ಸಿಎಂ, ಡಿಸಿಎಂ ವಿಚಾರವಾಗಿ ಸಾರ್ವಜನಿಕವಾಗಿ ಹಾಗೂ ಮಾಧ್ಯಮಗಳ ಮುಂದೆ ಮಾತನಾಡುವ ಪಕ್ಷದ ಮುಖಂಡರು, ಸಚಿವರು, ಶಾಸಕರಿಗೆ ವಿಧಿಯಿಲ್ಲದೇ ನೋಟಿಸ್ ಕೊಟ್ಟು, ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ. ಎಲ್ಲ ಸ್ವಾಮೀಜಿಗಳಲ್ಲಿಯೂ ಕೈಮುಗಿದು ಕೇಳಿಕೊಳ್ಳುತ್ತೇನೆ ನಮ್ಮ ರಾಜಕಾರಣ ಸುದ್ದಿಗೆ ನೀವು ಬರಬೇಡಿ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸಿಎಂ, ಡಿಸಿಎಂ ಬದಲಾವಣೆ ಬಗ್ಗೆ ಬಹಿರಂಗ ಹೇಳಿಕೆ ನೀಡುವವರು ಎಐಸಿಸಿ ಮತ್ತು ರಾಜ್ಯ ಘಟಕದಿಂದ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ. ಪಕ್ಷಕ್ಕೆ ಶಿಸ್ತು ಮುಖ್ಯ. ಶಿಸ್ತಿಲ್ಲದೆ ಯಾವುದೇ ಪಕ್ಷವಿಲ್ಲ. ಪಕ್ಷವನ್ನು ಅಧಿಕಾರಕ್ಕೆ ತರಲು ಎಷ್ಟು ಕಷ್ಟ ಪಟ್ಟಿದ್ದೇವೆ ಎಂಬುದು ನಮಗೆ ಗೊತ್ತಿದೆ. ಇಂದು ಇವರುಗಳು ಸುಖಾಸುಮ್ಮನೆ ಮಾತನಾಡುವ ಅವಶ್ಯಕತೆಯಿಲ್ಲ” ಎಂದರು.
“ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು, ನಾನು (ಡಿಕೆ ಶಿವಕುಮಾರ್), ಸಿದ್ದರಾಮಯ್ಯ ಅವರು ಪಕ್ಷದ ಹಿತ ದೃಷ್ಟಿಯಿಂದ ಹೇಗೆ ಕೆಲಸ ಮಾಡಬೇಕು ಎನ್ನುವ ಬಗ್ಗೆ ತೀರ್ಮಾನಕ್ಕೆ ಬಂದಿದ್ದೇವೆ. ಈ ವಿಚಾರವಾಗಿ ಯಾವುದೇ ಮಂತ್ರಿಗಳು, ಶಾಸಕರು, ಸ್ವಾಮೀಜಿಗಳು ಮಾತನಾಡುವ ಅವಶ್ಯಕತೆ ಇಲ್ಲ” ಎಂದು ತಿಳಿಸಿದರು.
ಹೈಕಮಾಂಡ್ ಬಳಿ ಡಿಸಿಎಂ, ಸಿಎಂ ಬದಲಾವಣೆ ಬಗ್ಗೆ ಚರ್ಚೆಯಾಯಿತೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಡಿಕೆ ಶಿವಕುಮಾರ್, “ಡಿಸಿಎಂ, ಸಿಎಂ ಬದಲಾವಣೆ ಬಗ್ಗೆ ಹೈಕಮಾಂಡ್ ಬಳಿ ಚರ್ಚೆಯಾಗಿಲ್ಲ. ಸ್ವಾಮೀಜಿಗಳು ಅಭಿಮಾನಪೂರ್ವಕವಾಗಿ ಮಾತನಾಡಿದ್ದಾರೆ. ಸ್ವಾಮೀಜಿಗಳ ಆಶೀರ್ವಾದ ಇದ್ದರೆ ಸಾಕು. ಅವರು ಒಳಗಿನಿಂದಲೇ ಹರಸಿದರೆ ಸಾಕು. ನಾನು ಸಿಎಂ ಆಗಲು ಯಾರೂ ಶಿಫಾರಸ್ಸು ಮಾಡುವುದು ಬೇಡ. ನಾನು ಮಾಡಿರುವ ಕೆಲಸವನ್ನು ನೋಡಿ ನಮ್ಮ ಪಕ್ಷದ ಹೈಕಮಾಂಡ್ ಸೂಕ್ತ ತೀರ್ಮಾನ ಮಾಡುತ್ತದೆ. ದಯವಿಟ್ಟು ಈ ವಿಚಾರ ಇಲ್ಲಿಗೆ ಮುಗಿಸಿಬಿಡಿ” ಎಂದು ಹೇಳಿದರು.
“ಮುಖ್ಯಮಂತ್ರಿ ಸ್ಥಾನದ ಬಗ್ಗೆ ಈವರೆಗೆ ಯಾವ ಸ್ವಾಮೀಜಿಗಳು ಮಾತನಾಡಿಲ್ಲ. ಇವತ್ತೇ ಮಾತನಾಡಿದ್ದು ಅವರು. ಎಲ್ಲ ಸ್ವಾಮೀಜಿಗಳಿಗೂ ಕೈ ಮುಗಿಯುತ್ತೇನೆ, ನಮ್ಮ ರಾಜಕಾರಣದ ಸುದ್ದಿಗೆ ನೀವು ಬರಲು ಹೋಗಬೇಡಿ” ಎಂದರು.