ಕಳೆದ 20 ವರ್ಷಗಳಲ್ಲಿ ಪ್ರವಾಹ ಹಾಗೂ ಬರಗಾಲವನ್ನು ನಾವು ಎದುರಿಸುತ್ತಿದ್ದು, ಈ ಬಗ್ಗೆ ವೈಜ್ಞಾನಿಕ ಕಾರಣ ತಿಳಿಯಲು ಸಂಶೋಧನೆಗಳ ಅಗತ್ಯವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ‘ಭೂ ಪರಿವರ್ತನೆ ಮತ್ತು ಒಣಭೂಮಿ ನಿರ್ವಹಣೆ’ ಕಾರ್ಯಕ್ರಮ ಉದ್ಘಾಟಿಸಿ, ರಾಜ್ಯ ಪರಿಸರ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಮಾತನಾಡಿದರು.
“ಸಂಶೋಧನೆಗಳು ಸರಿಯಾದ ದಾರಿಯಲ್ಲಿ ನಡೆಯಬೇಕು ಹಾಗೂ ಸಂಶೋಧನಾ ಕೇಂದ್ರಗಳೂ ಹೆಚ್ಚಾಗಬೇಕು. ಯಾವ ಭಾಗದಲ್ಲಿ ಯಾವ ರೀತಿ ಸಂಶೋಧನಾ ಕೇಂದ್ರಗಳನ್ನು ಸ್ಥಾಪಿಸಬೇಕೆನ್ನುವ ನಿಟ್ಟಿನಲ್ಲಿ ಅರಣ್ಯ ಇಲಾಖೆ ಗಮನ ಹರಿಸಬೇಕು” ಎಂದು ಸಿಎಂ ಸೂಚಿಸಿದರು.
“ಪ್ರತಿಯೊಬ್ಬರೂ ನಿಸರ್ಗವನ್ನು ಪ್ರೀತಿಸಿ ರಕ್ಷಿಸಬೇಕು. ಇದೊಂದು ಕಷ್ಟದ ಕೆಲಸವೇನಲ್ಲ ಆದರೆ ಎಲ್ಲರೂ ಮನಸ್ಸು ಮಾಡಬೇಕು. ಪ್ರತಿದಿನವೂ ಪರಿಸರ ದಿನವನ್ನಾಗಿ ಆಚರಿಸುವ ಪ್ರವೃತ್ತಿ ಅಗತ್ಯ. ತಾಜ್ಯಗಳ ಸೂಕ್ತ ವಿಲೇವಾರಿ, ಮಳೆ ನೀರು ಕೊಯ್ಲು ಮುಂತಾದ ಪದ್ದತಿಗಳನ್ನು ಅಳವಡಿಸಿಕೊಳ್ಳಬೇಕು. ಇದರಿಂದ ನಮ್ಮ ಆರೋಗ್ಯವನ್ನೂ ಕಾಪಾಡಿಕೊಳ್ಳಲು ಅನುಕೂಲ. ಎಲ್ಲರೂ ಪರಿಸರ ಪ್ರೇಮಿಗಳಾಗಿ ನೈರ್ಮಲ್ಯ ಕಾಪಾಡಿಕೊಳ್ಳೋಣ” ಎಂದರು.
“ಪ್ರತಿಯೊಬ್ಬರೂ ಪಾಲ್ಗೊಂಡರೆ ಮಾತ್ರ ಪರಿಸರವನ್ನು ಸಂರಕ್ಷಣೆ ಮಾಡಲು ಸಾಧ್ಯ. ಸರ್ಕಾರ ಮತ್ತು ಸಾರ್ವಜನಿಕರು ಒಟ್ಟಾಗಿ ಈ ನಿಟ್ಟಿನಲ್ಲಿ ಕೈಜೋಡಿಸಬೇಕು. ವಿದ್ಯಾರ್ಥಿ ದೆಸೆಯಿಂದಲೇ ಪರಿಸರ ಸಂರಕ್ಷಣೆಯ ಲಾಭಗಳೇನು ಎಂದು ತಿಳಿಸಿ ವಿದ್ಯಾರ್ಥಿಗಳು ಪರಿಸರ, ಕಾಡು, ಜನಜೀವನ, ಪ್ರಾಣಿ ಸಂಕುಲಗಳ ಬಗ್ಗೆ ಅರಿತುಕೊಳ್ಳಬೇಕು. ಮನುಷ್ಯರು ಬದುಕುವಂತೆ ಪ್ರಾಣಿ ಸಂಕುಲಕ್ಕೂ ಬದುಕುವ ಹಕ್ಕಿದೆ. ಅದನ್ನು ಸಂರಕ್ಷಿಸುವ ಜವಾಬ್ದಾರಿ ಎಲ್ಲರ ಮೇಲಿದೆ” ಎಂದು ಹೇಳಿದರು.
“ಆರೋಗ್ಯಕ್ಕೂ ನೈರ್ಮಲ್ಯಕ್ಕೂ ನೇರ ಸಂಬಂಧವಿದೆ. ಸ್ವಚ್ಛತೆ ಇದ್ದಾಗ ಮಾತ್ರ ಸಮಾಜದ ಸ್ವಾಸ್ಥ್ಯ ಕಾಪಾಡಲು ಸಾಧ್ಯ. ಶುದ್ಧ ಕುಡಿಯುವ ನೀರು ಸರಬರಾಜು ಸರ್ಕಾರದ ಕರ್ತವ್ಯ. ಇತ್ತೀಚೆಗೆ ಕಲುಷಿತ ನೀರಿನಿಂದಾಗಿರುವ ಅನಾಹುತಗಳನ್ನು ನಾವು ನೋಡಿದ್ದೇವೆ. ಅನೇಕರು ಸಾವಿಗೀಡಾಗಿದ್ದು, ಕಾಯಿಲೆಗಳಿಗೂ ಒಳಗಾಗಿದ್ದಾರೆ. ಶುದ್ಧ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯವಾದರೆ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಜರುಗಿಸಲಾಗುವುದು” ಎಂದು ಎಚ್ಚರಿಕೆ ನೀಡಿದರು.
ಡೆಂಘೀ ನಿಯಂತ್ರಣಕ್ಕೆ ಸಾರ್ವಜನಿಕರೂ ಕೈಜೋಡಿಸಬೇಕು
“ಇತ್ತೀಚೆಗೆ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿದ್ದು ಇದರ ನಿಯಂತ್ರಣಕ್ಕೆ ನಗರಪಾಲಿಕೆ, ಆರೋಗ್ಯ ಇಲಾಖೆ, ಪೌರಾಡಳಿತ ಇಲಾಖೆಗಳ ಒಟ್ಟಾಗಿ ಕಾರ್ಯನಿರ್ವಹಿಸುತ್ತಿವೆ. ಸಾರ್ವಜನಿಕರೂ ಕೈಜೋಡಿಸಿದಾಗ ಮಾತ್ರ ಇದರ ನಿರ್ಮೂಲನೆ ಸಾಧ್ಯ” ಎಂದರು.
