ರಾಜ್ಯದಾದ್ಯಂತ ಬಿಸಿಲಿನ ದಗೆ ಇನ್ನು ಮೂರು ತಿಂಗಳ ಕಾಲ ಮುಂದುವರೆಯಲಿದ್ದು, ಬೆಂಗಳೂರಿನಲ್ಲಿ ವಾಡಿಕೆಗಿಂತ 5 ಡಿಗ್ರಿ ಸೆಲ್ಸಿಯಸ್ ಹೆಚ್ಚಿನ ತಾಪಮಾನ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಜ್ಞ ಡಿ. ಪ್ರಸಾದ್ ಹೇಳಿದ್ದಾರೆ.
ಈ ಬಗ್ಗೆ ಈ ದಿನ.ಕಾಮ್ ಜತೆಗೆ ಮಾತನಾಡಿದ ಅವರು, “ರಾಜ್ಯದ ಬಯಲು ಸೀಮೆ ಕಲಬುರಗಿಯಲ್ಲಿ ಗರಿಷ್ಠ 38.4 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದರೆ, ಚಾಮರಾಜನಗರದಲ್ಲಿ ಕನಿಷ್ಠ 17.4 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ” ಎಂದು ಹೇಳಿದರು.
“ಈಗ ಮಳೆಯ ಮುನ್ಸೂಚನೆ ಏನೂ ಇಲ್ಲ. ಒಂದು ವಾರ ಕಳೆದ ಬಳಿಕ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿಯಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಮತ್ತು ಒಳನಾಡಿನ ಕೆಲವು ಕಡೆಗಳಲ್ಲಿ ಗರಿಷ್ಠ ತಾಪಮಾನವೂ ಸಾಮಾನ್ಯಕ್ಕಿಂತ 2-3ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ” ಎಂದು ತಿಳಿಸಿದರು.
“ಬೆಂಗಳೂರಿನಲ್ಲಿ ವಾಡಿಕೆಯಂತೆ ಈ ಸಮಯದಲ್ಲಿ 31 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಬೇಕಿತ್ತು. ಆದರೆ, 36 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ರಾಜ್ಯಾದ್ಯಂತ ಒಣಹವೆ ಇರುವ ಸಾಧ್ಯತೆಯಿದೆ. ಇನ್ನು ಬೆಂಗಳೂರಿನಲ್ಲಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಉಷ್ಣಾಂಶ 35 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಬಹುಳಷ್ಟು ಸಾಧ್ಯತೆಯಿದೆ” ಎಂದು ಮಾಹಿತಿ ನೀಡಿದ್ದಾರೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ ಪ್ರಕಾರ, ತಲಕಾಡು 38.2 ಡಿಗ್ರಿ ಸೆಲ್ಸಿಯಸ್ ಅನ್ನು ದಾಖಲಿಸಿದರೆ, ತಿ.ನರಸೀಪುರದಲ್ಲಿ ಅದೇ ಅವಧಿಯಲ್ಲಿ 38.1 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಮಂಡ್ಯ ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 38.3 ಡಿಗ್ರಿ ಸೆಲ್ಸಿಯಸ್, ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ 38.1 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಮುಂದಿನ ದಿನಗಳಲ್ಲಿ ದಕ್ಷಿಣ ಒಳಭಾಗ ಮತ್ತು ಉತ್ತರ ಆಂತರಿಕ ಕರ್ನಾಟಕದ ಕೆಲವು ಸ್ಥಳಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ.
ಈ ಸುದ್ದಿ ಓದಿದ್ದೀರಾ? ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ | ಆರೋಪಿಯ ಮಾಹಿತಿ ನೀಡಿದವರಿಗೆ ₹10 ಲಕ್ಷ ನಗದು ಬಹುಮಾನ: ಎನ್ಐಎ
ರಾಯಚೂರಿನಲ್ಲಿ 17, ಕಲಬುರಗಿಯಲ್ಲಿ 8, ತುಮಕೂರಿನಲ್ಲಿ 6, ಬಳ್ಳಾರಿ, ಕೊಪ್ಪಳ ಮತ್ತು ಯಾದಗಿರಿಯಲ್ಲಿ ತಲಾ 4, ಮೈಸೂರಿನಲ್ಲಿ 2 ಮತ್ತು ಬಾಗಲಕೋಟೆಯಲ್ಲಿ ತಲಾ 1 ಸ್ಥಳಗಳಲ್ಲಿ ರಾಜ್ಯದಾದ್ಯಂತ 38 ಡಿಗ್ರಿ ಸೆಲ್ಸಿಯಸ್ಗಿಂತ ಹೆಚ್ಚಿನ ತಾಪಮಾನವಿದೆ ಎಂದು ಕೆಎಸ್ಎನ್ಡಿಎಂಸಿ ತಿಳಿಸಿದೆ. ರಾಯಚೂರು ಜಿಲ್ಲೆಯ ಹಡಗನಹಾಳ್ ಹೋಬಳಿಯಲ್ಲಿ ಗರಿಷ್ಠ 41 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.