- ಹಿಂದಿನ ಸರ್ಕಾರವನ್ನು 40% ಎಂದಿದ್ದ ಕಾಂಗ್ರೆಸ್ ಈಗ ತನ್ನ ಅವಧಿಯಲ್ಲಿ ಏನು ಮಾಡುತ್ತಿದೆ?
- ಪೇ ಸಿಎಂ ಪ್ರಚಾರ ನಡೆಸಿದ್ದ ಇವರ ಬಗ್ಗೆಯೂ ನಾವು ಹಾದಿಬೀದಿಯಲ್ಲಿ ಪ್ರಚಾರ ನಡೆಸಬೇಕಿದೆ
ರಾಜ್ಯದಲ್ಲಿ ವರ್ಗಾವಣೆ ದಂಧೆ ಶುರುವಾಗಿದ್ದು, ಪ್ರತಿ ಹುದ್ದೆಗೂ ರೇಟ್ ಫಿಕ್ಸ್ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇರ ಆರೋಪ ಮಾಡಿದರು.
ಪಕ್ಷದ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ವಿವಿಧ ಜಿಲ್ಲೆಗಳ ಮುಖಂಡರ ಆತ್ಮಾವಲೋಕನ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ ಆಡಳಿತ ಪಕ್ಷದ ವಿರುದ್ಧ ಗಂಭೀರ ಅರೋಪ ಮಾಡಿದರು.
ಹಿಂದಿನ ಬಿಜೆಪಿ ಸರಕಾರವನ್ನು ಟೀಕೆ ಮಾಡುತ್ತಿದ್ದ ಇದೇ ಕಾಂಗ್ರೆಸ್ ನಾಯಕರು ಈಗ ಪ್ರತಿ ಹುದ್ದೆಗೆ ರೇಟ್ ಫಿಕ್ಸ್ ಮಾಡಿದ್ದಾರೆ. ಹಿಂದಿನ ಮುಖ್ಯಮಂತ್ರಿಗಳ ಬಗ್ಗೆ ಇವರೇ ಪೇ ಸಿಎಂ ಎಂದು ಪ್ರಚಾರ ಮಾಡಿದರು. ಆದರೆ, ಅದಕ್ಕಿಂತ ಜಾಸ್ತಿ ಈ ಸರ್ಕಾರದಲ್ಲಿ ನಡೆಯುತ್ತಿದೆ. ಇದನ್ನು ಎಷ್ಟು ಪರ್ಸೆಂಟ್ ಸರಕಾರ ಎಂದು ಕರೆಯಬೇಕು? ಎಂದು ಪ್ರಶ್ನಿಸಿದರು.
ಈ ಸುದ್ದಿ ಓದಿದ್ದೀರಾ? :ಬಿಜೆಪಿ ಸಭೆ | ಶಾಸಕರಿಗೆ ಲೋಕಸಭೆ ಚುನಾವಣೆಯ ಗುರಿ; ಅಂತಿಮವಾಗದ ವಿಪಕ್ಷ ನಾಯಕ ಆಯ್ಕೆ
ಪೇ ಸಿಎಂ ಪ್ರಚಾರ ನಡೆಸಿದ್ದ ಇವರ ಬಗ್ಗೆಯೂ ನಾವು ಹಾದಿಬೀದಿಯಲ್ಲಿ ಪ್ರಚಾರ ನಡೆಸಬೇಕಿದೆ. ಗೋಡೆಗಳ ಮೇಲೆ ಪೋಸ್ಟರ್ ಅಂಟಿಸಬೇಕಿದೆ. ಸ್ವತಃ ಅಧಿಕಾರಿಗಳಲ್ಲೇ ರೇಟ್ ಫಿಕ್ಸ್ ಆಗಿದೆ ಎಂದು ಮಾತನಾಡಿಕೊಳ್ಳುತ್ತಿದ್ದಾರೆ ಎಂದು ಅವರು ದೂರಿದರು.
ಈಗ ಇವರು ಏನು ಮಾಡುತ್ತಿದ್ದಾರೆ ಎನ್ನುವುದನ್ನು ಜನ ಗಮನಿಸುತ್ತಿದ್ದಾರೆ. ಇದನ್ನು ಸಾಬೀತು ಮಾಡಿ ಅಂದರೆ ಹೇಗೆ ಮಾಡೋದು? ಹಿಂದೆ 40% ಆರೋಪವನ್ನು ಸಾಬೀತು ಮಾಡಿದ್ದರಾ? ಎಂದು ಪ್ರಶ್ನಿಸಿದ ಅವರು, ಈಗ ಅವರದೇ ಸರಕಾರ ಬಂದಿದೆ, ಪರ್ಸೆಂಟೇಜ್ ಆರೋಪವನ್ನು ಸಾಬೀತು ಮಾಡಲಿ ಎಂದು ಸವಾಲು ಹಾಕಿದರು.
ಪ್ರೇಕ್ಷಕರಿಲ್ಲದ ಏಕ ಪಾತ್ರಾಭಿನಯ.