- ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ದಾಖಲಾಗದ ಪರೀಕ್ಷಾ ಅಕ್ರಮ
- ಪರೀಕ್ಷೆ ಬರೆದ ಯಾವ ವಿದ್ಯಾರ್ಥಿಯೂ ಡಿಬಾರ್ ಆಗಿಲ್ಲ
ರಾಜ್ಯಾದ್ಯಂತ ಇಂದಿನಿಂದ ಪ್ರಾರಂಭವಾದ ಎಸ್ಎಸ್ಎಲ್ಸಿ ಪರೀಕ್ಷೆಯು ಯಶಸ್ವಿಯಾಗಿ ಪೂರ್ಣಗೊಂಡಿದ್ದು, ರಾಜ್ಯದ ಯಾವ ಭಾಗದಲ್ಲಿಯೂ ಪರೀಕ್ಷಾ ಅಕ್ರಮ ದಾಖಲಾಗಿಲ್ಲ. ಜೊತೆಗೆ ಪರೀಕ್ಷೆ ಬರೆದ ಯಾವೊಬ್ಬ ವಿದ್ಯಾರ್ಥಿಯೂ ಡಿಬಾರ್ ಆಗದಿರುವುದು ಸಂತಸಕ್ಕೆ ಕಾರಣವಾಗಿದೆ.
ಇಂದು ನಡೆದ ಪರೀಕ್ಷೆಯಲ್ಲಿ ಪ್ರಥಮ ಭಾಷೆಯನ್ನಾಗಿ ಆಯ್ಕೆ ಮಾಡಿಕೊಂಡಿದ್ದ ವಿದ್ಯಾರ್ಥಿಗಳಲ್ಲಿ ಶೇ.98.48 ರಷ್ಟು ಹಾಜರಾಗಿ ಪರೀಕ್ಷೆಯನ್ನು ಯಶಸ್ವಿಗೊಳಿಸಿದ್ದಾರೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಪ್ರಕಟಿಸಿದೆ.
ಪ್ರಥಮ ಭಾಷೆ ಪರೀಕ್ಷೆಗೆ ಒಟ್ಟು 8,27,276 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಇದರಲ್ಲಿ 8,14,726 ವಿದ್ಯಾರ್ಥಿಗಳು ಹಾಜರಾದರೆ, 12,550 ವಿದ್ಯಾರ್ಥಿಗಳು ಗೈರಾಗಿದ್ದರು. ಅಂದರೆ, ಶೇ.98.48 ರಷ್ಟು ಮಕ್ಕಳು ಪರೀಕ್ಷೆ ಬರೆದಿದ್ದಾರೆ.
ಈ ಸುದ್ದಿ ಓದಿದ್ದೀರಾ? : ಬೆಂಗಳೂರು ವಿವಿಗೆ ‘ಐಎಸ್ಒ’ ಮಾನ್ಯತೆ
ಕಲಬುರಗಿಯಲ್ಲಿ ಕನಿಷ್ಟ ಹಾಜರಾತಿ ದಾಖಲಾದರೆ, (ಶೇ.95.51) ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಗರಿಷ್ಠ ಹಾಜರಾತಿ ದಾಖಲಾಗಿದೆ. ಇಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.45ರವರೆಗೆ ಪರೀಕ್ಷೆಯನ್ನು ನಿಗದಿ ಮಾಡಲಾಗಿತ್ತು. ಪ್ರಥಮ ಭಾಷೆಯನ್ನಾಗಿ ಆಯ್ಕೆ ಮಾಡಿಕೊಂಡಿದ್ದ ವಿದ್ಯಾರ್ಥಿಗಳು 125 ಅಂಕಗಳಿಗೆ ಪರೀಕ್ಷೆ ಬರೆದರು.
ಪರೀಕ್ಷೆ ಬರೆದ ವಿದ್ಯಾರ್ಥಿಗಳಲ್ಲಿ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ ಭಾಷೆಯನ್ನು ಪ್ರಥಮ ಭಾಷೆಯನ್ನಾಗಿ ಆಯ್ಕೆ ಮಾಡಿಕೊಂಡಿದ್ದರು. ಮುಂದಿನ ಪರೀಕ್ಷೆಯು ಏ. 4ಕ್ಕೆ ನಡೆಯಲಿದೆ.
ಇಂದು ನಡೆದ ಪರೀಕ್ಷೆಯಲ್ಲಿ ರಾಜ್ಯದ ಯಾವ ಭಾಗದಲ್ಲಿಯೂ ಅಕ್ರಮ ಎಸಗಿಲ್ಲ ಹಾಗೂ ಯಾವುದೇ ವಿದ್ಯಾರ್ಥಿ ಡಿಬಾರ್ ಆಗಿಲ್ಲ ಎನ್ನುವುದು ವಿಶೇಷವಾಗಿದೆ.