- ‘ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ ಸಮನಾಗಲು ಸಾಧ್ಯವಿಲ್ಲ’
- ‘ಕಾಂಗ್ರೆಸ್ನಲ್ಲಿ ಸಿಎಂ ಹುದ್ದೆಗಾಗಿ ಹಗಲುಗನಸು ಕಾಣುತ್ತಿದ್ದಾರೆ’
ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆಯ ತೀರ್ಮಾನವನ್ನು ಹೈಕಮಾಂಡ್ ಮಾಡಲಿದ್ದು, ಒಂದು ವಾರದ ಒಳಗೆ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಆಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದರು.
ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಮುಗಿದ ಬಳಿಕ ನಾನು, ಬಿಜೆಪಿಯ ಎಲ್ಲ ಮುಖಂಡರು ಹಾಗೂ ಸಂಸದರು ಪ್ರವಾಸ ಮಾಡುತ್ತೇವೆ” ಎಂದು ಹೇಳಿದರು.
“ಈ ಬಾರಿ ಸ್ಪಷ್ಟ ಬಹುಮತದೊಂದಿಗೆ ನಾವು ಸರ್ಕಾರ ರಚಿಸುತ್ತೇವೆ. ರಾಜ್ಯದಲ್ಲಿ ನಾಲ್ಕು ತಂಡಗಳಾಗಿ ವಿಜಯ ಸಂಕಲ್ಪ ಯಾತ್ರೆ ಮಾಡಿದ್ದೇವೆ. ವಿಜಯ ಸಂಕಲ್ಪ ಯಾತ್ರೆಗೆ ಜನರಿಂದ ಉತ್ತಮ ಸ್ಪಂದನೆ ಸಿಕ್ಕಿದೆ. ರಾಜ್ಯದಲ್ಲಿ ನೂರಕ್ಕೆ ನೂರರಷ್ಟು ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.
“ಬಿಜೆಪಿಯ ಎಲ್ಲ ಸಂಸದರು, ರಾಜ್ಯಸಭಾ ಸದಸ್ಯರು ಚುನಾವಣೆ ಮುಗಿಯುವವರೆಗೂ ಅವರವರ ಜಿಲ್ಲೆಗಳಲ್ಲಿ ಇದ್ದು ಕೆಲಸ ಮಾಡಬೇಕಾಗುತ್ತದೆ. ಬೆಂಗಳೂರಿನಲ್ಲಿ ಅಮಿತ್ ಶಾ ನೇತೃತ್ವದಲ್ಲಿ ಎಲ್ಲ ಸಂಸದರ ಸಭೆ ಕರೆಯಲಾಗುವುದು. ಮೀಸಲಾತಿ ಹೆಚ್ಚಳ ಮಾಡಿರುವುದು ಎಲ್ಲ ವರ್ಗದ ಜನರಿಗೆ ನ್ಯಾಯ ಒದಗಿಸುವ ಕೆಲಸವಾಗಿದೆ” ಎಂದು ಹೇಳಿದರು.
“ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ನಾಯಕರಿಲ್ಲ. ಪ್ರಧಾನಮಂತ್ರಿ ನರೇಂದ್ರ ಮೋದಿ, ಅಮಿತ್ ಶಾ ಅವರಿಗೆ ಜನಬೆಂಬಲ ಸಿಗುತ್ತಿದೆ. ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ ವೇಳೆ ಎರಡು ಲಕ್ಷಕ್ಕೂ ಹೆಚ್ಚು ಜನ ಭಾಗಿಯಾಗಿದ್ದರು. ಬಿಜೆಪಿಯ ಜನ ಬೆಂಬಲ ನೋಡಿ ಕಾಂಗ್ರೆಸ್ನವರು ದಿಗ್ಭ್ರಾಂತರಾಗಿದ್ದಾರೆ” ಎಂದು ಅಭಿಪ್ರಾಯಪಟ್ಟರು.
ಈ ಸುದ್ದಿ ಓದಿದ್ದೀರಾ? ‘ನಂದಿನಿ’ ಕನ್ನಡಿಗರ ಸ್ವಾಭಿಮಾನವೇ ಹೊರತು ಅಮುಲ್ನ ಅಡಿಯಾಳಲ್ಲ: ಎಚ್ಡಿಕೆ ಕಿಡಿ
“ಲೋಕಸಭಾ ಚುನಾವಣೆಯಲ್ಲಿ ಸಿಕ್ಕಿದಷ್ಟೇ ಬೆಂಬಲ ಈಗಲೂ ಸಿಗಲಿದೆ. ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ ಸಮನಾಗಲು ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಹುದ್ದೆಗಾಗಿ ಹಗಲುಗನಸು ಕಾಣುತ್ತಿದ್ದಾರೆ. ಅದು ಕೇವಲ ತಿರುಕನ ಕನಸಾಗಲಿದೆ. ಕಾಂಗ್ರೆಸ್ ಪಕ್ಷ 70ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಸಾಧ್ಯವಿಲ್ಲ. ಮೋದಿ, ಅಮಿತ್ ಶಾ ಇನ್ನೂ 3 ರಿಂದ 4 ಬಾರಿ ರಾಜ್ಯಕ್ಕೆ ಬರಲಿದ್ದಾರೆ” ಎಂದು ತಿಳಿಸಿದರು.
“ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಲ್ಲ ವರ್ಗದವರಿಗೂ ನ್ಯಾಯ ಒದಗಿಸಿದ್ದಾರೆ. ರಾಜ್ಯದ ಜನರಿಗಾಗಿ ನಾನು ಹಲವು ಕಾರ್ಯಕ್ರಮ ಜಾರಿಗೆ ತಂದಿದ್ದೇನೆ. ಎರಡು-ಮೂರು ದಿನಗಳಲ್ಲಿ ರಾಜ್ಯದಲ್ಲಿ ಪ್ರವಾಸ ಆರಂಭವಾಗುತ್ತೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷ ಸಂಘಟನೆ ನಡೆಸುವೆ. ರಾಜ್ಯದಲ್ಲಿ 130 ಕ್ಷೇತ್ರಗಳಲ್ಲಿ ಪಕ್ಷ ಗೆಲುವು ಸಾಧಿಸಲಿದೆ” ಎಂದರು.