ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ.
ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಪ್ರಕರಣವನ್ನು ವಜಾ ಮಾಡಿ ಆದೇಶಿಸಿದ್ದು ಈ ಮೂಲಕ ಎಂಟು ವರ್ಷದ ಹಿಂದಿನ ಪ್ರಕರಣದಿಂದ ಬಿಎಸ್ವೈಗೆ ಬಿಗ್ ರಿಲೀಫ್ ಸಿಕ್ಕಿದೆ. ಈ ಹಿಂದೆ ಸಿಎಜಿ ವರದಿ ಆಧರಿಸಿದ 15 ಪ್ರಕರಣಗಳನ್ನು ಹೈಕೋರ್ಟ್ ರದ್ದುಪಡಿಸಿತ್ತು. ಹಿಂದಿನ ತೀರ್ಪು ಆಧರಿಸಿ 2015ರ ಡಿಸೆಬರ್ 19ರ ಕೇಸ್ನ್ನು ಹೈಕೋರ್ಟ್ ರದ್ದುಪಡಿಸಿದೆ.
ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ವೇಳೆ ಹಲಗೇವಡೇರಹಳ್ಳಿ ಮತ್ತು ಬಿಳೇಕಹಳ್ಳಿಯಲ್ಲಿ ಅಕ್ರಮ ಡಿನೋಟಿಫಿಕೇಷನ್ ಮಾಡಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಜಯಕುಮಾರ್ ಹಿರೇಮಠ್ ಎಂಬುವರು 2015ರಲ್ಲಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಈ ಬಗ್ಗೆ ಲೋಕಾಯುಕ್ತ ಸಂಸ್ಥೆ ತನಿಖೆ ನಡೆಸಿತ್ತು.
ನ್ಯಾಯಾಲಯದ ಆದೇಶದಂತೆ 2015ರ ಫೆಬ್ರವರಿ 21ರಂದು ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದರು. ನಂತರ ತನಿಖೆಯಲ್ಲಿ ಯಾವುದೇ ಪ್ರಗತಿ ಕಂಡುಬಂದಿಲ್ಲ. ಈ ಹಿನ್ನೆಲೆಯಲ್ಲಿ ಪ್ರಕರಣ ರದ್ದು ಮಾಡುವಂತೆ ಕೋರಿ ಯಡಿಯೂರಪ್ಪ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಆದರೆ ಬಿಎಸ್ವೈ ಅರ್ಜಿಯನ್ನು 2020ರಲ್ಲಿ ಹೈಕೋರ್ಟ್ ವಜಾ ಮಾಡಿತ್ತು. ತನಿಖೆಯನ್ನು ವಿಳಂಬಗೊಳಿಸುತ್ತಿರುವುದಕ್ಕೆ ಪೊಲೀಸರನ್ನು ಹೈಕೋರ್ಟ್ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ಅವರು ತರಾಟೆಗೆ ತೆಗೆದುಕೊಂಡಿದ್ದರು. ತನಿಖೆಯನ್ನು ಉದ್ದೇಶಪೂರ್ವಕವಾಗಿ ತಡ ಮಾಡಲಾಗುತ್ತಿದೆ ಎನ್ನುವುದು ಸ್ಪಷ್ಟವಾಗಿ ಕಂಡುಬರುತ್ತಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದರು.
ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಬಿಎಸ್ವೈ ಸುಪ್ರೀಂ ಕೋರ್ಟ್ ಮೊರಹೋಗಿದ್ದರು. ಈದೀಗ ಸುಧೀರ್ಘ ಕಾಲ ವಿಚಾರಣೆ ನಡೆಸಿದ ಹೈಕೋರ್ಟ್ ಪ್ರಕರಣವನ್ನು ವಜಾ ಮಾಡಿದೆ.