ಮನವಿ ಮಾಡಿದರು.
ಜನರನ್ನು ನಂಬಿಸಿ ಮೋಸ ಮಾಡಿರುವ ಈ ಸರ್ಕಾರಕ್ಕೆ ಅಧಿಕಾರದಲ್ಲಿ ಮುಂದುವರಿಯಲು ಯಾವುದೇ ನೈತಿಕತೆ ಇಲ್ಲ. ಹೀಗಾಗಿ ರಾಜ್ಯಪಾಲರು ಈ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಡಿ.ಕೆ ಶಿವಕುಮಾರ್ ಇದೇ ವೇಳೆ ಆಗ್ರಹಿಸಿದರು.