ಜೆಡಿಎಸ್ ರಾಜ್ಯ ಪ್ರಧಾನ ಕಚೇರಿ ಮುಂದೆ ‘ವಿದ್ಯುತ್ ಕಳ್ಳ ಕುಮಾರಸ್ವಾಮಿ’ ಎಂದು ಪೋಸ್ಟರ್ ಅಂಟಿಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಅವರಿಗೆ ಜೆಡಿಎಸ್ ದೂರು ನೀಡಿದೆ.
ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರ ವಿರುದ್ಧ ಅಶ್ಲೀಲ, ಕೀಳು ಅಭಿರುಚಿಯ ಪೋಸ್ಟರ್ಗಳನ್ನು ಗೋಡೆಗಳ ಮೇಲೆ ಅಂಟಿಸಲಾಗಿದೆ. ಹಾಗಾಗಿ ಕಿಡಿಗೇಡಿಗಳ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಒತ್ತಾಯಿಸಿದೆ.
ಜೆಡಿಎಸ್ ನಗರ ಘಟಕದ ಅಧ್ಯಕ್ಷ ಎಚ್.ಎಂ.ರಮೇಶ್ ಗೌಡ, ವಿಧಾನ ಪರಿಷತ್ ಮಾಜಿ ಸದಸ್ಯ ಚೌಡರೆಡ್ಡಿ ತೂಪಲ್ಲಿ ಹಾಗೂ ಜೆಡಿಎಸ್ ರಾಜ್ಯ ಕಾನೂನು ಘಟಕದ ಅಧ್ಯಕ್ಷ ಎ.ಪಿ.ರಂಗನಾಥ್ ನಿಯೋಗ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ದಯಾನಂದ ಅವರನ್ನು ಭೇಟಿ ಮಾಡಿ ದೂರು ನೀಡಿದ್ದಾರೆ.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ವಿಧಾನ ಪರಿಷತ್ ಸದಸ್ಯ ರಮೇಶ್ ಗೌಡ, ಜೆಡಿಎಸ್ ಕಚೇರಿಯ ಮುಂಭಾಗದ ರಸ್ತೆಯಲ್ಲಿ ವಾಹನದ ನೋಂದಣಿ ಸಂಖ್ಯೆಯಿಲ್ಲದ ಒಂದು ಕಾರಿನಲ್ಲಿ ಬಂದು, ವಾಹನವನ್ನು ನಮ್ಮ ಕಚೇರಿಯ ಮುಂಭಾಗದ ರಸ್ತೆಯಲ್ಲಿ ನಿಲ್ಲಿಸಿ, 4-5 ಜನರು ಕಾರಿನಿಂದ ಇಳಿದು ಬರುತ್ತಿರುವುದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅವರುಗಳ ಕೈಯಲ್ಲಿ ಕೆಲವು ಭಿತ್ತಿಪತ್ರಗಳನ್ನು ತೆಗೆದುಕೊಂಡು ಬರುತ್ತಿರುವುದು ದೃಶ್ಯದಲ್ಲಿ ಕಂಡು ಬಂದಿದೆ. ಕಾರಿನಿಂದ ಇಳಿದ 4 ಜನ ವ್ಯಕ್ತಿಗಳು ಅವರು ತಂದಿದ್ದ ಭಿತ್ತಿ ಪತ್ರಗಳನ್ನು ಗೋಡೆಗಳ ಮೇಲೆ ಅಂಟಿಸಿ ಕ್ಷಣಾರ್ಧದಲ್ಲಿ ಅಲ್ಲಿಂದ ತೆರಳಿದ್ದಾರೆ ಎಂದು ತಿಳಿಸಿದ್ದಾರೆ.
ಕಾರಿನಿಂದ ಇಳಿದ 4 ಜನರಲ್ಲಿ ಒಬ್ಬ ಮಾಜಿ ಕೆಪಿಸಿಸಿ ಕಾರ್ಯದರ್ಶಿಯಾಗಿದ್ದ ಎಸ್. ಮನೋಹರ್ ಎಂಬವವರು ಕೂಡ ಇದ್ದರು. ಉಳಿದ ಅವರ ಸಹಚರರ ಬಗ್ಗೆ ನಮಗೆ ಮಾಹಿತಿ ಇಲ್ಲ. ಹೆಚ್.ಡಿ. ಕುಮಾರಸ್ವಾಮಿಯವರ ವಿರುದ್ಧ ಅಸಂಬದ್ಧ, ಮಾನಹಾನಿಕಾರಕ, ವ್ಯಂಗ್ಯಚಿತ್ರದ ಸಮೇತ ಸಾರ್ವಜನಿಕರ ಸಾಮರಸ್ಯಕ್ಕೆ ಕುಂದು ಬರುವಂತಹ ವಾಕ್ಯಗಳನ್ನು ಮುದ್ರಿಸಿ ಭಿತ್ತಿ ಪತ್ರಗಳನ್ನು ಕಾನೂನು ಬಾಹಿರವಾಗಿ ಸಾರ್ವಜನಿಕ ರಸ್ತೆಯ ಇಕ್ಕೆಲಗಳಲ್ಲಿ ಅಂಟಿಸಿದ್ದಾರೆ. ಈ ರೀತಿ ಪೋಸ್ಟರ್ ಅಂಟಿಸುವ ಮೂಲಕ ಸಾರ್ವಜನಿಕರನ್ನು ಹಾಗೂ ಜೆಡಿಎಸ್ ಪಕ್ಷದ ಕಾರ್ಯಕರ್ತರನ್ನು ಪ್ರಚೋದನೆಗೊಳಿಸಿ ಕಾನೂನು ಸುವ್ಯವಸ್ಥೆ ಹಾಳುಗೆಡಹುವ ದುರುದ್ದೇಶ ಹೊಂದಿದ್ದಾರೆ ಎಂದು ತಿಳಿಸಿದರು.
ಇದನ್ನು ಓದಿದ್ದೀರಾ? ಬೆಳ್ತಂಗಡಿ | ವಿಚಾರಣೆಗೆ ಹೋದ ಪೊಲೀಸರನ್ನೇ ‘ನಕ್ಸಲ್’ ಎಂದ ವ್ಯಕ್ತಿ; ಅದನ್ನೇ ಸುದ್ದಿ ಮಾಡಿದ ಮಾಧ್ಯಮಗಳು!
ಪೋಸ್ಟರ್ ಅಂಟಿಸಿದವರ ವಿರುದ್ಧ ಕ್ರಿಮಿನಲ್ ಪ್ರಕರಣವನ್ನು ದಾಖಲಿಸಿಕೊಂಡು, ಕೂಡಲೆ ಬಂಧಿಸಬೇಕೆಂಬುದು ನಮ್ಮ ಒತ್ತಾಯ. ಈ ಬಗ್ಗೆ ಎಲ್ಲ ಸಿಸಿಟಿವಿ ದಾಖಲೆಗಳನ್ನು ಪೊಲೀಸರಿಗೆ ನೀಡಿದ್ದೇವೆ. ಒಂದು ವೇಳೆ ಪೊಲೀಸರು ಕ್ರಮ ಕೈಗೊಳ್ಳದೇ ಇದ್ದಲ್ಲಿ ವಿಧಾನಸೌಧದಲ್ಲಿರುವ ಸಚಿವರ ಕಚೇರಿಯ ಬಳಿಯಲ್ಲೇ ಇದೇ ರೀತಿಯ ಪೋಸ್ಟರ್ ಅಂಟಿಸುತ್ತೇವೆ. ಮುಂದೆ ಏನೇ ಅನಾಹುತವಾದರೂ ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಪೊಲೀಸ್ ಇಲಾಖೆಯೇ ಜವಾಬ್ದಾರಿಯಾಗಿರುತ್ತದೆ ಎಂದು ರಮೇಶ್ ಗೌಡ ತಿಳಿಸಿದರು.