- ಲಿಂಗಾಯತ ಮುಖ್ಯಮಂತ್ರಿ ವಿಚಾರದಲ್ಲಿ ಬಿಜೆಪಿ ಗೊಂದಲದಲ್ಲಿದೆ
- ಯಡಿಯೂರಪ್ಪಗೆ ಯಾವ ಬೆದರಿಕೆ ಹಾಕಲಾಗಿತ್ತು ಎಂಬುದು ತಿಳಿದಿದೆ
“ಬಿಜೆಪಿ ಪಕ್ಷದಂತೆ ಕಾಂಗ್ರೆಸ್ ಯಾವುದೇ ಲಿಂಗಾಯತ ನಾಯಕ ಹಾಗೂ ಮುಖ್ಯಮಂತ್ರಿ ಕಣ್ಣಲ್ಲಿ ನೀರು ಹಾಕಿಸಿಲ್ಲ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಕೇಂದ್ರ ಸಚಿವ ಅಮಿತ್ ಶಾ ಅವರಿಗೆ ತಿರುಗೇಟು ನೀಡಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿರುವ ಡಿ.ಕೆ ಶಿವಕುಮಾರ್, ‘ಕಾಂಗ್ರೆಸ್ ಲಿಂಗಾಯತ ಮುಖ್ಯಮಂತ್ರಿಗಳಿಗೆ ತಮ್ಮ ಅವಧಿ ಪೂರ್ಣಗೊಳಿಸಲು ಅವಕಾಶ ನೀಡಿಲ್ಲ’ ಎಂಬ ಅಮಿತ್ ಶಾ ಅವರ ಹೇಳಿಕೆಗೆ ಟಾಂಗ್ ಕೊಟ್ಟಿದ್ದಾರೆ.
“ರಾಜ್ಯ ರಾಜಕೀಯ ಇತಿಹಾಸದ ಬಗ್ಗೆ ಅಮಿತ್ ಶಾಗೆ ಗೊತ್ತಿಲ್ಲ. ನಾವು ಅವರಂತೆ ಯಾವುದೇ ಮುಖ್ಯಮಂತ್ರಿಯಿಂದ ಕಣ್ಣೀರು ಹಾಕಿಸಿಲ್ಲ. ಯಡಿಯೂರಪ್ಪ ಅವರು ಅಧಿಕಾರದಿಂದ ಕೆಳಗೆ ಇಳಿಯುವಾಗ ಯಾವ ಮಾತು ಆಡಿದ್ದಾರೆ. ಅದಕ್ಕೆ ಕಾರಣವೇನು” ಎಂದು ಪ್ರಶ್ನಿಸಿದ್ದಾರೆ.
“ಯಡಿಯೂರಪ್ಪ ಅವರಿಗೆ ಯಾವ ರೀತಿ ಬೆದರಿಕೆ ಹಾಕಲಾಗಿತ್ತು ಎಂಬ ವಿಷಯ ನನಗೆ ಗೊತ್ತಿದೆ. ಈಗ ಆ ವಿಚಾರವಾಗಿ ಮಾತನಾಡುವುದಿಲ್ಲ. ಬಿಜೆಪಿಗೆ ಯಡಿಯೂರಪ್ಪ ಅವರ ಕಣ್ಣೀರಿನ ಶಾಸ್ತಿ ಆಗಲಿದೆ. ಜಗದೀಶ್ ಶೆಟ್ಟರ್ ಹಾಗೂ ಸವದಿ ಅವರು ಕಣ್ಣೀರು ಹಾಕದಿರಬಹುದು. ಅವರ ಮನಸ್ಸು ಅತ್ತಿದೆ” ಎಂದಿದ್ದಾರೆ.
ಮುಸ್ಲಿಮರ ಮೀಸಲಾತಿ ಕುರಿತು ಅಮಿತ್ ಶಾ ಪ್ರಶ್ನೆಗೆ ಉತ್ತರಿಸಿದ ಡಿ.ಕೆ ಶಿವಕುಮಾರ್, “ಒಕ್ಕಲಿಗರಾಗಲಿ, ಲಿಂಗಾಯತರಾಗಲಿ, ಬೇರೆಯವರ ಮೀಸಲಾತಿ ಕಿತ್ತು ನಮಗೆ ಶೇ.2ರಷ್ಟು ಮೀಸಲಾತಿ ನೀಡಬೇಕೆಂದು ಕೇಳಿರಲಿಲ್ಲ” ಎಂದು ಹೇಳಿದ್ದಾರೆ.
“ಮೀಸಲಾತಿ ಮಿತಿಯನ್ನು ವಿಸ್ತರಿಸಿ ಈ ಸಮುದಾಯಗಳಿಗೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡಬೇಕು ಎಂಬುದು ನಮ್ಮ ಒತ್ತಾಸೆ. ಮುಸಲ್ಮಾನರಿಗೂ ಜನಸಂಖ್ಯೆ ಆಧಾರದ ಮೇಲೆ ಅವರಿಗೆ ಸಿಗಬೇಕಾದ ಮೀಸಲಾತಿ ಸಿಗಬೇಕು” ಎಂದು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಪ್ರಾಮಾಣಿಕರನ್ನು ಬಿಜೆಪಿ ಹೊರಹಾಕುತ್ತಿದೆ: ರಾಹುಲ್ ಗಾಂಧಿ
“ಬೇರೆ ರಾಜ್ಯಗಳಲ್ಲೂ ಮೀಸಲಾತಿ ಮಿತಿಯನ್ನು ಮೀರಿದೆ. ಹೀಗಾಗಿ ಕಾಂಗ್ರೆಸ್ ಎಲ್ಲ ಸಮುದಾಯಗಳಿಗೂ ನ್ಯಾಯ ಒದಗಿಸುವ ಕೆಲಸ ಮಾಡುತ್ತೇವೆ. ನ್ಯಾಯಾಲಯದಲ್ಲಿ ಮೀಸಲಾತಿ ವಿಚಾರವಾಗಿ ಸರ್ಕಾರದ ಆದೇಶ ಜಾರಿ ಕಷ್ಟ ಎಂಬುದು ಅಭಿಪ್ರಾಯ ವ್ಯಕ್ತವಾಗಿದೆ” ಎಂದಿದ್ದಾರೆ.
“ಲಿಂಗಾಯತ ಮುಖ್ಯಮಂತ್ರಿ ವಿಚಾರದಲ್ಲಿ ಬಿಜೆಪಿ ಧ್ವಂದ್ವ ನೀತಿ ಅನುಸರಿಸುತ್ತಿದೆ. ನಮ್ಮದು ಒಂದೇ ನೀತಿ ಅದು ಸಾಮೂಹಿಕ ನಾಯಕತ್ವದ ನೀತಿ. ಇದೇ ನಮ್ಮ ಬದ್ಧತೆ” ಎಂದು ಹೇಳಿದ್ದಾರೆ.
ಚುನಾವಣಾ ಆಯೋಗದ ಅಧಿಕಾರಿಗಳು ಶಿವಕುಮಾರ್ ಅವರ ಹಿಂದೆ ಬಿದ್ದಿದ್ದಾರಾ ಎಂಬ ಪ್ರಶ್ನೆಗೆ, “ರಾಜಕೀಯದಲ್ಲಿ ಇದೆಲ್ಲ ಸಹಜ. ಎಲ್ಲರನ್ನು ನಿಭಾಯಿಸಿಕೊಂಡು ಹೋಗಬೇಕು” ಎಂದು ಹೇಳಿದ್ದಾರೆ.