ದಕ್ಷಿಣ ಭಾರತದ ಎರಡು ರಾಜ್ಯಗಳಲ್ಲಿ ಅಧಿಕಾರದ ಗದ್ದುಗೆ ಹಿಡಿದಿರುವ ಕಾಂಗ್ರೆಸ್, 2024ರ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಭಾರತದಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಭರವಸೆಯಲ್ಲಿದೆ. ಇದೇ ಹೊತ್ತಿನಲ್ಲಿ, ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರನ್ನು ಕರ್ನಾಟಕದಿಂದ ರಾಜ್ಯಸಭೆಗೆ ನಾಮನಿರ್ದೇಶನ ಮಾಡಲು ರಾಜ್ಯದ ನಾಯಕರು ಚಿಂತಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಲೋಕಸಭೆ ಚುನಾವಣೆ ಸಮೀಪದಲ್ಲಿದ್ದಂತೆ ನಡೆದಿರುವ ಐದು ರಾಜ್ಯಗಳ ಚುನಾವಣೆಯಲ್ಲಿ ಉತ್ತರ ಭಾರತದ ಮೂರು ರಾಜ್ಯಗಳನ್ನು (ಮಧ್ಯಪ್ರದೇಶ, ರಾಜಸ್ಥಾನ, ಚತ್ತೀಸ್ಗಢ) ಕಳೆದುಕೊಂಡಿರುವ ಕಾಂಗ್ರೆಸ್, ದಕ್ಷಿಣದ ಎರಡು ರಾಜ್ಯಗಳಲ್ಲಿ ಅಧಿಕಾರ ಪಡೆದುಕೊಂಡಿದೆ. ಕರ್ನಾಟಕ ಮತ್ತು ತೆಲಂಗಾಣದಲ್ಲಿ ಕಾಂಗ್ರೆಸ್ ಸುಭದ್ರ ಸರ್ಕಾರ ರಚಿಸಿದೆ. ಅಲ್ಲದೆ, ತಮಿಳುನಾಡಿನಲ್ಲಿ ಆಡಳಿತಾರೂಢ ಡಿಎಂಕೆ ಪಕ್ಷದ ಮಿತ್ರ ಪಕ್ಷವಾಗಿ ಕಾರ್ಯನಿರ್ವಹಿಸುತ್ತಿದೆ. ಇನ್ನು, ಗೋವಾ, ಮಹಾರಾಷ್ಟ್ರ ಹಾಗೂ ಕೇರಳದಲ್ಲೂ ತನ್ನದೇ ಆದ ವರ್ಚಸ್ಸನ್ನು ಉಳಿಸಿಕೊಂಡಿದೆ. ಹೀಗಾಗಿ, ಆಂಧ್ರಪ್ರದೇಶವನ್ನು ಹೊರತುಪಡಿಸಿ, ಈ ಎಲ್ಲ ದಕ್ಷಿಣ ರಾಜ್ಯಗಳಲ್ಲೂ ತನ್ನ ಹಳೆಯ ಪ್ರಾಬಲ್ಯವನ್ನು ಮರಸ್ಥಾಪಿಸಲು ಪಕ್ಷವು ಮುಂದಾಗಿದೆ.
ಕರ್ನಾಟಕ, ತೆಲಂಗಾಣ ರಾಜ್ಯಗಳಲ್ಲಿ ಲೋಕಸಭೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಜೊತೆಗೆ, ದಕ್ಷಿಣದ ಇತರ ರಾಜ್ಯಗಳಲ್ಲೂ ಹೆಚ್ಚು ಸ್ಥಾನಗಳನ್ನು ಗೆಲ್ಲುವುದು ಪಕ್ಷದ ಗುರಿಯಾಗಿದೆ. ಇದೇ ಹೊತ್ತಿನಲ್ಲಿ ಮೋದಿ ಇಮೇಜ್ ಜೊತೆಗೆ ಬಿಜೆಪಿ ಮತ್ತೆ ಮತ ಬ್ಯಾಂಕಿಂಗ್ಗೆ ಮುಂದಾಗಿದೆ. ಅದನ್ನು ಹೊಡೆದು, ತಾನು ಗೆಲ್ಲಬೇಕಾದ ಸವಾಲು ಕಾಂಗ್ರೆಸ್ಗಿದೆ.
ಅದಕ್ಕಾಗಿ, ನಾನಾ ತಂತ್ರಗಳನ್ನು ಕಾಂಗ್ರೆಸ್ ಮಾಡುತ್ತಿದೆ. ಅದರ ಜೊತೆಗೆ, ಸೋನಿಯಾ ಗಾಂಧಿ ಅವರನ್ನೂ ರಾಜ್ಯಸಭೆಯಲ್ಲಿ ದಕ್ಷಿಣ ಭಾರತದ ಪ್ರತಿನಿಧಿಯನ್ನಾಗಿಸುವ ಕುರಿತೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸೇರಿದಂತೆ ರಾಜ್ಯದ ನಾಯಕರು ಚರ್ಚಿಸುತ್ತಿದ್ದಾರೆ. ಆ ಬಗ್ಗೆ ಸೋನಿಯಾ ಗಾಂಧಿ ಅವರ ಮುಂದೆ ಪ್ರಸ್ತಾವನೆಯನ್ನು ಮಂಡಿಸಲು ಮುಂದಾಗಿದ್ದಾರೆ ಎನ್ನಲಾಗಿದೆ.
ಸದ್ಯ, ಸೋನಿಯಾ ಗಾಂಧಿ ಅವರು ಲೋಕಸಭೆಯಲ್ಲಿ ಉತ್ತರ ಪ್ರದೇಶದ ರಾಯ್ ಬರೇಲಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಅವರು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸದೇ ಇರುವ ಸಾಧ್ಯತೆಗಳಿವೆ. ಅವರು ರಾಯ್ ಬರೇಲಿ ಕ್ಷೇತ್ರವನ್ನು ತಮ್ಮ ಪುತ್ರಿ ಪ್ರಿಯಾಂಕಾ ಗಾಂಧಿ ಅವರಿಗೆ ಬಿಟ್ಟುಕೊಡಬಹುದೆಂಬ ಮಾತುಗಳು ಕೇಳಿಬಂದಿವೆ. ಹೀಗಾಗಿ, ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಲು ರಾಜ್ಯದ ನಾಯಕರು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.
ಅಂದಹಾಗೆ, 2024ರ ಏಪ್ರಿಲ್ 2ರಂದು ಕರ್ನಾಟಕದ ಮೂವರು ಕಾಂಗ್ರೆಸ್ ರಾಜ್ಯಸಭಾ ಸದಸ್ಯರು – ಡಾ ಎಲ್ ಹನುಮಂತಯ್ಯ, ಸೈಯದ್ ನಾಸೀರ್ ಹುಸೇನ್ ಮತ್ತು ಜಿ ಸಿ ಚಂದ್ರಶೇಖರ್ – ನಿವೃತ್ತರಾಗುತ್ತಿದ್ದಾರೆ. ರಾಜ್ಯದಲ್ಲಿ 136 ಶಾಸಕರನ್ನು ಹೊಂದಿರುವ ಕಾಂಗ್ರೆಸ್, ಆ ಮೂರು ಸ್ಥಾನಗಳನ್ನು ಉಳಿಸಿಕೊಳ್ಳಲಿದೆ. ಆದರೆ, ಆ ಮೂವರನ್ನೇ ಮತ್ತೆ ರಾಜ್ಯಸಭೆಗೆ ಮರುನಾಮಕರಣ ಮಾಡುವ ಬಗ್ಗೆ ಪಕ್ಷದ ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ನಡೆಯುತ್ತಿರುವ ಸುದ್ದಿ ಇದೆ.
ಒಂದು ವೇಳೆ, ರಾಜ್ಯಸಭೆಗೆ ಕರ್ನಾಟಕದಿಂದ ನಾಮನಿರ್ದೇಶನದ ಪ್ರಸ್ತಾವನೆಗೆ ಸೋನಿಯಾ ಗಾಂಧಿ ಒಪ್ಪಿಕೊಂಡರೆ, ಮೂವರಲ್ಲಿ ಯಾರೂ ಕೂಡ ಆಕ್ಷೇಪ ಎತ್ತುವುದಿಲ್ಲ. ಸದ್ಯ, ತೀರ್ಮಾನಗಳನ್ನು ತೆಗೆದುಕೊಳ್ಳಲು ಇನ್ನೂ ಸಮಯವಿದೆ. ಸೋನಿಯಾ ಗಾಂಧಿ ಅವರ ಮುಂದೆ ಇನ್ನೂ ಪ್ರಸ್ತಾಪ ಇಡಲಾಗಿಲ್ಲ. ಪಕ್ಷದ ನಾಯಕರು ತೀರ್ಮಾನಿಸಿ, ಪ್ರಸ್ತಾಪ ಇಡಲಿದ್ದಾರೆ ಎಂದು ಕೆಪಿಸಿಸಿ ಮುಖಂಡರೊಬ್ಬರು ತಿಳಿಸಿರುವುದಾಗಿ ವರದಿಯಾಗಿದೆ.