- ಬಿಜೆಪಿಗೆ ಶಾಪ ತಟ್ಟುತ್ತದೆ ಎಂದ ಕುಮಾರಸ್ವಾಮಿ
- 40%ಗಾಗಿ ದೇವರ ದುಡ್ಡನ್ನೇ ನುಂಗಿನೀರು ಕುಡಿದ ಬಿಜೆಪಿ
ನಾಡಿಗೆ ನಾಡೇ ಶ್ರದ್ಧಾಭಕ್ತಿಯಿಂದ ನಡೆದುಕೊಳ್ಳುವ ನಂಜನಗೂಡಿನ ನಂಜುಂಡೇಶ್ವರ ದೇವರ ಹುಂಡಿಗೆ ಬಿಜೆಪಿ ಶಾಸಕ ಬಿ ಹರ್ಷವರ್ಧನ್ ಕೈ ಹಾಕಿರುವುದು ದೈವಕ್ಕೆ ಎಸಗಿದ ಅಪಮಾನ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹರಿಹಾಯ್ದಿದ್ದಾರೆ.
ದೇವಾಲಯದ ದೇಣಿಗೆ ಹಣ ಅದರ ಜೀರ್ಣೋದ್ಧಾರಕ್ಕೆ ಮಾತ್ರ ಬಳಕೆಯಾಗಬೇಕು ಎನ್ನುವ ಕಾನೂನಿದೆ. ಹೀಗಿದ್ದರೂ ಸಮುದಾಯಗಳ ಭವನ ನಿರ್ಮಿಸಲು ಬಿಜೆಪಿ ಶಾಸಕ ಹರ್ಷವರ್ಧನ್ ಅವರು ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನದ ನಿಧಿಯಿಂದ 7.8 ಕೋಟಿ ಮಂಜೂರು ಮಾಡಿಸಿಕೊಂಡಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಎಚ್ ಡಿ ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
“ಸ್ವಯಂ ಘೋಷಿತ ಧರ್ಮೋದ್ಧಾರಕರು, ಹಿಂದೂ ಧರ್ಮವನ್ನು ಗುತ್ತಿಗೆಗೆ ಪಡೆದುಕೊಂಡವರೆಂದು ಬೀಗುವವರಿಗೆ ಧರ್ಮವೆಂದರೆ ಅಧಿಕಾರಕ್ಕಿರುವ ರಾಜಮಾರ್ಗವಾಗಿದೆ. ದೇವರ ಹುಂಡಿ ಎಂಬುದು ಲಜ್ಜೆಗೆಟ್ಟು ಹೊಡೆದುಕೊಳ್ಳುವ ನಿಧಿ. ಇವರಿಗೆ ನಾಚಿಕೆ, ಸಂಕೋಚ ಎನ್ನುವುದು ಕನಿಷ್ಠಕ್ಕಿಂತ ಕಡಿಮೆ ಎನ್ನುವುದಕ್ಕೆ ಈ ಘಟನೆಯೇ ಸಾಕ್ಷಿ” ಎಂದು ಟ್ವೀಟ್ ಮಾಡಿದ್ದಾರೆ.
“ನಾಡಿಗೆ ನಾಡೇ ಶ್ರದ್ಧಾಭಕ್ತಿಯಿಂದ ನಡೆದುಕೊಳ್ಳುವ ನಂಜನಗೂಡಿನ ನಂಜುಂಡೇಶ್ವರ ದೇವರ ಹುಂಡಿಗೆ ಬಿಜೆಪಿ ಶಾಸಕ ಬಿ ಹರ್ಷವರ್ಧನ್ ಕೈ ಹಾಕಿರುವುದು ದೈವಕ್ಕೆ ಎಸಗಿದ ಅಪಮಾನ. ಇದು ಯೋಜನೆಗಳ ಹೆಸರಿನಲ್ಲಿ ದೇವರ ಹುಂಡಿಗೂ ಕನ್ನ ಕೊರೆಯುವ ಬಿಜೆಪಿಯ ನೈಜ ಜಾಯಮಾನ. ಕಮಲಪಕ್ಷ ಮತ್ತೊಮ್ಮೆ ಬೆತ್ತಲಾಗಿದೆ” ಎಂದು ಕಿಡಿಕಾರಿದ್ದಾರೆ.
ಈ ಸುದ್ದಿ ಓದಿದ್ದೀರಾ? ಗೋ ರಕ್ಷಣೆಯ ಮರೆಯಲ್ಲಿ ಹಿಂದುತ್ವವಾದಿಗಳ ದನದ ವ್ಯಾಪಾರ, ವಸೂಲಿ ಧಂದೆಯಲ್ಲಿ ಸಾಯುವ ಡ್ರೈವರ್ಗಳು!
“ಮುಜರಾಯಿ ದೇವಾಲಯದ ಆದಾಯ ಆಯಾ ದೇಗುಲದ ಅಭಿವೃದ್ಧಿಗೇ ಬಳಸಬೇಕು ಎನ್ನುವುದು ಕಾನೂನು. ಬಿಜೆಪಿ ಸರ್ಕಾರ ಕಾನೂನನ್ನು ಗಾಳಿಗೆ ಬಿಟ್ಟು, 40%ಗಾಗಿ ದೇವರ ದುಡ್ಡನ್ನೇ ನುಂಗಿನೀರು ಕುಡಿದು, ಆ ಹಣವನ್ನೂ ಚುನಾವಣೆಗೆ ಸುರಿಯಲು ಹೊರಟಿದೆ. ಪಾಪದ ಪಕ್ಷಕ್ಕೆ ಪ್ರಾಯಶ್ಚಿತ್ತ ತಪ್ಪದು. ಶ್ರೀ ನಂಜುಂಡೇಶ್ವರನ ಶಾಪವೂ ತಟ್ಟದೆ ಇರದು” ಎಂದು ಟ್ವೀಟ್ ಮಾಡಿದ್ದಾರೆ.
“ಹೇಳುವುದು ಒಂದು, ಮಾಡುವುದು ಇನ್ನೊಂದು. ಧರ್ಮ, ದೇವರು ಎನ್ನುವುದು ಬಿಜೆಪಿಗೆ ಮತಫಸಲು ಕೊಡುವ ಸಾಧನಗಳಷ್ಟೇ. ಶ್ರದ್ಧೆ, ಭಕ್ತಿ ಜನರದ್ದು; ಭುಕ್ತಿ ಮಾತ್ರ ಬಿಜೆಪಿಯದ್ದು. ಸಮುದಾಯ ಭವನಗಳ ನಿರ್ಮಾಣಕ್ಕೆ ದೇವರ ದುಡ್ಡೇ ಬೇಕೇ? ಕೇತ್ರಕ್ಕೆ ಸರಕಾರ ಕೊಟ್ಟ ಹಣ, ಶಾಸಕರ ವಿಶೇಷ ಅನುದಾನ ಇತ್ಯಾದಿಗಳೆಲ್ಲ ಎಲ್ಲಿ ಹೋದವು?” ಎಂದು ಪ್ರಶ್ನಿಸಿದ್ದಾರೆ.
“ರಾಜ್ಯ ಬಿಜೆಪಿ ಸರ್ಕಾರವು ಶ್ರೀ ನಂಜುಂಡೇಶ್ವರ ದೇವರ ಹುಂಡಿಯನ್ನು ಎಗರಿಸುವ ಶಾಸಕರ ಧೂರ್ತ ಪ್ರಯತ್ನಕ್ಕೆ ತಡೆ ಹಾಕಬೇಕು. ಈ ಬಗ್ಗೆ ಹೊರಡಿಸಿರುವ ಆದೇಶವನ್ನು ಕೂಡಲೇ ಹಿಂಪಡೆಯಬೇಕು. ದೇವರ ದುಡ್ಡನ್ನು ದೇವಾಲಯದ ಅಭಿವೃದ್ಧಿಗೇ ಬಳಸಬೇಕು” ಎಂದು ಆಗ್ರಹಿಸಿದ್ದಾರೆ.