ಭಾರತೀಯ ಕುಸ್ತಿ ಫೆಡರೇಷನ್ನ ಮಾಜಿ ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಬಂಧನಕ್ಕೆ ಆಗ್ರಹಿಸಿ ನಡೆಸುತ್ತಿರುವ ಪ್ರತಿಭಟನೆಯನ್ನು ಖ್ಯಾತನಾಮ ಕುಸ್ತಿಪಟುಗಳು ತಾತ್ಕಾಲಿವಾಗಿ ನಿಲ್ಲಿಸಲು ನಿರ್ಧರಿಸಿದ್ದಾರೆ.
ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರ ಜೊತೆ ಕುಸ್ತಿಪಟುಗಳು ಬುಧವಾರ, ಸುಮಾರು ಆರು ಗಂಟೆಗಳಿಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ. ಸಭೆಯಲ್ಲಿ ಕೇಂದ್ರ ಸಚಿವರು ನೀಡಿದ ಭರವಸೆಯ ಮೇರೆಗೆ ಜೂನ್ 15ರವರೆಗೆ ಪ್ರತಿಭಟನೆ ನಿಲ್ಲಿಸಲು ಕುಸ್ತಿಪಟುಗಳು ನಿರ್ಧರಿಸಿದ್ದಾರೆ.
ಮಹಿಳಾ ಕುಸ್ತಿಪಟುಗಳು ದಾಖಲಿಸಿರುವ ಲೈಂಗಿಕ ದೌರ್ಜನ್ಯ ದೂರಿನ ವಿಚಾರಣೆಯನ್ನು ಜೂನ್ 15ರೊಳಗೆ ಮುಗಿಸಿ, ಚಾರ್ಜ್ ಶೀಟ್ ಸಲ್ಲಿಸಲಾಗುವುದು ಎಂದು ಸಭೆಯ ವೇಳೆ ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಭರವಸೆ ನೀಡಿದ್ದು, ಅಲ್ಲಿಯವರೆಗೆ ಪ್ರತಿಭಟನೆಯಿಂದ ಹಿಂದೆ ಸರಿಯುತ್ತಿರುವುದಾಗಿ ಸಾಕ್ಷಿ ಮಲಿಕ್ ಹೇಳಿದ್ದಾರೆ.
ಕೇಂದ್ರ ಸಚಿವರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಕುಸ್ತಪಟುಗಳು ಪ್ರಮುಖವಾಗಿ ಐದು ಬೇಡಿಕೆಗಳನ್ನು ಮುಂದಿರಿಸಿದ್ದಾರೆ ಎನ್ನಲಾಗಿದೆ.
ಸಭೆಯ ಬಳಿಕ ಮಾತನಾಡಿದ ಕುಸ್ತಿಪಟು ಬಜರಂಗ್ ಪುನಿಯಾ, ʻಕೇಂದ್ರ ಕ್ರೀಡಾ ಸಚಿವರ ಜೊತೆ ನಾವು ಕೆಲವು ವಿಷಯಗಳ ಕುರಿತು ಚರ್ಚೆ ನಡೆಸಿದ್ದೇವೆ. ಜೂನ್ 15 ರೊಳಗಾಗಿ ಪೊಲೀಸ್ ತನಿಖೆಯನ್ನು ಪೂರ್ಣಗೊಳಿಸಲಾಗುವುದು ಮತ್ತು ಅಲ್ಲಿಯವರೆಗೆ ಪ್ರತಿಭಟನೆ ನಡೆಸದಂತೆ ಸಚಿವರು ನಮಗೆ ಮನವಿ ಮಾಡಿದ್ದಾರೆʼ ಎಂದು ಪುನಿಯಾ ಹೇಳಿದ್ದಾರೆ.