ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳ ಪೈಕಿ ಚೆನ್ನೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ವಿವೇಕಾನಂದ ಅತ್ಯಂತ ಶ್ರೀಮಂತ ಅಭ್ಯರ್ಥಿಯಾಗಿದ್ದಾರೆ. ಅವರು ಬರೋಬ್ಬರಿ 600 ಕೋಟಿ ರೂ.ಗೂ ಅಧಿಕ ಮೌಲ್ಯದ ಆಸ್ತಿ ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ.
ವಿವೇಕಾನಂದ ಮತ್ತು ಅವರ ಪತ್ನಿ 377 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಹಾಗೂ 225 ಕೋಟಿ ರೂ. ಮೌಲ್ಯದ ಚರಾಸ್ತಿ ಹೊಂದಿದ್ದಾರೆ. ಅಭ್ಯರ್ಥಿ ವಿವೇಕಾನಂದ ಮತ್ತು ಅವರ ಪತ್ನಿ 41.5 ಕೋಟಿ ರೂ. ಸಾಲ ಹೊಂದಿದ್ದಾರೆ ಎಂದು ಚುನಾವಣೆ ಆಯೋಗಕ್ಕೆ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ನಮೂದಿಸಲಾಗಿದೆ.
ಇತ್ತಿಚೆಗೆ ಬಿಜೆಪಿ ತೊರೆದು ಕಾಂಗ್ರೇಸ್ ಸೇರ್ಪಡೆಯಾದ ವಿವೇಕಾನಂದ ಅವರ ವಾರ್ಷಿಕ ಆದಾಯವು ಕಳೆದ ಆರ್ಥಿಕ ವರ್ಷದಲ್ಲಿ 4.66 ಕೋಟಿಯಿಂದ 6.26 ಕೋಟಿಗೆ ಏರಿಕೆಯಾಗಿದೆ. ಇದೇ ಅವಧಿಯಲ್ಲಿ ಅವರ ಪತ್ನಿಯ ವಾರ್ಷಿಕ ಆದಾಯವು 6.09 ಕೋಟಿಯಿಂದ 9.61 ಕೋಟಿಗೆ ಏರಿಕೆಯಾಗಿದೆ.
ಪಾಲೈರ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪಿ. ಶ್ರೀನಿವಾಸ್ ರೆಡ್ಡಿ ನವೆಂಬರ್ 9ರಂದು ನಾಮಪತ್ರ ಸಲ್ಲಿಸಿದ್ದಾರೆ. 460 ಕೋಟಿ ಆಸ್ತಿ ಘೋಷಿಸಿಕೊಂಡಿರುವ ಅವರು ಎರಡನೆಯ ಅತ್ಯಂತ ಶ್ರೀಮಂತ ಅಭ್ಯರ್ಥಿಯಾಗಿದ್ದಾರೆ. ಬಿಆರ್ಎಸ್ ಮುಖ್ಯಸ್ಥ, ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು 59 ಕೋಟಿ ಮೌಲ್ಯದ ಕುಟುಂಬದ ಆಸ್ತಿಯನ್ನು ಘೋಷಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ʼಈ ದಿನʼ ವಿಶೇಷ | ಇಲ್ಲ, ಇಲ್ಲ, ನೆಹರೂ ನಿವೃತ್ತರಾಗುವುದಿಲ್ಲ…
ತೆಲಂಗಾಣ ರಾಜ್ಯದ ಒಟ್ಟು 119 ವಿಧಾನಸಭಾ ಸ್ಥಾನಗಳಿಗೆ ವಿವಿಧ ಪಕ್ಷಗಳ 4,798 ಅಭ್ಯರ್ಥಿಗಳು 5,716 ಸೆಟ್ಗಳ ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ನವೆಂಬರ್ 13 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ನವೆಂಬರ್ 15 ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನಾಂಕವಾಗಿದೆ. ನವೆಂಬರ್ 30 ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ.