- ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದ ಸಿಎಂ ಸಿದ್ದರಾಮಯ್ಯ
- ರಾಜ್ಯಕ್ಕೆ ಅಕ್ಕಿ ಕೊಡಬಾರದು ಎಂದು ಕೇಂದ್ರ ತಡೆ ಹಿಡಿದಿದೆ
ಉಚಿತ ಅಕ್ಕಿ ಹಂಚಿಕೆ ವಿಚಾರದಲ್ಲೂ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ. ನಮ್ಮ ಪಾಲಿನ ಅಕ್ಕಿಯನ್ನು ಪಡೆದುಕೊಳ್ಳದಂತೆ ತಡೆ ಹಿಡಿದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.
ಬೆಂಗಳೂರಿನ ಶಕ್ತಿಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಉಚಿತ ಅಕ್ಕಿ ಹಂಚಿಕೆ ವಿಚಾರವಾಗಿ ಮಾಹಿತಿ ನೀಡಿದ ಅವರು, ಬಿಜೆಪಿಯದ್ದು ಬಡವರ ವಿರೋಧಿ ನಡೆ, ಅದಕ್ಕಾಗಿ ರಾಜ್ಯಕ್ಕೆ ಅಕ್ಕಿ ಕೊಡಬಾರದು ಎಂದು ತಡೆ ಹಿಡಿದಿದ್ದಾರೆ ಎಂದರು.
ಈಗಾಗಲೇ ನಾವು 5 ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದೇವೆ. ಅದರಲ್ಲಿ ಒಂದು ಗ್ಯಾರಂಟಿ ಜಾರಿ ಮಾಡಿದ್ದೇವೆ. ಪ್ರತಿಯೊಬ್ಬರಿಗೆ ತಲಾ 10 ಕೆಜಿ ಅಕ್ಕಿ ಕೊಡ್ತೇವೆ ಎಂದು ಹೇಳಿದ್ದೇವೆ. ಬಿಪಿಎಲ್, ಅಂತ್ಯೋದಯ ಕಾರ್ಡ್ನವರಿಗೆ 10 ಕೆಜಿ ಅಕ್ಕಿ ಕೊಡುತ್ತೇವೆ. ಜುಲೈ 1ರಿಂದ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಹೇಳಿದ್ದೆವು. ಅದರಂತೆ ನಾವು ನಡೆದುಕೊಳ್ಳುತ್ತೇವೆ ಎಂದವರು ಹೇಳಿದರು.
ಉಚಿತ ಅಕ್ಕಿ ವಿತರಣೆಗಾಗಿ ತಿಂಗಳಿಗೆ 2 ಲಕ್ಷದ 28 ಸಾವಿರ ಮೆಟ್ರಿಕ್ ಟನ್ ಹೆಚ್ಚುವರಿ ಅಕ್ಕಿ ಬೇಕು. ಅನ್ನಭಾಗ್ಯ ಯೋಜನೆಗಾಗಿ ತಿಂಗಳಿಗೆ 840 ಕೋಟಿ ರೂ. ವೆಚ್ಚ ಆಗಲಿದೆ. ಪ್ರತಿ ವರ್ಷಕ್ಕೆ 10,092 ಕೋಟಿ ರೂ. ಬೇಕು ಎಂದು ಹೇಳಿದರು.
ಹೆಚ್ಚುವರಿ ಅಕ್ಕಿ ವಿತರಣೆ ಬಗ್ಗೆ ಎಫ್ಸಿಐ ಡೆಪ್ಯುಟಿ ಮ್ಯಾನೇಜರ್ ಜೊತೆ ಚರ್ಚೆ ಮಾಡಿದ್ದೆವು. ಅವರು ಹೆಚ್ಚುವರಿ ಅಕ್ಕಿ ಕೊಡುವುದಾಗಿ ಹೇಳಿದ್ದರು.
ಜೂನ್12ರಂದು ಪತ್ರ ಬರೆದ ಅವರು ಹೆಚ್ಚುವರಿ ಅಕ್ಕಿ ಕೊಡುವುದಾಗಿ ಒಪ್ಪಿಗೆ ನೀಡಿದ್ದರು. ಆದರೆ ಇದಾದ ಬಳಿಕ ಕೇಂದ್ರ ಸರ್ಕಾರ ಈ ವಿಚಾರದಲ್ಲಿ ರಾಜಕೀಯ ನಿರ್ಧಾರ ತೆಗೆದುಕೊಂಡಿದೆ. ಉಚಿತ ಅಕ್ಕಿ ವಿತರಣೆಯಲ್ಲಿ ವಿಳಂಬ ಧೋರಣೆ ತೋರುತ್ತಿದೆ ಎಂದು ಆರೋಪಿಸಿದರು.
ಈ ಸುದ್ದಿ ಓದಿದ್ದೀರಾ?:ಬಿಜೆಪಿ ಕಾಲದ ಎಪಿಎಂಸಿ ಕಾಯ್ದೆ ರದ್ದು, ಹಳೆ ಕಾಯ್ದೆ ಜಾರಿ: ಸಚಿವ ಶಿವಾನಂದ ಪಾಟೀಲ್
ಡೆಪ್ಯುಟಿ ಮ್ಯಾನೇಜರ್ 7 ಲಕ್ಷ ಟನ್ ಅಕ್ಕಿ ಸಂಗ್ರಹ ಇದೆ ಎಂದು ಮಾಹಿತಿ ನೀಡಿದ್ದರೂ, ಕೇಂದ್ರ ನಮಗೆ ಪೂರೈಕೆ ಮಾಡಲು ಹಿಂದೇಟು ಹಾಕುತ್ತಿದೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.
ಇವರ ಈ ನಿರ್ಧಾರದಿಂದ ಎಫ್ ಸಿಐನವರು ಹಿಂದೆ ಸರಿದಿದ್ದಾರೆ. ಖಾಸಗಿಯವರಿಗೆ ಅಕ್ಕಿ ಕೊಡುವ ಅವರು ನಮ್ಮ ರಾಜ್ಯಕ್ಕೆ ಅಕ್ಕಿ ಇಲ್ಲ ಎನ್ನುತ್ತಿದ್ದಾರೆ. ಮೋದಿ ಸರ್ಕಾರ ಬಡವರ ವಿರೋಧಿ ಧೋರಣೆ ತೋರುತ್ತಿದೆ ಎಂದು ಸಿದ್ಧರಾಮಯ್ಯ ಕಿಡಿಕಾರಿದರು.
ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಕೇಂದ್ರ ಈ ರೀತಿ ಮಾಡುತ್ತಿದೆ. ಅಕ್ಕಿ ಪೂರೈಸಲು ನಾವು ಛತ್ತೀಸ್ಘಡ ಸರ್ಕಾರಕ್ಕೂ ಮನವಿ ಮಾಡಿದ್ದೇವೆ. ಕಷ್ಟವೋ ಸುಖವೋ ನಾವು ನಮ್ಮ ವಾಗ್ದಾನ ಈಡೇರಿಸುತ್ತೇವೆ ಎಂದು ಸಿಎಂ ಇದೇ ವೇಳೆ ಭರವಸೆ ನೀಡಿದರು.