ಕಳೆದ ಐದು ತಿಂಗಳ ಸುದೀರ್ಘ ಅಂತರದ ನಂತರ ಮೇ 3ರಂದು ಬೆಂಗಳೂರು ಸೇರಿದಂತೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ವ್ಯಾಪ್ತಿಯ ಎಂಟು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ಮಳೆಗೆ 305 ವಿದ್ಯುತ್ ಕಬಗಳು ಧರೆಗುರುಳಿದ್ದು, 57 ವಿದ್ಯುತ್ ಪರಿವರ್ತಕಗಳಿಗೆ ಹಾನಿಯಾಗಿದೆ. ಮೂಲಸೌಕರ್ಯ ಹಾನಿಯಿಂದಾಗಿ ಬೆಸ್ಕಾಂಗೆ ₹ 1.18 ಕೋಟಿ ನಷ್ಟವಾಗಿದೆ.
ಹವಾಮಾನ ವೈಪರೀತ್ಯದಿಂದ 33 ಹೈಟೆನ್ಷನ್ ಕಂಬಗಳು, 29 ಲೋ ಟೆನ್ಶನ್ ಕಂಬಗಳು, 11 ಟ್ರಾನ್ಸ್ ಫಾರ್ಮರ್ಗಳು ಸೇರಿದಂತೆ 305 ವಿದ್ಯುತ್ ಕಂಬಗಳು ಹಾನಿಗೀಡಾಗಿವೆ. ದುರಸ್ತಿಗೆ ₹25.63 ಲಕ್ಷ ತಗಲಬಹುದೆಂದು ಅಂದಾಜಿಸಲಾಗಿದೆ. ಇದಲ್ಲದೆ, 57 ಟ್ರಾನ್ಸ್ಫಾರ್ಮರ್ಗಳು ಮತ್ತು 18 ಡಬಲ್ ಕಂಬಗಳು ಹಾನಿಗೊಳಗಾಗಿದ್ದು, ಕ್ರಮವಾಗಿ ₹86.20 ಲಕ್ಷ ಮತ್ತು ₹6.67 ಲಕ್ಷ ದುರಸ್ತಿ ವೆಚ್ಚವಾಗಿದೆ ಎಂದು ಬೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ಈ ಎಲ್ಲದರ ದುರಸ್ತಿಗೆ ₹1.18 ಕೋಟಿ ಅಂದರೆ, 118.50 ಲಕ್ಷ ವೆಚ್ಚವಾಗಲಿದೆ ಎಂದು ಶನಿವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
“ಮಳೆಯಿಂದ ಹಾನಿ ಉಂಟಾದ ಪ್ರದೇಶಗಳಿಗೆ ರಾತ್ರಿ 9 ಗಂಟೆಗೆ ವಿದ್ಯುತ್ ಪೂರೈಕೆಯನ್ನು ಪುನಃ ನೀಡಲಾಯಿತು. ಮುಂದೆ ಉಂಟಾಗುವ ಇಂತಹ ಘಟನೆಗಳನ್ನು ತಪ್ಪಿಸಲು ಹಾಗೂ ನಿರಂತರ ವಿದ್ಯುತ್ ಪೂರೈಕೆಯನ್ನು ನೀಡಲು ಕೆಲವು ತಡೆಗಟ್ಟುವ ಕ್ರಮಗಳನ್ನು ಅನುಷ್ಠಾನಗೊಳಿಸುವಲ್ಲಿ ಬೆಸ್ಕಾಂ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ” ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಮಳೆ ಹಾನಿಯಿಂದಾಗಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಶುಕ್ರವಾರ ಗಂಟೆಗಟ್ಟಲೆ ವಿದ್ಯುತ್ ಪೂರೈಕೆಯಾಗಿಲ್ಲ. ಬೆಸ್ಕಾಂ ಸಹಾಯವಾಣಿಗೆ ವಿದ್ಯುತ್ ಕಡಿತದ ಬಗ್ಗೆ 16,500 ದೂರುಗಳು ಬಂದಿವೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಶನಿವಾರ ಕೂಡ ಎಚ್ಎಸ್ಆರ್ ಲೇಔಟ್, ವೈಟ್ಫೀಲ್ಡ್, ಎಲೆಕ್ಟ್ರಾನಿಕ್ಸ್ ಸಿಟಿ, ಮಾರತ್ತಹಳ್ಳಿ ಮತ್ತು ಪೂರ್ವ ಬೆಂಗಳೂರಿನ ಇತರ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ.
ಬೆಸ್ಕಾಂ ಅಭಿಯಂತರರು ಹಾಗೂ ಸಿಬ್ಬಂದಿ ಸ್ಥಳಕ್ಕೆ ತೆರಳಿದ್ದು, ದುರಸ್ಥಿ ಕಾರ್ಯದಲ್ಲಿ ತೊಡಗಿದ್ದಾರೆ. ಬಹುತೇಕ ಕಡೆಗಳಲ್ಲಿ ವಿದ್ಯುತ್ ಪೂರೈಕೆ ಪುನಾರಂಭಗೊಂಡಿದೆ. ಕೆಲ ಪ್ರದೇಶದಲ್ಲಿ ಭಾರೀ ಗಾಳಿಗೆ ವಿದ್ಯುತ್ ಕಂಬಗಳ ಮೇಲೆ ಬಿದ್ದಿರುವ ಮರ ಹಾಗೂ ಕೊಂಬೆಗಳನ್ನು ತೆರವುಗೊಳಿಸಲಾಗಿದೆ. ಮುರಿದಿರುವ ಕಂಬಗಳ ಬದಲಾವಣೆ ಮಾಡಿ, ಆದಷ್ಟು ಬೇಗ ವಿದ್ಯುತ್ ಪೂರೈಕೆಗೆ ಕ್ರಮ ವಹಿಸಲಾಗಿದೆ ಎಂದು ತಿಳಿಸಿದೆ.
ಬೆಂಗಳೂರಿನಲ್ಲಿ ಶನಿವಾರ ಮಳೆಯಾಗಿಲ್ಲ. ಭಾನುವಾರ ಮಳೆಯಾಗುವ ಸಾಧ್ಯತೆ ಕಡಿಮೆಯಿದ್ದರೂ, ಸೋಮವಾರ ಸ್ವಲ್ಪ ಮಳೆಯಾಗುವ ಸಾಧ್ಯತೆಗಳಿವೆ. ಮೇ 8ರ ನಂತರ ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಅಧಿಕಾರಿಗಳು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಅಂತರ್ಜಲ ಹೆಚ್ಚಳಕ್ಕೆ ಕ್ರಮ; ಒಂದು ತಿಂಗಳಲ್ಲಿ 986 ಮಳೆ ನೀರು ಇಂಗುಗುಂಡಿ ನಿರ್ಮಾಣ
“ಮೇ 6 ಮತ್ತು 7 ರಂದು ಸ್ವಲ್ಪ ಮಳೆಯಾಗಬಹುದಾದರೂ, ಮೇ 8ರಿಂದ ದಕ್ಷಿಣ ಕರ್ನಾಟಕದಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ. ಅದರ ನಂತರ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ತಾಪಮಾನವು 2 ರಿಂದ 3 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುತ್ತದೆ. ಉತ್ತರ ಒಳನಾಡಿನಲ್ಲಿ ಮೇ 10ರ ನಂತರ ತಾಪಮಾನ ಕಡಿಮೆಯಾಗಲಿದೆ” ಎಂದು ಐಎಂಡಿ ಬೆಂಗಳೂರು ನಿರ್ದೇಶಕ ಸಿ.ಎಸ್.ಪಾಟೀಲ್ ಹೇಳಿದ್ದಾರೆ.
ಶನಿವಾರ ಬೆಂಗಳೂರು ನಗರದಲ್ಲಿ ಗರಿಷ್ಠ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ಆಗಿದ್ದರೆ, ಕನಿಷ್ಠ 23.3 ಡಿಗ್ರಿ ಸೆಲ್ಸಿಯಸ್ ಇತ್ತು. ಕೆಐಎನಲ್ಲಿ ಗರಿಷ್ಠ 37.5 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ಇತ್ತು. ಎಚ್ಎಎಲ್ ವಿಮಾನ ನಿಲ್ದಾಣದಲ್ಲಿ ಗರಿಷ್ಠ 36.6 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 22.6 ಡಿಗ್ರಿ ಸೆಲ್ಸಿಯಸ್ ಇತ್ತು.