“ಪ್ರಜ್ವಲ್ ರೇವಣ್ಣ ಅವರ ಪೆನ್ಡ್ರೈವ್ ವಿಚಾರದಲ್ಲಿ ಕುಮಾರಸ್ವಾಮಿ ಆಗಾಗ್ಗೆ ನಿಲುವು ಬದಲಿಸುತ್ತಿರುವುದು ಏಕೆ” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ.
ಬೆಂಗಳೂರಿನ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಪೆನ್ಡ್ರೈವ್ ಅವರ ಕುಟುಂಬದ ವಿಚಾರ. ಆದರೆ ಕುಮಾರಸ್ವಾಮಿ ಮಾತು ಆಗಾಗ್ಗೆ ಬದಲಾಗುತ್ತಲೇ ಬಂದಿದೆ. ಬೇಕಿದ್ದರೆ ಕಳೆದ ವಿಧಾನಸಭೆ ಚುನಾವಣೆಯಿಂದ ಈಚೆಗೆ ಅವರ ಕುಟುಂಬ ಸದಸ್ಯರ ಹೇಳಿಕೆಗಳನ್ನು ನೋಡಿಕೊಂಡು ಬನ್ನಿ” ಎಂದು ಪತ್ರಕರ್ತರಿಗೆ ಸಲಹೆ ನೀಡಿದರು.
“ಈಗ ಪೆನ್ಡ್ರೈವ್ ಪ್ರಕರಣದಲ್ಲೂ ಕುಮಾರಸ್ವಾಮಿ ಅವರು ಗಂಟೆಗೊಂದು, ಗಳಿಗೆಗೊಂದು ಹೇಳಿಕೆ ನೀಡುತ್ತಿದ್ದಾರೆ. ನಿಲುವು ಬದಲಿಸುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಮೇ 7ರ ನಂತರ ಈ ಪ್ರಕರಣ ಎಲ್ಲಿಗೆ ಹೋಗುತ್ತೆ ಎಂದು ಎಲ್ಲರಿಗೂ ಗೊತ್ತು ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಮೇ 7ರವರೆಗೆ ಯಾಕೆ ಕಾಯಬೇಕು? ಇದರ ಮೂಲ ಏನು? ಇದರ ಹಿನ್ನೆಲೆ ಯಾರು ಎಂದು ನಾವು ಬಿಚ್ಚಿ ಇಡಬೇಕಾ? ಇದು ಅವರ ಕುಟುಂಬದ ಆಂತರಿಕ ವಿಚಾರ. ಈ ಬಗ್ಗೆ ಮಾಧ್ಯಮದವರು ವಿಶ್ಲೇಷಣೆ ಮಾಡಿದ್ದಾರೆ. ಕುಮಾರಸ್ವಾಮಿ ಅವರೇ, “ಉಪ್ಪು ತಿಂದವರು ನೀರು ಕುಡಿಯಬೇಕು, ನಮ್ಮ ಕುಟುಂಬ ಬೇರೆ, ಅವರ ಕುಟುಂಬ ಬೇರೆ” ಎಂದು ಹೇಳಿದ್ದಾರೆ. ಹಿಂದೆ ನಮ್ಮ ಕುಟುಂಬದವರಿಗೆ ಟಿಕೆಟ್ ನೀಡುವುದಿಲ್ಲ ಎಂದು ಹೇಳಿದ್ದೂ ಅವರೇ. ಪ್ರಜ್ವಲ್ನಿಂದ ತಪ್ಪಾಗಿದೆ ಕ್ಷಮಿಸಿ ಎಂದು ಅವರು ಕ್ಷಮೆ ಕೇಳಿದ್ದು ಅವರೇ. ಆದರೆ ಕುಮಾರಸ್ವಾಮಿ ಈಗ ತಮ್ಮ ನಿಲುವು ಬದಲಿಸುತ್ತಿರುವುದೇಕೆ?” ಎಂದರು.
ಇದನ್ನು ಓದಿದ್ದೀರಾ? ಪ್ರಜ್ವಲ್ ಪ್ರಕರಣದಿಂದ ದೇವೇಗೌಡರು ತುಂಬಾ ನೊಂದಿದ್ದಾರೆ: ಮೊದಲ ಬಾರಿಗೆ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ
ರಾಜ್ಯದಲ್ಲಿ ಒಕ್ಕಲಿಗರ ನಾಯಕತ್ವಕ್ಕಾಗಿ ಇಂತಹ ಪ್ರಕರಣಗಳು ಆಚೆ ಬರುತ್ತಿವೆ ಎಂಬ ಮಾತಿನ ಬಗ್ಗೆ ಕೇಳಿದಾಗ, “ಇದೆಲ್ಲವೂ ಬಿಜೆಪಿ ಸೃಷ್ಟಿಸಿರುವ ಚರ್ಚೆಗಳು. ನನಗೆ ಯಾವುದೇ ನಾಯಕತ್ವ ಬೇಡ. ಕಾಂಗ್ರೆಸ್ ಪಕ್ಷ ನಾಲ್ಕು ವರ್ಷಗಳ ಹಿಂದೆಯೇ ನನ್ನನ್ನು ರಾಜ್ಯಾಧ್ಯಕ್ಷನನ್ನಾಗಿ ಮಾಡಿದೆ. ನಾನು ಕಾಂಗ್ರೆಸ್ ಅಧ್ಯಕ್ಷ . ಬಿಜೆಪಿಗರು ಗಂಟೆಗೊಂದು ಘಳಿಗೆಗೊಂದು ಮಾತನಾಡುತ್ತಿದ್ದಾರೆ. ನಾನು ಒಕ್ಕಲಿಗನಾಗಿ ಹುಟ್ಟಿದ್ದೇನೆ. ಆ ಸಮಾಜಕ್ಕೆ ರಕ್ಷಣೆ ಕೊಡುವ ಜವಾಬ್ದಾರಿ ಇದೆ. ಈ ಸಮುದಾಯದ ಜನರ ಸ್ವಾಭಿಮಾನ, ಗೌರವ ಉಳಿಸಲು ನಾನು ಅವರ ಸೇವೆ ಮಾಡುತ್ತೇನೆ. ಅದು ನನ್ನ ಧರ್ಮ. ಉಳಿದಂತೆ ನನಗೆ ನಾಯಕತ್ವದ ಪಟ್ಟ ಬೇಡ” ಎಂದರು.
