- ಏತ ನೀರಾವರಿ ಯೋಜನೆಗಳಿಂದ ರಾಜ್ಯದ 164 ತಾಲ್ಲೂಕುಗಳಲ್ಲಿ ಅಂತರ್ಜಲ ಮಟ್ಟ ಏರಿಕೆ
- ಬರದ ಪರಿಸ್ಥಿತಿಯಲ್ಲಿ ಕೈಗೊಂಡಿದ್ದ ನೀರಾವರಿ ಗಣತಿಯಲ್ಲಿ ಹೆಚ್ಚಿನ ಸಾಧನೆ ಗೋಚರವಾಗಿಲ್ಲ
- ಚಂದ್ರಯಾನ–3ರ ಸಫಲತೆ, ರಾಜ್ಯ ಸರ್ಕಾರದಿಂದ ವಿಜ್ಞಾನಿಗಳಿಗೆ ಸನ್ಮಾನ ಕಾರ್ಯಕ್ರಮ
ಬರ ಪರಿಸ್ಥಿತಿಯನ್ನು ಸಮಪರ್ಕವಾಗಿ ನಿಭಾಯಿಸುವ ನಿಟ್ಟಿನಲ್ಲಿ ಸಣ್ಣ ನೀರಾವರಿ ಇಲಾಖೆಯ ವತಿಯಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೆ.ಸಿ ವ್ಯಾಲಿ ಮತ್ತು ಹೆಚ್.ಎನ್ ವ್ಯಾಲಿಯಂತಹ ಯೋಜನೆಗಳಿಂದ ರಾಜ್ಯದ ಬಯಲು ಸೀಮೆಯ 164 ತಾಲ್ಲೂಕುಗಳಲ್ಲಿ ಅಂತರ್ಜಲ ಮಟ್ಟ ಗಣನೀಯವಾಗಿ ಏರಿಕೆಯಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್ ಎಸ್ ಬೋಸರಾಜು ತಿಳಿಸಿದರು.
ವಿಕಾಸಸೌಧದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಇತ್ತೀಚೆಗೆ ಪ್ರಕಟವಾಗಿರುವ ಕೇಂದ್ರ ಸರ್ಕಾರದ 6ನೇ ನೀರಾವರಿ ಗಣತಿಯ ಕುರಿತು 2017-18 ರಲ್ಲಿ ಸಮೀಕ್ಷೆ ನಡೆಸಲಾಗಿದೆ. ಆ ವರ್ಷದಲ್ಲಿ ರಾಜ್ಯದಲ್ಲಿ ಮಳೆ ಕಡಿಮೆಯಾಗಿದ್ದು, ಬರದ ಪರಿಸ್ಥಿತಿ ಇತ್ತು. ನಂತರದ ವರ್ಷಗಳಲ್ಲಿ ರಾಜ್ಯಾದ್ಯಂತ ಕೈಗೊಂಡಿರುವ ಕೆರೆಗಳನ್ನು ತುಂಬುವ ಏತ ನೀರಾವರಿಯ ಯೋಜನೆಗಳಿಂದಾಗಿ ಅಂತರ್ಜಲ ಮಟ್ಟದಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ” ಎಂದರು.
“ಅಂತರ್ಜಲ ಅಭಿವೃದ್ದಿಗೊಳಿಸುವ ನಿಟ್ಟಿನಲ್ಲಿ 700 ಕೆರೆಗಳನ್ನು ನದಿಗಳಿಂದ, ಕಾಲುವೆಗಳಿಂದ ಹಾಗೂ ಬೆಂಗಳೂರು ನಗರದಲ್ಲಿ ಲಭ್ಯವಿರುವ ಎರಡನೇ ಹಂತದ ಸಂಸ್ಕರಿಸಿದ ನೀರನ್ನು ಬಳಸಿ ತುಂಬಿಸಲು ಕ್ರಮವಹಿಸಲಾಗಿದೆ. ಇವುಗಳಲ್ಲಿ ಕೆ.ಸಿ ವ್ಯಾಲಿ ಮತ್ತು ಹೆಚ್.ಎನ್ ವ್ಯಾಲಿ ಏತ ನೀರಾವರಿ ಯೋಜನೆಗಳು ಪ್ರಮುಖವಾದವುಗಳು. ಇದಲ್ಲದೇ ರಾಜ್ಯಾದ್ಯಂತ ಕೈಗೊಂಡಿರುವ ಹಲವಾರು ಯೋಜನೆಗಳ ಹಿನ್ನಲೆಯಲ್ಲಿ ರಾಜ್ಯದ 164 ತಾಲ್ಲೂಕುಗಳಲ್ಲಿ ಅಂತರ್ಜಲ ಪ್ರಮಾಣ ಏರಿಕೆಯಾಗಿದೆ (ಜುಲೈ 2023 ರ ಅಂಕಿ ಅಂಶ). ಮಲೆನಾಡಿನ ತಾಲ್ಲೂಕುಗಳಿಗೆ ಹೋಲಿಸಿದಲ್ಲಿ ಬಯಲು ಸೀಮೆಯ ತಾಲ್ಲೂಕುಗಳಲ್ಲಿ ಅಂತರ್ಜಲ ಹೆಚ್ಚಾಗಿದೆ” ಎಂದು ವಿವರಿಸಿದರು.
7ನೇ ಸಣ್ಣ ನೀರಾವರಿ ಗಣತಿ
“2022 -23ನೇ ಉಲ್ಲೇಖಿತ ವರ್ಷವನ್ನಾಧರಿಸಿ ಕೇಂದ್ರ ಸರ್ಕಾರದ 7ನೇ ಸಣ್ಣ ನೀರಾವರಿ ಗಣತಿ ಕಾರ್ಯವು ಸದ್ಯದಲ್ಲೇ ಪ್ರಾರಂಭವಾಗಲಿದೆ. 2017–18 ಸಾಲಿನ ನಂತರದ ಸಣ್ಣ ನೀರಾವರಿ ಯೋಜನೆಗಳ ಸಾಧನೆ 7 ನೇ ನೀರಾವರಿ ಗಣತಿಯಲ್ಲಿ ಪರಿಗಣಿಸಲ್ಪಡುತ್ತವೆ. ಹಾಗೂ ರಾಜ್ಯದ ಉತ್ತಮ ಸಾಧನೆ ಇಲ್ಲಿ ಪ್ರತಿಫಲವಾಗುವ ನಿರೀಕ್ಷೆಯಿದೆ” ಎಂದು ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ಬಿಜೆಪಿಯ ಪೊಳ್ಳು ಆಡಳಿತ, ಕಣ್ಕಟ್ಟಿನ ತಂತ್ರ ಮುಂದುವರಿಯಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ
ಬರ ಪರಿಸ್ಥಿತಿ ನಿರ್ವಹಣೆಗಾಗಿ ಇಲಾಖೆ ಸಜ್ಜು
“ನೀರಾವರಿ ಇಲಾಖೆಯ ವ್ಯಾಪ್ತಿಯಲ್ಲಿ 3,673 ಕೆರೆಗಳಿವೆ. ಏತ ನೀರಾವರಿ ಯೋಜನೆಗಳ ಮೂಲಕ ಇವುಗಳನ್ನು ತುಂಬಿಸುವ ಕಾರ್ಯ ನಡೆಯುತ್ತದೆ. ಈ ಬಾರಿ ಕಡಿಮೆ ಮಳೆಯಾಗಿರುವ ಹಿನ್ನಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕೆರೆಗಳಲ್ಲಿ ನೀರು ತುಂಬಿಲ್ಲ. ಅಂಕಿ ಅಂಶಗಳನ್ನು ಪರಿಗಣಿಸಿದಲ್ಲಿ ಶೇಕಡಾ 30 ಕ್ಕೂ ಕಡಿಮೆ ನೀರು ಶೇಖರಣೆ ಇರುವ ಕೆರೆಗಳ ಸಂಖ್ಯೆ 334. ಇದರ ಶೇಕಡಾವಾರು ಗಮನಿಸಿದಲ್ಲಿ ಇದು ಕೇವಲ ಶೇ.9. ಆಗಸ್ಟ್ 24 ರಂದು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳ ವಿಸ್ತೃತ ಸಭೆಯನ್ನು ನಡೆಸಿ ವಸ್ತುಸ್ಥಿತಿಯ ಮಾಹಿತಿ ಪಡೆದುಕೊಂಡಿದ್ದೇನೆ” ಎಂದು ಹೇಳಿದರು.
“ಪಿಎಂಕೆಎಸ್ವೈ ಮತ್ತು ಅಟಲ್ ಭೂಜಲ ಯೋಜನೆಯ ಅಡಿಯಲ್ಲಿ ಕೇಂದ್ರ ಸರಕಾರಕ್ಕೆ ಅಗತ್ಯ ಪ್ರಸ್ತಾವನೆಗಳನ್ನು ಸಲ್ಲಿಸಲಾಗಿದೆ. ಪಿಎಂಕೆಎಸ್ವೈ ಯೋಜನೆಯ ಅಡಿಯಲ್ಲಿ ಕೇಂದ್ರ ಸರಕಾರ ಶೇಕಡಾ 60 ರಷ್ಟು ರಾಜ್ಯ ಸರಕಾರ ಶೇ.40 ರಷ್ಟು ಅನುದಾನ ನೀಡುವ ಯೋಜನೆಯ ಅಡಿಯಲ್ಲಿ ಕೇಂದ್ರ ಸರಕಾರ 439 ಕೋಟಿ ರೂಪಾಯಿಗಳ 138 ಕಾಮಗಾರಿಗಳಿಗೆ ಒಪ್ಪಿಗೆ ನೀಡಿದ್ದು, ಇನ್ನೂ 1892 ಕೋಟಿ ರೂಪಾಯಿಗಳ ವೆಚ್ಚದ 851 ಕಾಮಗಾರಿಗಳ ಪ್ರಸ್ತಾವನೆಗೆ ಒಪ್ಪಿಗೆ ನೀಡುವ ಕಾರ್ಯ ಇನ್ನೂ ಬಾಕಿಯಿದೆ” ಎಂದರು.
“ಕೇಂದ್ರ ಸರಕಾರ ಶೇಕಡಾ 100 ರಷ್ಟು ಅನುದಾನ ನೀಡುವ ಯೋಜನೆಯಾಗಿರುವ ಅಟಲ್ ಭೂಜಲ ಯೋಜನೆಯ ಅಡಿಯಲ್ಲಿ 2020 ರಿಂದ 5 ವರ್ಷಗಳ ಬಳಕೆಗಾಗಿ 1007 ಕೋಟಿ ರೂಪಾಯಿಗಳನ್ನು ನೀಡಿದೆ. ಸಣ್ಣ ನೀರಾವರಿ, ಕೃಷಿ, ತೋಟಗಾರಿಕೆ ಮತ್ತು ವಾಟರ್ ಶೇಡ್ ಇಲಾಖೆಯಗಳು ಸಮನ್ವಯದಿಂದ 14 ಜಿಲ್ಲೆಗಳ 41 ತಾಲ್ಲೂಕುಗಳ 1199 ಗ್ರಾಮ ಪಂಚಾಯತಿಗಳಲ್ಲಿ ಅಂತರ್ಜಲ ಅಭಿವೃದ್ದಿಗೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬಹುದಾಗಿದೆ. ಈ ನಿಟ್ಟಿನಲ್ಲಿ ಈಗಾಗಲೇ 50 ಕೋಟಿ ರೂಪಾಯಿಗಳ ಯೋಜನೆಗಳನ್ನು ಪ್ರಾರಂಭಿಸಲಾಗಿದೆ” ಎಂದು ತಿಳಿಸಿದರು.
ವಿಜ್ಞಾನಿಗಳಿಗೆ ಸನ್ಮಾನ
ಚಂದ್ರಯಾನ–3ರ ಸಫಲತೆ ಹಿನ್ನೆಲೆಯಲ್ಲಿ ವಿಜ್ಞಾನಿಗಳನ್ನು ರಾಜ್ಯ ಸರಕಾರದ ವತಿಯಿಂದ ಸನ್ಮಾನಿಸುವ ಕಾರ್ಯಕ್ರಮವನ್ನು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವತಿಯಿಂದ ಆಯೋಜಿಸಲು ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ಈ ಹಿನ್ನಲೆಯಲ್ಲಿ ಇಂದು ಇಲಾಖೆಯ ಕಾರ್ಯದರ್ಶಿಗಳು ಹಾಗೂ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿದ್ದೇನೆ. ಸಭೆಯಲ್ಲಿ ಕಾರ್ಯಕ್ರಮದ ರೂಪು ರೇಷೆಗಳು ಹೇಗಿರಬೇಕು ಎನ್ನುವುದರ ಬಗ್ಗೆ ಚರ್ಚಿಸಲಾಯಿತು” ಎಂದರು.
“ಇಸ್ರೋ ಮುಖ್ಯಸ್ಥರು ಹಾಗೂ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ದಿನಾಂಕ ನಿಗದಿಪಡಿಸಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಕಾರ್ಯಕ್ರಮ ಆಯೋಜಿಸಲಾಗುವುದು. ಕಾರ್ಯಕ್ರಮದ ಸಮಯದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವತಿಯಿಂದ ಅಂತರಿಕ್ಷ ಕ್ಷೇತ್ರದಲ್ಲಿ ಭಾರತದ ದೇಶದ ಸಾಧನೆ ಪ್ರದರ್ಶನವನ್ನು ಆಯೋಜಿಸುವ ಬಗ್ಗೆಯೂ ಚರ್ಚಿಸಲಾಗಿದೆ” ಎಂದು ಸಚಿವರು ತಿಳಿಸಿದರು.

ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.