ಲೋಕಸಭಾ ಚುನಾವಣೆ ಹಿನ್ನೆಲೆ, ಏಪ್ರಿಲ್ 24ರ ಸಂಜೆ 6ರಿಂದ ಏಪ್ರಿಲ್ 26ರವರ ಮಧ್ಯರಾತ್ರಿಯವರೆಗೆ ಸಿಆರ್ಪಿಸಿ ಸೆಕ್ಷನ್ 144ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಈ ಹಿನ್ನೆಲೆ, ಕೆಲವೊಂದು ನಿರ್ಬಂಧದ ಕ್ರಮಗಳನ್ನುಜಾರಿಗೊಳಿಸಲಾಗಿದೆ.
ರಾಜ್ಯದಲ್ಲಿ ಎರಡು ಹಂತದಲ್ಲಿ ಮತದಾನ ನಡೆಯಲಿದ್ದು, ಬೆಂಗಳೂರಿನಲ್ಲಿ ಏಪ್ರಿಲ್ 26 ರಂದು ಲೋಕಸಭಾ ಚುನಾವಣೆಗೆ ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಹಲವು ನಿರ್ಬಂಧ ಆದೇಶಗಳನ್ನು ಹೊರಡಿಸಲಾಗಿದೆ. ಅದಲ್ಲದೇ ಚುನಾವಣಾ ದಿನ ಮದ್ಯ ಮಾರಾಟ ನಿಷೇಧಿಸಲಾಗಿದ್ದು, ಮುಕ್ತ, ನಿರ್ಭಿತ ಚುನಾವಣೆ ನಡೆಸಲು ಅಗತ್ಯ ಕ್ರಮ ಕೈಗೊಂಡಿದ್ದಾರೆ.
144 ಸೆಕ್ಷನ್ ಜಾರಿಯಾದ ಹಿನ್ನೆಲೆ, ಐದು ಜನರಿಗಿಂತ ಹೆಚ್ಚು ಜನ ಗುಂಪುಗೂಡಬಾರದು, ರ್ಯಾಲಿಗಳು, ಸಾರ್ವಜನಿಕ ಸಭೆಗಳನ್ನು ನಡೆಸುವಂತೆ ಇಲ್ಲ. ಮಾರಕ ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳನ್ನು ಹೊಂದಿರಬಾರದು. ಪ್ರತಿಮೆಗಳನ್ನು ಪ್ರದರ್ಶಿಸುವುದು ಮತ್ತು ಬೆಂಕಿ ಹಚ್ಚಿ ಸುಟ್ಟು ಹಾಕುವುದನ್ನು ಮಾಡಬಾರದು. ಪ್ರಚೋದನಕಾರಿ ಭಾಷಣ ಮಾಡಬಾರದು. ಸಾರ್ವಜನಿಕವಾಗಿ ರಾಜಕೀಯ ಘೋಷಣೆ ಕೂಗಬಾರದು.
ಮತದಾನ ಕೇಂದ್ರದ 100 ಮೀಟರ್ ವ್ಯಾಪ್ತಿಯಲ್ಲಿ, ಪ್ರಚಾರ ಮಾಡಲು ಮತ್ತು ಪೋಸ್ಟರ್ಗಳು ಮತ್ತು ಬ್ಯಾನರ್ಗಳನ್ನು ಬಳಸಲು ಅನುಮತಿಯಿಲ್ಲ. ಮತದಾನ ಕೇಂದ್ರದ 100 ಮೀಟರ್ ವ್ಯಾಪ್ತಿಯಲ್ಲಿ ಮೊಬೈಲ್ಗಳು, ಕಾರ್ಡ್ಲೆಸ್ ಫೋನ್ಗಳು ಮತ್ತು ಇತರ ಎಲೆಕ್ಟ್ರಾನಿಕ್ ಸಾಧನ ಕೊಂಡೊಯ್ಯುವಂತೆ ಇಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಇದಕ್ಕೆ ಸಂಬಂಧಿಸಿದ ಜಿಲ್ಲಾ ಚುನಾವಣಾ ಅಧಿಕಾರಿ (ಡಿಇಒ) ಯ ಅನುಮತಿಯೊಂದಿಗೆ ಅಧಿಕಾರಿಗಳು ಅಥವಾ ಸಿಬ್ಬಂದಿಗೆ ವಿನಾಯಿತಿ ಸಿಗಲಿದೆ.
ಈಗಾಗಲೇ ನಿಗದಿಯಾಗಿರುವ ವಿವಾಹ ಮುಂತಾದ ಕಾರ್ಯಕ್ರಮಗಳಲ್ಲಿ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸುವಂತಿಲ್ಲ. ಕಾನೂನು ಮತ್ತು ಸುವ್ಯವಸ್ಥೆ ಮೇಲೆ ಯಾವುದೇ ಪರಿಣಾಮ ಬೀರದೆ, ಅನುಮತಿಸಲಾದ ಮೆರವಣಿಗೆಗಳನ್ನು ನಡೆಸಬೇಕು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಅವರು ಆದೇಶ ಹೊರಡಿಸಿದ್ದಾರೆ. ಆದರೆ, ಈ ನಿಷೇಧವು ಅಂತ್ಯಕ್ರಿಯೆಯ ಮೆರವಣಿಗೆಗಳಿಗೆ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಮತದಾನ ನಡೆಯುವ ಏಪ್ರಿಲ್ 26ರ ಮಧ್ಯರಾತ್ರಿ 12 ಗಂಟೆಯಿಂದ ಏಪ್ರಿಲ್ 27ರ ಮಧ್ಯರಾತ್ರಿವರೆಗೆ ಹಾಗೂ ಜೂನ್ 3ರ ಮಧ್ಯರಾತ್ರಿಯಿಂದ ಜೂನ್ 4ರ ಮಧ್ಯರಾತ್ರಿವರೆಗೆ ಮತಗಳ ಎಣಿಕೆಯ ಕಾರಣದಿಂದಾಗಿ, ನಗರದಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗುವುದು ಎಂದು ಆದೇಶ ಹೊರಡಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ಲೋಕಸಭೆ ಚುನಾವಣೆ | ಏ. 25, 26ರಂದು ನಂದಿ ಗಿರಿಧಾಮಕ್ಕೆ ಪ್ರವೇಶ ನಿರ್ಬಂಧ
ಈ ವೇಳೆ ಅಂಗಡಿಗಳು, ಬಾರ್ಗಳು, ಹೋಟೆಲ್ಗಳು, ರೆಸ್ಟೋರೆಂಟ್ಗಳು ಮತ್ತು ಹೋಟೆಲುಗಳಲ್ಲಿ ಮದ್ಯ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ರೆಸ್ಟೋರೆಂಟ್ಗಳು ಮತ್ತು ಹೋಟೆಲ್ಗಳಿಗೆ ಆಹಾರ ಮತ್ತು ಆಲ್ಕೊಹಾಲ್ ಮುಕ್ತ ಪಾನೀಯಗಳನ್ನು ಪೂರೈಸಲು ಮಾತ್ರ ಅನುಮತಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯು ಎರಡು ಹಂತಗಳಲ್ಲಿ ನಡೆಯುತ್ತಿದೆ. ಏಪ್ರಿಲ್ 26 ಹಾಗೂ ಮೇ 7ರಂದು ಮತದಾರರು ಹಕ್ಕು ಚಲಾಯಿಸಲಿದ್ದಾರೆ. ತಲಾ 14 ಕ್ಷೇತ್ರಗಳಿಗೆ ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ಜೂನ್ 4ರಂದು ಫಲಿತಾಂಶ ಬರಲಿದೆ.