ಬೆಂಗಳೂರಿನಲ್ಲಿ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್ ಅಳವಡಿಸುವವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಅದರಂತೆ ಇದುವರೆಗೆ ಪೊಲೀಸ್ ಠಾಣೆಯಲ್ಲಿ 76 ದೂರುಗಳನ್ನು ನೀಡಿದ್ದು, 48 ಎಫ್ಐಆರ್ ದಾಖಲಿಸಲಾಗಿದೆ ಎಂದು ಪಾಲಿಕೆ ಹೇಳಿದೆ.
ಪಾಲಿಕೆ ವ್ಯಾಪ್ತಿಯಲ್ಲಿ ಯಾವುದೇ ಅನಧಿಕೃತ ಜಾಹೀರಾತುಗಳು ಇರದಂತೆ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ. ಅದರಂತೆ ಮುಖ್ಯ ಆಯುಕ್ತರು ಸೂಚನೆ ಮೇರೆಗೆ ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ಅವರು ಎಲ್ಲ 8 ವಲಯಗಳ ಅಧಿಕಾರಿಗಳ ಜೊತೆ ಪ್ರತಿನಿತ್ಯ ಪರಿಶೀಲನಾ ಸಭೆ ನಡೆಸುತ್ತಿದ್ದಾರೆ. ಯಾವುದೇ ಅನಧಿಕೃತ ಜಾಹೀರಾತುಗಳು ಇರದಂತೆ ಸೂಚನೆ ನೀಡುವ ಜೊತೆಗೆ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್ ಹಾಕುವವರ ಮೇಲೆ ಎಫ್ಐಆರ್ ದಾಖಲಿಸಲು ಸೂಚನೆ ನೀಡಿದ್ದಾರೆ ಎಂದು ತಿಳಿಸಿದೆ.
ನಗರದಾದ್ಯಂತ ಜೂನ್ 1ರಿಂದ ನಿನ್ನೆಯವರೆಗೆ 3,843 ಫ್ಲೆಕ್ಸ್, ಬ್ಯಾನರ್, ಎಲ್ಇಡಿ ಹಾಗೂ ಹೋರ್ಡಿಂಗ್ಸ್ಗಳನ್ನು ತೆರವುಗೊಳಿಸಲಾಗಿದೆ. ಪೊಲೀಸ್ ಠಾಣೆಯಲ್ಲಿ 76 ದೂರುಗಳನ್ನು ದಾಖಲಿಸಿದ್ದು, ಅದರಲ್ಲಿ 48 ಎಫ್ಐಆರ್ ಗಳನ್ನು ದಾಖಲಿಸಲಾಗಿದೆ. ₹75,000 ದಂಡ ವಿಧಿಸಲಾಗಿದೆ ಎಂದು ಹೇಳಿದೆ.
ಅನಧಿಕೃತ ಜಾಹೀರಾತು ಅಳವಡಿಸದಿರಲು ಕೋರಿಕೆ
ಪಾಲಿಕೆಯ ವ್ಯಾಪ್ತಿಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ‘ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಹೊರಾಂಗಣ ಜಾಹೀರಾತು ಫಲಕ ಮತ್ತು ಸಾರ್ವಜನಿಕ ಸಂದೇಶದ ಉಪ ವಿಧಿಗಳು-2018’ರಲ್ಲಿ ಯಾವುದೇ ವಸತಿ ಪ್ರದೇಶಗಳಲ್ಲಿ, ಖಾಸಗಿ ಸ್ವತ್ತುಗಳಲ್ಲಿ ಜಾಹೀರಾತು ಫಲಕಗಳನ್ನು ಅಳವಡಿಸಿ ವಾಣಿಜ್ಯ ಜಾಹೀರಾತುಗಳನ್ನು, ಎಲ್ಇಡಿ ಜಾಹೀರಾತುಗಳನ್ನು ಪ್ರದರ್ಶಿಸುವುದನ್ನು ಹಾಗೂ ಸಾರ್ವಜನಿಕ ಮತ್ತು ವೈಯಕ್ತಿಕ ಜಾಹೀರಾತುಗಳು, ಶುಭಾಶಯಗಳು, ಸಭೆ ಸಮಾರಂಭಗಳು ಕುರಿತ ಜಾಹೀರಾತು, ಪ್ರಕಟಣೆಗಳ ಪ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್, ಭಿತ್ತಿಪತ್ರ, ಬಾವುಟಗಳು ಇತ್ಯಾದಿ ಅಳವಡಿಸುವುದನ್ನು ನಿಷೇಧಿಸಲಾಗಿದೆ. ಆದ್ದರಿಂದ ಯಾರೊಬ್ಬರೂ ಕೂಡಾ ಅನಧಿಕೃತವಾಗಿ ಜಾಹೀರಾತು ಅಳವಡಿಸದಿರಲು ಮನವಿ ಮಾಡಿದೆ.
ಈ ಸುದ್ದಿ ಓದಿದ್ದೀರಾ? ದರ್ಶನ್ ಪ್ರಕರಣ | ಆರೋಪಿಗಳ ಹೆಚ್ಚಿನ ವಿಚಾರಣೆಗಾಗಿ ಮತ್ತೆ 5 ದಿನ ಪೊಲೀಸ್ ಕಸ್ಟಡಿ ವಿಸ್ತರಣೆ
ಅನಧಿಕೃತ ಜಾಹೀರಾತುಗಳಿಂದ ನಗರದ ಸೌಂದರ್ಯ ಹಾಳು
ನಗರದ ರಸ್ತೆ ಬದಿ, ಪಾದಚಾರಿ ಮಾರ್ಗ, ಮೇಲುಸೇತುವೆ ಸೇರಿದಂತೆ ಇನ್ನಿತರೆ ಕಡೆ ಅನಧಿಕೃತವಾಗಿ ಪ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್ ಅಳವಡಿಸುವುದರಿಂದ ನಾಗರೀಕರ ಸುಗಮ ಸಂಚಾರಕ್ಕೆ ಅಡ್ಡಿಯಾಗುವುದರ ಜತೆಗೆ ನಗರದ ಸೌಂದರ್ಯ ಹಾಳಾಗುತ್ತಿದೆ. ಅಲ್ಲದೆ ಪರಿಸರಕ್ಕೆ ಮಾರಕವಾಗಿರುತ್ತದೆ.
ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತುಗಳ ಕುರಿತು ನಾಗರಿಕರು ಪಾಲಿಕೆ ಸಹಾಯವಾಣಿ ಸಂಖ್ಯೆಯಾದ 1533 ಅಥವಾ ಜಾಹೀರಾತು ವಿಭಾಗದ ವ್ಯಾಟ್ಸಪ್ ಸಂಖ್ಯೆ 9480683939ಗೆ ಛಾಯಾಚಿತ್ರ ಅಥವಾ ವೀಡಿಯೋ ಮಾಡಿ ವಿಳಾಸ ಸಹಿತ ಕಳುಹಿಸಿದಲ್ಲಿ ಪಾಲಿಕೆ ವತಿಯಿಂದ ಕೂಡಲೇ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದೆ.