ಬೆಂಗಳೂರಿನಲ್ಲಿ ಅನುಮತಿ ಪಡೆಯದೇ ರಸ್ತೆಯಲ್ಲಿ ಮುಸ್ಲಿಮರು ನಮಾಜ್ ಮಾಡಿದ್ದಾರೆ ಎಂದು ಆರೋಪಿಸಿ ಮಸೀದಿ ಮುಖ್ಯಸ್ಥರ ವಿರುದ್ಧ ಹಿಂದುತ್ವ ಕೋಮುವಾದಿ ಹೋರಾಟಗಾರ ತೇಜಸ್ ಗೌಡ ಎಂಬುವವರು ದೂರು ದಾಖಲಿಸಿದ್ದಾರೆ.
ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಸಿದ್ದಾಪುರ ವಾರ್ಡ್ನಲ್ಲಿರುವ ಅತೀಕ್ ಮಸೀದಿ ಬಳಿ ಭಾನುವಾರ ರಸ್ತೆಯಲ್ಲಿ ನಮಾಜ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಮುಸ್ಲಿಮರು ರಸ್ತೆಯಲ್ಲಿ ಕುಳಿತು ನಮಾಜ್ ಮಾಡುತ್ತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿಡಾಡುತ್ತಿದೆ. ಈ ಬಗ್ಗೆ ಪರ-ವಿರೋಧ ಚರ್ಚೆಗಳೂ ನಡೆಯುತ್ತಿವೆ. ತೇಜಸ್ ಗೌಡ ನೀಡಿದ ದೂರಿನ ಆಧಾರದ ಮೇಲೆ ಸಿದ್ದಾಪುರ ಠಾಣೆಯ ಪೊಲೀಸರು ಎನ್ಸಿಆರ್ ದಾಖಲಿಸಿದ್ದಾರೆ.
“ಮುಸ್ಲಿಮರು ನಮಾಜ್ ಮಾಡಿದ್ದರಿಂದ ರಸ್ತೆಯಲ್ಲಿ ವಾಹನ ಸಂಚಾರ ದಟ್ಟಣೆ ಉಂಟಾಗಿತ್ತು. ಅಲ್ಲದೇ, ಸೋಮೇಶ್ವರ ನಗರ ಮುಖ್ಯರಸ್ತೆಯಲ್ಲಿ ಸರ್ಕಾರಿ ಆಸ್ಪತ್ರೆಗಳಾದ ನಿಮ್ಹಾನ್ಸ್, ಕಿದ್ವಾಯಿ, ರಾಜೀವ್ ಗಾಂಧಿ, ಸಂಜಯ್ ಗಾಂಧಿ ಆಸ್ಪತ್ರೆಗಳಿವೆ. ಈ ರಸ್ತೆಯಲ್ಲಿ ಆಂಬ್ಯುಲೆನ್ಸ್ಗಳು ಹೆಚ್ಚಾಗಿ ಸಂಚರಿಸುತ್ತಿರುತ್ತವೆ. ರಸ್ತೆಯಲ್ಲಿ ನಮಾಜ್ ಮಾಡಿದ್ದರಿಂದ ಸಾರ್ವಜನಿಕರಿಗೆ ತೊಂದರೆ ಆಗಿತ್ತು” ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ಮಾರ್ಚ್ 1ರಂದು ಟ್ಯಾಂಕರ್ ಮಾಲೀಕರೊಂದಿಗೆ ಸಭೆ: ತುಷಾರ್ ಗಿರಿನಾಥ್
“ರಸ್ತೆಯಲ್ಲಿ ನಮಾಜ್ ಮಾಡಿದ ಕಾರಣ ಸಾರ್ವಜನಿಕರಿಗೆ ತೊಂದರೆಯಾಗಿದೆ. ಸಾರ್ವಜನಿಕ ರಸ್ತೆಯಲ್ಲಿ ಈ ರೀತಿ ನಮಾಜ್ ಮಾಡುವುದು ಕಾನೂನು ಬಾಹಿರವಾಗಿದೆ. ಅಲ್ಲದೇ, ಅನ್ಯ ಕೋಮಿನ ಭಾವನೆಗಳನ್ನು ಪ್ರಚೋದಿಸುವಂತೆ ಧಕ್ಕೆಯುಂಟಾಗುವಂತೆ ವರ್ತಿಸಿದ್ದಾರೆ. ಹಾಗಾಗಿ, ಅತೀಕ್ ಮಸೀದಿ ಮುಖ್ಯಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಮತ್ತೆ ಈ ರೀತಿ ಮರುಕಳಿಸದಂತೆ ನೋಡಿಕೊಳ್ಳಬೇಕು. ಕಾನೂನು ಎಲ್ಲರಿಗೂ ಒಂದೇ ಎಂಬುದನ್ನು ಅವರಿಗೆ ತಿಳಿಸಿಕೊಡಬೇಕು” ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.