- ಅಮುಲ್ ಮೂಲಕ ಕೆಎಂಎಫ್ ಬಲಿ ಪಡೆಯುವ ಎಲ್ಲ ರೀತಿಯ ಪ್ರಯತ್ನ ನಡೆಯುತ್ತಿವೆ
- ನಂದಿನಿʼ ನಾಶ ಮಾಡಲು ಪ್ರಧಾನಿ ಮೋದಿ, ಸಚಿವ ಅಮಿತ್ ಶಾ ಸಂಚು ರೂಪಿಸಿದ್ದಾರೆ
ರಾಜ್ಯ ಬಿಜೆಪಿಯ ದುರ್ಬಲ ನಾಯಕತ್ವದಿಂದಾಗಿ ನಾಡಿನ ಲಕ್ಷಾಂತರ ಹೈನುಗಾರಿಕೆ ಕುಟುಂಬಗಳ ಜೀವನಾಧಾರವಾಗಿರುವ ಕೆಎಂಎಫ್ಅನ್ನು ಬಲಿ ಪಡೆಯುವ ಎಲ್ಲ ರೀತಿಯ ಪ್ರಯತ್ನಗಳು ಆರಂಭವಾಗಿದ್ದು, ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಅವರು ನೇರ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.
ಈ ಬಗ್ಗೆ ಶುಕ್ರವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ, ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳ ವಿರುದ್ಧ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
“ಕರ್ನಾಟಕದಲ್ಲಿ ನಮ್ಮ ಹಿರಿಯರು ಕಟ್ಟಿ ಬೆಳೆಸಿದ್ದ ಬ್ಯಾಂಕುಗಳನ್ನು ತಿಂದು ಮುಕ್ಕಿದ್ದಾಯಿತು. ಈಗ ರೈತರ ಪಾಲಿನ ಸಂಜೀವಿನಿಯಾಗಿರುವ ನಂದಿನಿಯನ್ನು ಆಪೋಶನ ತೆಗೆದುಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಸಂಚು ಹೂಡಿದ್ದಾರೆ. ಕನ್ನಡಿಗರೇ ಎಚ್ಚರ” ಎಂದಿದ್ದಾರೆ.
“ಕೆಎಂಎಫ್ ಮತ್ತು ಅಮುಲ್ ಸಂಸ್ಥೆಗಳ ವಿಲೀನದ ಬಗ್ಗೆ ಕೇಂದ್ರ ಸಹಕಾರ ಸಚಿವರೂ ಆಗಿರುವ ಅಮಿತ್ ಶಾ ಪ್ರಸ್ತಾಪ ಮಾಡಿದ ದಿನದಿಂದ ರಾಜ್ಯದ ಹೈನು ಉದ್ಯಮಕ್ಕೆ ಗರ ಬಡಿದಿದೆ. ವಿಲೀನದ ಪ್ರಸ್ತಾವಕ್ಕೆ ಕನ್ನಡಿಗರ ತೀವ್ರ ವಿರೋಧದ ಹಿನ್ನೆಲೆಯಲ್ಲಿ ಹಿಂಬಾಗಿಲಿನಿಂದ ಅಮುಲ್ ಪ್ರವೇಶಿಸುತ್ತಿದೆ” ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ 2022 | ಕನ್ನಡ ಅನುಷ್ಠಾನಕ್ಕೆ ಹಿನ್ನಡೆ!
ಅಮಿತ್ ಶಾ ಉಸ್ತುವಾರಿಯಲ್ಲಿ ನಡೆಯುತ್ತಿದೆ
“ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ನಂದಿನಿ ಹಾಲು ಮತ್ತು ಮೊಸರು ಮಾರುಕಟ್ಟೆಯಲ್ಲಿ ಮಾಯವಾಗುತ್ತಿದೆ. ಇದೇ ವೇಳೆ ಅಮುಲ್ ಉತ್ಪನ್ನಗಳ ಮಾರಾಟ ಭರದಿಂದ ಪ್ರಾರಂಭವಾಗಿದೆ. ಸಚಿವ ಅಮಿತ್ ಶಾ ನೇರ ಉಸ್ತುವಾರಿಯಲ್ಲಿಯೇ ಇವೆಲ್ಲ ನಡೆಯುತ್ತಿದೆ ಎನ್ನುವುದು ನಿಸ್ಸಂಶಯ. ಗುಜರಾತ್ ಮೂಲದ ಅಮುಲ್ ಹಾಲು ಮತ್ತು ಮೊಸರು ಮಾರಾಟದ ಮೂಲಕ ಕರ್ನಾಟಕದ ಮಾರುಕಟ್ಟೆ ಪ್ರವೇಶಿಸಲು ಹಿಂದೆಯೂ ಪ್ರಯತ್ನಿಸಿತ್ತು. ಅದಕ್ಕೆ ನಾವು ಅವಕಾಶ ಕೊಡಲಿಲ್ಲ. ಈಗ ಬಿಜೆಪಿ ಕೆಂಪುಕಂಬಳಿ ಹಾಸಿ ಸ್ವಾಗತಿಸಿದೆ” ಎಂದು ವಾಗ್ದಾಳಿ ನಡೆಸಿದರು.
“ಬಿಜೆಪಿ ಆಡಳಿತಾವಧಿಯಲ್ಲಿ ಕೆಎಂಎಫ್ ನಲ್ಲಿ ಹಾಲಿನ ಸಂಗ್ರಹ ಕಡಿಮೆಯಾಗುತ್ತಿದೆ. ದಿನಕ್ಕೆ 99 ಲಕ್ಷ ಲೀಟರ್ ಹಾಲು ಸಂಗ್ರಹವಾಗಬೇಕಾಗಿದ್ದ ಕಡೆ ಕೇವಲ 71 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿದೆ. ಇದು ಕೆಎಂಎಫ್ ವಿರುದ್ಧದ ಷಡ್ಯಂತ್ರವೇ? ನಮ್ಮ ಸರ್ಕಾರವು ಹಾಲಿಗೆ ನೀಡುವ ಸಹಾಯಧನವನ್ನು ಲೀಟರಿಗೆ 5 ರೂ.ಗಳಷ್ಟು ಹೆಚ್ಚಿಸಿತ್ತು. ಇದರಿಂದಾಗಿ 2012-13 ರಲ್ಲಿ 45 ಲಕ್ಷ ಲೀಟರ್ ಉತ್ಪಾದನೆಯಾಗುತ್ತಿದ್ದ ಹಾಲಿನ ಪ್ರಮಾಣವು 2017 ರ ವೇಳೆಗೆ 73 ಲಕ್ಷ ಲೀಟರಿಗೆ ಏರಿಕೆಯಾಗಿತ್ತು. ಈಗ ಕಡಿಮೆಯಾಗುತ್ತ ಸಾಗಲು ಕಾರಣವೇನು” ಎಂದು ಪ್ರಶ್ನಿಸಿದ್ದಾರೆ.
ಕರ್ನಾಟಕದ @BJP4Karnataka ನಾಯಕತ್ವ ಎಷ್ಟೊಂದು ದುರ್ಬಲವಾಗಿದೆಯೆಂದರೆ ಒಂದೆಡೆ ಬೆಳಗಾವಿ ಗಡಿಪ್ರದೇಶದಲ್ಲಿ ಮಹಾರಾಷ್ಟ್ರ ಸರ್ಕಾರ ನೇರವಾಗಿ ತನ್ನ ಆಡಳಿತವನ್ನು ಸ್ಥಾಪಿಸಲು ಪ್ರಯತ್ನಿಸುತ್ತಿದೆ. ಇನ್ನೊಂದೆಡೆ ಗುಜರಾತ್ ರಾಜ್ಯ ಅಮುಲ್ ಮೂಲಕ ಇಲ್ಲಿನ ರೈತರನ್ನು ಬೀದಿಗೆ ತಳ್ಳುವ ಪ್ರಯತ್ನ ಮಾಡುತ್ತಿದೆ.
— Siddaramaiah (@siddaramaiah) April 7, 2023
8/11#SaveNandini
ರೈತರಿಗೆ ಅನ್ಯಾಯ ಮಾಡುತ್ತಿರುವ ಸರ್ಕಾರ
“ನಮ್ಮ ಸರ್ಕಾರ ಐದು ವರ್ಷಗಳಲ್ಲಿ 1,356 ಕೋಟಿ ರೂಪಾಯಿಗಳನ್ನು ಹಾಲಿನ ಸಹಾಯಧನಕ್ಕಾಗಿ ರೈತರಿಗೆ ಕೊಟ್ಟಿದ್ದೆವು. ಆದರೆ ಬಿಜೆಪಿ ಸರ್ಕಾರ 2020 -21 ರಲ್ಲಿ 1186 ಕೋಟಿ ಖರ್ಚು ಮಾಡಿದ್ದರೆ 2023-24ಕ್ಕೆ ಕೇವಲ 1200 ಕೋಟಿ ರೂಪಾಯಿಗಳನ್ನು ಬಜೆಟ್ ನಲ್ಲಿ ಒದಗಿಸಿ ರೈತರಿಗೆ ಅನ್ಯಾಯ ಮಾಡಿದೆ” ಎಂದು ಆರೋಪಿಸಿದ್ದಾರೆ.
“ಕರ್ನಾಟಕದ ಬಿಜೆಪಿ ನಾಯಕತ್ವ ಎಷ್ಟೊಂದು ದುರ್ಬಲವಾಗಿದೆಯೆಂದರೆ ಒಂದೆಡೆ ಬೆಳಗಾವಿ ಗಡಿಪ್ರದೇಶದಲ್ಲಿ ಮಹಾರಾಷ್ಟ್ರ ಸರ್ಕಾರ ನೇರವಾಗಿ ತನ್ನ ಆಡಳಿತವನ್ನು ಸ್ಥಾಪಿಸಲು ಪ್ರಯತ್ನಿಸುತ್ತಿದೆ. ಇನ್ನೊಂದೆಡೆ ಗುಜರಾತ್ ರಾಜ್ಯ ಅಮುಲ್ ಮೂಲಕ ಇಲ್ಲಿನ ರೈತರನ್ನು ಬೀದಿಗೆ ತಳ್ಳುವ ಪ್ರಯತ್ನ ಮಾಡುತ್ತಿದೆ” ಎಂದಿದ್ದಾರೆ.
“ಹಿಂದಿ ಹೇರಿಕೆಯ ಮೂಲಕ ನಡೆಸುತ್ತಿರುವ ಭಾಷಾದ್ರೋಹ ಮತ್ತು ರಾಜ್ಯದ ಗಡಿಯೊಳಗೆ ಅತಿಕ್ರಮಿಸುವ ಮೂಲಕ ನಡೆಸುತ್ತಿರುವ ನೆಲದ್ರೋಹದ ಜೊತೆಗೆ ಈಗ ಕೆಎಂಎಫ್ ಅನ್ನು ಮುಚ್ಚಿಸುವ ಮೂಲಕ ರೈತದ್ರೋಹ ಮಾಡಲು ಬಿಜೆಪಿ ಸರ್ಕಾರ ಹೊರಟಿದೆ. ನಾಡಿನ ರೈತರು, ರೈತರ ಹಿತರಕ್ಷಣೆಗಾಗಿ ಕಟ್ಟಿರುವ ಕೆಎಂಎಫ್ ನ ಕಬಳಿಕೆಯ ವಿರುದ್ಧ ಕನ್ನಡಿಗರೆಲ್ಲರೂ ಒಮ್ಮತದಿಂದ ವಿರೋಧಿಸಬೇಕಾಗುತ್ತದೆ. ಅಮುಲ್ ಉತ್ಪನ್ನಗಳನ್ನು ಖರೀದಿಸುವುದಿಲ್ಲ ಎಂದು ಕನ್ನಡಿಗರೆಲ್ಲರೂ ಪ್ರತಿಜ್ಞೆ ಮಾಡಬೇಕು” ಎಂದು ಕರೆ ನೀಡಿದ್ದಾರೆ.
“ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಕ್ಷಣ ಮಧ್ಯಪ್ರವೇಶಿಸಿ ಹಿಂಬಾಗಿಲಿನಿಂದ ಪ್ರವೇಶಿಸುತ್ತಿರುವ ಅಮುಲ್ ಸಂಸ್ಥೆಯನ್ನು ತಡೆಯಬೇಕು. ಈ ಸಂಬಂಧ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರಿಗೆ ರಾಜ್ಯದ ಜನಾಭಿಪ್ರಾಯವನ್ನು ಗಮನಕ್ಕೆ ತಂದು ಈ ದ್ರೋಹ ಚಿಂತನೆಯನ್ನು ನಿಲ್ಲಿಸಬೇಕು” ಎಂದು ಆಗ್ರಹಿಸಿದ್ದಾರೆ.
ನಾವು ಅಮುಲ್ ಉತ್ಪನ್ನಗಳನ್ನು ಬಳಸುವುದಿಲ್ಲ