- ಜಿಲ್ಲಾಮಟ್ಟದವರೆಗಿನ ಕ್ರೀಡಾಪಟುಗಳಿಗೆ ಸೂಕ್ತ ತರಬೇತಿ
- ಅಲೆಮಾರಿ ಜನಾಂಗದ ಸಮಗ್ರ ಅಭಿವೃದ್ಧಿಗೆ 50 ಕೋಟಿ ರೂ.
ರಾಜ್ಯದಲ್ಲಿ ವಿವಿಧೆಡೆ ಸ್ಥಳೀಯವಾಗಿ ಪ್ರಸಿದ್ಧವಾಗಿರುವ ಕ್ರೀಡೆಗಳನ್ನು ಗುರುತಿಸಿ ಅವುಗಳಲ್ಲಿ ತೊಡಗಿಸಿಕೊಂಡಿರುವ ಕ್ರೀಡಾಪಟುಗಳಿಗೆ ಸೂಕ್ತ ತರಬೇತಿ ನೀಡಿ ಸಶಕ್ತಗೊಳಿಸುವ ನಿಟ್ಟಿನಲ್ಲಿ “ಒಂದು ಜಿಲ್ಲೆ ಒಂದು ಕ್ರೀಡೆ” ಯೋಜನೆ ಜಾರಿಗೊಳಿಸಲು ಚಿಂತನೆ ನಡೆಸಲಾಗಿದೆ ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ, ಯುವಜನ ಸಬಲೀಕರಣ ಹಾಗೂ ಕ್ರೀಡಾ ಸಚಿವ ಬಿ.ನಾಗೇಂದ್ರ ತಿಳಿಸಿದರು.
ವಿಧಾನಸೌಧದಲ್ಲಿ ಮಂಗಳವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, “ಒಂದೊಂದು ಪ್ರದೇಶ ಒಂದೊಂದು ಕ್ರೀಡೆಗಳಿಗೆ ಹೆಸರುವಾಸಿ. ವಿಜಯನಗರದಲ್ಲಿ ಕುಸ್ತಿ, ವಿಜಯಪುರದಲ್ಲಿ ಸೈಕ್ಲಿಂಗ್ ಹೀಗೆ ಎಲ್ಲ ಜಿಲ್ಲೆಗಳಲ್ಲಿಯೂ ಒಂದೊಂದು ಕ್ರೀಡೆಗಳು ಇವೆ. ಆ ಕ್ರೀಡೆಗಳಲ್ಲಿ ತೊಡಗಿಸಿಕೊಂಡಿರುವ ಪ್ರತಿಭಾವಂತ ಕ್ರೀಡಾಪಟುಗಳನ್ನು ಹೋಬಳಿಮಟ್ಟದಿಂದ ಜಿಲ್ಲಾಮಟ್ಟದವರೆಗೆ ಗುರುತಿಸಿ ಅವರಿಗೆ ಸೂಕ್ತ ತರಬೇತಿ ನೀಡಲಾಗುವುದು. ಶೀಘ್ರವೇ ಈ ಯೋಜನೆ ಜಾರಿಗೊಳಿಸಲಾಗುವುದು” ಎಂದರು.
“ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲ್ಯಾಣ ಕರ್ನಾಟಕ ಪ್ರದೇಶದ ಸಮಗ್ರ ಅಭಿವೃದ್ಧಿಗಾಗಿ 5 ಸಾವಿರ ಕೋಟಿ ರೂ.ಗಳನ್ನು ಬಜೆಟ್ನಲ್ಲಿ ಒದಗಿಸಿದ್ದು, ಸದರಿ ಅನುದಾನದ ಸದ್ಭಳಕೆ ಮಾಡಿಕೊಂಡು ಸಮಗ್ರ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಕ್ರಿಯಾಯೋಜನೆಗಳನ್ನು ರೂಪಿಸಲಾಗುವುದು” ಎಂದರು.
ಸರ್ಕಾರದ ಪ್ರಯೋಜನ ಪಡೆದುಕೊಂಡಿರುವ ಪರಿಶಿಷ್ಟ ಪಂಗಡದ ಫಲಾನುಭವಿಗಳ ಜೀವನಮಟ್ಟದಲ್ಲಿ ಸುಧಾರಣೆಯಾಗಿದೆಯೇ ಎಂಬುದರ ಕುರಿತು ಇಲಾಖೆಯಿಂದ ಮೌಲ್ಯಮಾಪನ ನಡೆಸಲಾಗುವುದು. ಬಜೆಟ್ನಲ್ಲಿ ಪರಿಶಿಷ್ಟ ಪಂಗಡ ಸಮುದಾಯದ ಕಲ್ಯಾಣಕ್ಕೆ 1588.23 ಕೋಟಿ ರೂ. ಅನುದಾನವನ್ನು ಈ ಬಾರಿಯ ಬಜೆಟ್ನಲ್ಲಿ ಮೀಸಲಿಡಲಾಗಿದೆ. ಪರಿಶಿಷ್ಟ ಪಂಗಡದ ಕಲ್ಯಾಣಕ್ಕಾಗಿ ವಿವಿಧ ಕಾರ್ಯಕ್ರಮಗಳನ್ನು ರೂಪಿಸಲಾಗುವುದು” ಎಂದರು.
ಅಲೆಮಾರಿ ಜನಾಂಗದ ಅಭಿವೃದ್ಧಿ
“ಪರಿಶಿಷ್ಟ ಪಂಗಡಗಳ ಜನಾಂಗದಲ್ಲಿ ಸೋಲಿಗ ಸಮುದಾಯ ಒಳಗೊಂಡ ಜೇನುಕುರುಬ, ಕಾಡುಕುರುಬ, ಕೊರಗ, ಇರುಳಿಗ, ಬೆಟ್ಟಕುರುಬ ಇತ್ಯಾದಿ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದವರ ಸಮಗ್ರ ಅಭಿವೃದ್ಧಿಗಾಗಿ 50 ಕೋಟಿ ರೂ. ಮೀಸಲಿಡಲಾಗುತ್ತಿದೆ” ಎಂದು ತಿಳಿಸಿದರು.
ರಾಜ್ಯದ 8 ಜಿಲ್ಲೆಗಳಲ್ಲಿ ವಾಸ ಮಾಡುತ್ತಿರುವ 11 ಬುಡಕಟ್ಟು ಜನಾಂಗದ ಕುಟುಂಬಗಳಿಗೆ ಪೌಷ್ಟಿಕ ಆಹಾರ ಯೋಜನೆಯನ್ನು 6 ತಿಂಗಳ ಬದಲು 12 ತಿಂಗಳಿಗೆ ವಿಸ್ತರಿಸಿ 50 ಕೋಟಿ ರೂ.ಗಳ ಮೀಸಲಿಡಲಾಗುತ್ತಿದೆ. ಅರಣ್ಯ ಉತ್ಪನ್ನಗಳ ಸಂರಕ್ಷಣೆ ಮತ್ತು ಮೌಲ್ಯವರ್ಧನೆ, ಬುಡಕಟ್ಟು ಪ್ರದೇಶಗಳಲ್ಲಿ 100 ಅರಣ್ಯ ಉತ್ಪನ್ನ ಘಟಕಗಳನ್ನು TRIFED ಸಮನ್ವಯದಲ್ಲಿ ಸ್ಥಾಪನೆ ಮಾಡಲಾಗುತ್ತಿದೆ” ಎಂದು ವಿವರಿಸಿದರು.
“ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ವಿಶ್ವದಲ್ಲಿ 250 ರೊಳಗೆ ಯೂನಿವರ್ಸಿಟಿ ರ್ಯಾಂಕಿಂಗ್ ಪ್ರತಿಷ್ಠಿತ ವಿಶ್ವವಿದ್ಯಾನಿಲಯಗಳಲ್ಲಿ ಪದವಿ ಮತ್ತು ಸ್ನಾತಕೋತ್ತರ ಉನ್ನತ ಶಿಕ್ಷಣವನ್ನು ವಿದೇಶ ವ್ಯಾಸಂಗದ ಸಂಪೂರ್ಣ ವೆಚ್ಚವನ್ನು ಸರ್ಕಾರ ಭರಿಸುತ್ತದೆ. ಈ ಯೋಜನೆ ಅನುಷ್ಠಾನಕ್ಕೆ 36 ಕೋಟಿ ಅನುದಾನ ಮೀಸಲಿಡಲಾಗಿದೆ” ಎಂದರು.
“ISEC ಸಂಸ್ಥೆಯಲ್ಲಿ ಪಿಹೆಚ್.ಡಿ ಮಾಡುವ ಎಸ್.ಸಿ & ಎಸ್.ಟಿ ವಿದ್ಯಾರ್ಥಿಗಳಿಗೆ ಡಾ. ಬಿ. ಆರ್ ಅಂಬೇಡ್ಕರ್ ಫೆಲೋಶಿಪ್ ನೀಡಲು 2 ಕೋಟಿ ಕಾರ್ಪಸ್ ಫಂಡ್ ನೀಡಲಾಗುತ್ತಿದೆ. ಸ್ವಾವಲಂಬಿ ಸಾರಥಿ ಯೋಜನೆಯಡಿ ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಜನರು ನಾಲ್ಕು ಚಕ್ರ ಖರೀದಿ ಸಹಾಯ ಧನ ಶೇ.75 ರಷ್ಟು 4 ಲಕ್ಷ ರೂ. ಸಹಾಯ ಧನ ನೀಡಲಾಗುತ್ತದೆ” ಎಂದರು.
ಈ ಸುದ್ದಿ ಓದಿದ್ದೀರಾ? ಅಧಿವೇಶನ | ನೀರಾವರಿ ಇಲಾಖೆಯಿಂದ 4 ಸಾವಿರ ಕೋಟಿ ರೂ. ವಿದ್ಯುತ್ ಬಿಲ್ ಬಾಕಿ: ಡಿಕೆ ಶಿವಕುಮಾರ್
ಕ್ರೀಡಾ ಇಲಾಖೆಗೆ 236 ಕೋಟಿ ರೂ.
“ಬಜೆಟ್ನಲ್ಲಿ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ 236 ಕೋಟಿ ರೂ.ಗಳನ್ನು ಸಿಎಂ ನೀಡಿದ್ದಾರೆ. ಒಲಿಂಪಿಕ್ ಹಾಗೂ ಪ್ಯಾರಾಲಿಂಪಿಕ್ ವಿಜೇತರಿಗೆ ಗ್ರೂಪ್- A ಹುದ್ದೆ ಮತ್ತು ಏಷಿಯನ್ ಹಾಗೂ ಕಾಮನ್ ವೆಲ್ತ್ ಕ್ರೀಡಾ ವಿಜೇತರಿಗೆ ಗ್ರೂಪ್ -B ಹುದ್ದೆ ನೀಡಲು ಪ್ರಸಕ್ತ ಸಾಲಿನಿಂದ ಚಾಲನೆ ನೀಡಲಾಗುವುದು” ಎಂದರು.
“ಕ್ರೀಡಾಪಟುಗಳಿಗೆ ಪೊಲೀಸ್ ಮತ್ತು ಅರಣ್ಯ ಇಲಾಖೆಯ ನೇಮಕಾತಿಯಲ್ಲಿ ಶೇ.3ರಷ್ಟು ಹುದ್ದೆಗಳನ್ನು ಮೀಸಲೀಡಲಾಗುವುದು. ಈಜು ಕ್ರೀಡಾಪಟುಗಳು ಅಂತರ್ ರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಯಶಸ್ವಿಯಾಗಲು ತರಬೇತಿ ನೀಡಲು ಪ್ರತಿ ವರ್ಷಕ್ಕೆ 2 ಕೋಟಿ ಮೀಸಲು. ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧೆ ಮಾಡುವ ಸಾಮರ್ಥ್ಯವುಳ್ಳ ರಾಜ್ಯದ ಕ್ರೀಡಾಪಟುಗಳನ್ನು ತಯಾರಿಸಲು ಬೆಂಗಳೂರಿನಲ್ಲಿ ಬಾಸ್ಕೆಟ್ ಬಾಲ್ ಪ್ರಾದೇಶಿಕ ತರಬೇತಿ ಕೇಂದ್ರ ಮತ್ತು ಮೈಸೂರಿನಲ್ಲಿ ಸೈಕಲಿಂಗ್ ವೇಲೋಡ್ರೋಮೋಗಾಗಿ ತಲಾ 10 ಕೋಟಿ ಮೀಸಲಿಡಲಾಗಿದೆ” ಎಂದು ವಿವಿರಿಸಿದರು.
“ಕ್ರೀಡಾ ಚಟುವಟಿಕೆಯಲ್ಲಿ ವಿಶೇಷ ಚೇತನರು ಮತ್ತು ಮಹಿಳೆಯರು ಭಾಗವಹಿಸಲು ಅಗತ್ಯ ಸೌಕರ್ಯ ಹಾಗೂ ತರಬೇತಿದಾರರ ಸೇವೆ ಒದಗಿಸಲು 10 ಕೋಟಿ ಅನುದಾನ. ಕಂಠೀರವ ಕ್ರೀಡಾಂಗಣದಲ್ಲಿ ಕ್ರೀಡಾ ವಸ್ತು ಸಂಗ್ರಹಾಲಯ ಸ್ಥಾಪಿಸಲು 5 ಕೋಟಿ ಅನುದಾನ. ಕ್ರೀಡಾಪಟುಗಳು ತಂಗಲು ಸುಸಜ್ಜಿತ ಕ್ರೀಡಾ ವಸತಿ ನಿಲಯ ನಿರ್ಮಿಸಲು 10 ಕೋಟಿ ರೂಪಾಯಿ ಅನುದಾನ ಒದಗಿಸಲು ಉದ್ದೇಶಿಸಲಾಗಿದೆ” ಎಂದರು.