ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ) ಮೇ ತಿಂಗಳಲ್ಲಿ ಟಿಕೆಟ್ ರಹಿತವಾಗಿ ಪ್ರಯಾಣಿಸಿದ ಪ್ರಯಾಣಿಕರಿಂದ ರಾಜ್ಯಾದ್ಯಂತ ₹6.54 ಲಕ್ಷ ದಂಡವನ್ನು ಸಂಗ್ರಹಿಸಿದೆ.
ಕರ್ನಾಟಕ ಮತ್ತು ನೆರೆಯ ರಾಜ್ಯಗಳಲ್ಲಿ ಸಂಚರಿಸುವ 42,680 ಬಸ್ಗಳಲ್ಲಿ ಪರಿಶೀಲನೆ ನಡೆಸಲಾಗಿದೆ. ತಪಾಸಣೆ ವೇಳೆ 3,708 ಕಳ್ಳತನ ಪ್ರಕರಣಗಳನ್ನು ಪತ್ತೆಹಚ್ಚಲಾಗಿದೆ. 3,754 ಟಿಕೆಟ್ ರಹಿತ ಪ್ರಯಾಣಿಕರಿಗೆ ದಂಡ ವಿಧಿಸಲಾಗಿದೆ. ಸಿಬ್ಬಂದಿಗೆ ₹88,429 ದಂಡ ವಿಧಿಸಲಾಗಿದೆ ಎಂದು ಕೆಎಸ್ಆರ್ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.
ನಿಗಮವು ಆದಾಯ ಸೋರಿಕೆ ತಡೆಯುವ ನಿಟ್ಟಿನಲ್ಲಿ ಜಾಗರೂಕತೆಯನ್ನು ಹೆಚ್ಚಿಸಿದ್ದು, ಕಣ್ಗಾವಲನ್ನೂ ಹೆಚ್ಚಿಸಿದೆ. ತಪ್ಪಿತಸ್ಥ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗಿದೆ. ವಿಭಾಗೀಯ ಮತ್ತು ಕೇಂದ್ರೀಯ ಅಧಿಕಾರಿಗಳ ಮೂಲಕ ಪ್ರತಿದಿನ ಟಿಕೆಟ್ ರಹಿತ ಪ್ರಯಾಣಿಕರ ಮೇಲೆ ನಿಗಾ ಇಡುವುದಾಗಿ ಕೆಎಸ್ಆರ್ಟಿಸಿ ತಿಳಿಸಿದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಅಂಗನವಾಡಿ ಕೇಂದ್ರಗಳಲ್ಲೇ ಎಲ್ಕೆಜಿ–ಯುಕೆಜಿ ತರಗತಿ ಪ್ರಾರಂಭಿಸಿ; ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ
ಇದೀಗ ಟಿಕೆಟ್ ರಹಿತ ಪ್ರಯಾಣಿಕರ ವಿರುದ್ಧದ ಕಾರ್ಯಾಚರಣೆ, ದಂಡ ಸಂಗ್ರಹದಿಂದ ಕೆಎಸ್ಆರ್ಟಿಸಿ ಖಜಾನೆಗೆ ಲಕ್ಷಾಂತರ ರೂ. ಸೇರ್ಪಡೆಯಾದಂತಾಗಿದೆ. ಪ್ರಯಾಣಿಕರು ಬಸ್ನಲ್ಲಿ ಪ್ರಯಾಣಿಸುವಾಗ ಸರಿಯಾದ ಟಿಕೆಟ್ / ಪಾಸ್ ಪಡೆದು ಪ್ರಯಾಣ ಮಾಡುವಂತೆ ನಿಗಮವು ಪ್ರಯಾಣಿಕರಲ್ಲಿ ಮನವಿ ಮಾಡಿದೆ.