“ನರೇಂದ್ರ ಮೋದಿ ಅವರು ದುರ್ಬಲ ಪ್ರಧಾನಮಂತ್ರಿ, ನಾನು ಪ್ರಬಲ ಸಿಎಂ ಎಂದು ಕೊಚ್ಚಿಕೊಂಡ ಸಿದ್ದರಾಮಯ್ಯ ಅವರ ಗರ್ವಭಂಗ ಈ ಲೋಕಸಭೆ ಚುನಾವಣೆಯಲ್ಲಿ ಆಗಬೇಕು” ಎಂದು ಮಾಜಿ ಪ್ರಧಾನಿಗಳು, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್ ಡಿ ದೇವೇಗೌಡರು ಗುಡುಗಿದರು.
ಬೆಂಗಳೂರಿನಲ್ಲಿ ನಡೆದ ಜೆಡಿಎಸ್ – ಬಿಜೆಪಿ ಸಮನ್ವಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, “ನರೇಂದ್ರ ಮೋದಿಯಂತಹ ಜಗಮೆಚ್ಚಿದ ನಾಯಕರ ಬಗ್ಗೆ ಲಘುವಾಗಿ ಮಾತನಾಡಿರುವ ಸಿದ್ದರಾಮಯ್ಯ ಅವರಿಗೆ ಈ ಚುನಾವಣೆಯಲ್ಲಿ ಪಾಠ ಕಲಿಸಬೇಕು” ಎಂದರು.
“ಮೈಸೂರು ಚಾಮರಾಜನಗರ ಕ್ಷೇತ್ರ ಗೆಲ್ಲುವ ಶಕ್ತಿ ಜಿ.ಟಿ.ದೇವೇಗೌಡರಿಗೆ ಇದೆ. ಸಿದ್ದರಾಮಯ್ಯ ಅವರ ಗರ್ವಭಂಗ ಆಗಲೇಬೇಕು. ಅವರ ಗರ್ವಭಂಗ ಆಗಬೇಕಾದರೆ ನಾವೆಲ್ಲರೂ ಛಲದಿಂದ ಒಟ್ಟಾಗಿ ಹೋಗಬೇಕು” ಎಂದು ವೇದಿಕೆಯಲ್ಲೇ ಜಿ ಟಿ ದೇವೇಗೌಡರಿಗೆ ಹೇಳಿದರು.
“ಮೈತ್ರಿಯಲ್ಲಿ ಎಲ್ಲಿಯೂ ಒಂದು ಸಣ್ಣ ಸಮಸ್ಯೆಯೂ ಕಾಣಿಸಿಕೊಳ್ಳಬಾರದು. ಒಬ್ಬ ಸಾಮಾನ್ಯ ಕಾರ್ಯಕರ್ತನನ್ನೂ ಬಿಡದೇ ಹೋರಾಟ ಮಾಡೋಣ. ಒಂದು ರಾಜ್ಯದ ಸಿಎಂ ಗಟ್ಟಿಯಾಗಿರಬೇಕಂತೆ, ದೇಶದ ಪ್ರಧಾನಿ ಬಹಳ ವೀಕ್ ಅಂತೆ.. ಅಬ್ಬಾ..! ಪ್ರಧಾನಿ ವಿರುದ್ಧವೇ ಕೋರ್ಟಿಗೆ ಹೋಗಿದ್ದಾರೆ. ಎಂಥಾ ಜನ ಇವರು” ಎಂದು ದೇವೇಗೌಡರು ಕಿಡಿಕಾರಿದರು.
ಮನಮೋಹನ್ ಸಿಂಗ್ NO ಎಂದರು
“ರೈತರ ಸಾಲದ ಮೇಲೆ ಬಡ್ಡಿ ಮನ್ನ ಮಾಡಿ ಎಂದು ಕೇಳಿದರೆ, ಮನಮೋಹನ್ ಸಿಂಗ್ ಅವರು NO ಎಂದರು. ಇದೆಲ್ಲಾ ಗೊತ್ತಿದ್ದರೂ ಸಿದ್ದರಾಮಯ್ಯ ಅವರೇ ಕೋರ್ಟಿಗೆ ಅರ್ಜಿ ಹಾಕ್ತೀರಾ? ಸ್ಟ್ರಾಂಗೆಸ್ಟ್ ಮುಖ್ಯಮಂತ್ರಿ, ವೀಕೆಸ್ಟ್ ಪ್ರಧಾನಮಂತ್ರಿ! ಇಂತಹ ಮುಖ್ಯಮಂತ್ರಿ ನಮ್ಮ ರಾಜ್ಯದಲ್ಲಿದ್ದಾರೆ. ಆ ಮಹಾನುಭಾವರಿಗೆ, ನಮೋ ನಮಃ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಈ ಸುದ್ದಿ ಓದಿದ್ದೀರಾ? ಜೆಡಿಎಸ್ ಪಕ್ಷ ಅಸ್ತಿತ್ವದಲ್ಲಿಲ್ಲ ಎಂದು ಅವರೇ ಸಾಬೀತುಪಡಿಸಿದ್ದಾರೆ: ಡಿ ಕೆ ಶಿವಕುಮಾರ್
“ಸಿದ್ದರಾಮಯ್ಯನವರು ಜೆಡಿಎಸ್ ಎಲ್ಲಿದೆ ಅಂತಾರೆ. ಅವರಿಗೆ ಅಧಿಕಾರದ ಮದ. ಆ ಮದ ಇಳಿಸುವ ಸಾಮರ್ಥ್ಯ 91ನೇ ವರ್ಷದ ಈ ದೇವೇಗೌಡನಿಗಿದೆ. ಯಾರ ಭಯಕ್ಕೂ ನಾನು ಅಂಜುವವನಲ್ಲ. ಆ ಭಯ ಅನ್ನೋದೇ ನನಗಿಲ್ಲ” ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ದೇವೇಗೌಡರು ಗುಡುಗಿದರು.
“ನನ್ನ ತಲೆ ಎನ್ಸೈಕ್ಲೋಪೀಡಿಯಾ. ಯಾವಾಗ, ಏನೆಲ್ಲಾ ಘಟನೆ ನಡೆದಿದೆ ಎಲ್ಲವನ್ನೂ ಹೇಳಬಲ್ಲೆ. ಯಡಿಯೂರಪ್ಪ ಅವರೇ ನನಗೆ ಎಲ್ಲಾ ಗೊತ್ತು ಎಂದ ಅವರು; ತುಮಕೂರಿಗೆ ಕಳಿಸಿ, ನನ್ನನ್ನೇ ಸೋಲಿಸಿದರು. ಕಾಂಗ್ರೆಸ್ ನವರು ಏನು ಮಾಡಿದರು ಎನ್ನುವುದು ಗೊತ್ತಿದೆ” ಎಂದರು.
ಎಐಸಿಸಿಗೆ ಹಣ ಸಂದಾಯವಾಗುತ್ತಿದೆ
“ಕಾಂಗ್ರೆಸ್ ರಾಜ್ಯವನ್ನು ಕೊಳ್ಳೆ ಹೊಡೆಯುತ್ತಿದೆ ಎಂದು ಆರೋಪ ಮಾಡಿದ ದೇವೇಗೌಡರು, “28 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಹಣ ಬಲವನ್ನು ನಾವು ಎದುರಿಸಬೇಕಿದೆ. ಹೊರ ರಾಜ್ಯಗಳಿಗೂ ಕಾಂಗ್ರೆಸ್ ನವರು ಹಣ ಸರಬರಾಜು ಮಾಡ್ತಿದ್ದಾರೆ. ರಾಜಸ್ಥಾನ, ತೆಲಂಗಾಣ ಸೇರಿದಂತೆ ಹಲವಾರು ರಾಜ್ಯಗಳಲ್ಲಿ ಕಾಂಗ್ರೆಸ್ ಸರ್ಕಾರ ಇದೆ. ಅಲ್ಲಿಗೆಲ್ಲ ರಾಜ್ಯದ ಹಣ ಹೋಗುತ್ತಿದೆ. ಕರ್ನಾಟಕದಿಂದ ಎಐಸಿಸಿಗೆ ಹಣ ಸಂದಾಯವಾಗುತ್ತಿದೆ” ಎಂದು ಆರೋಪ ಮಾಡಿದರು.