ಹಮಾಸ್ ಹಾಗೂ ಇಸ್ರೇಲ್ ನಡುವಿನ ಸಂಘರ್ಷ ಆರಂಭವಾಗಿ ತಿಂಗಳುಗಳೇ ಕಳೆದಿದೆ. ಈ ನಡುವೆ ರಾಜ್ಯದಲ್ಲಿ ಪ್ಯಾಲೆಸ್ತೀನ್ ಜನರ ಪರವಾಗಿ ಶಾಂತಿಯುತವಾಗಿ ನಡೆಸುವ ಪ್ರತಿಭಟನೆಗಳ ಮೇಲೆ ಪೊಲೀಸ್ ಇಲಾಖೆ ದಾಖಲಿಸಿಕೊಳ್ಳುತ್ತಿರುವ ಎಫ್ಐಆರ್ಗಳನ್ನು ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತರಾದ ಯೋಗೇಂದ್ರ ಯಾದವ್ ನೇತೃತ್ವದ ಸ್ವರಾಜ್ ಇಂಡಿಯಾ ಪಕ್ಷದ ಬೆಂಗಳೂರು ಘಟಕವು ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದೆ.
ಪತ್ರದಲ್ಲಿ ಪ್ಯಾಲೆಸ್ತೀನ್ನ ವಿಚಾರವಾಗಿ ಕರ್ನಾಟಕದಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದವರ ಮೇಲೆ ಪೊಲೀಸ್ ಇಲಾಖೆಯು ನಡೆಸುತ್ತಿರುವ ದಬ್ಬಾಳಿಕೆ ಮತ್ತು ನಿಗ್ರಹದ ಇತ್ತೀಚಿನ ವರದಿಗಳ ಬಗ್ಗೆ ಆಳವಾದ ಕಳವಳ ಉಂಟಾಗಿದೆ. ಹಾಗಾಗಿ, ಈ ವಿಚಾರದಲ್ಲಿ ನಿಮಗೆ ಪತ್ರ ಬರೆಯುತ್ತಿದ್ದೇವೆ ಎಂದು ಸ್ವರಾಜ್ ಇಂಡಿಯಾ ಪಕ್ಷದ ಬೆಂಗಳೂರು ಘಟಕವು ಮುಖ್ಯಮಂತ್ರಿಯವರಿಗೆ ತಿಳಿಸಿದೆ.
ಇದನ್ನು ಓದಿದ್ದೀರಾ? ಕೇಂದ್ರ ಸರ್ಕಾರ, ಕಾಂಗ್ರೆಸ್ ಹೈಕಮಾಂಡ್ ಪ್ಯಾಲೆಸ್ತೀನ್ ಪರ: ರಾಜ್ಯ ಸರ್ಕಾರ ಯಾರ ಪರ?
ಪ್ಯಾಲೆಸ್ತೀನ್ನ ಪರವಾಗಿ ಶಾಂತಿಯುತ ಸಭೆ ನಡೆಸುವುದು ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ನಮ್ಮ ಪ್ರಜಾಪ್ರಭುತ್ವವು ನಮಗೆ ನೀಡಿದ ಮೂಲಭೂತ ಹಕ್ಕು. ಈ ಹಕ್ಕುಗಳನ್ನು ಹತ್ತಿಕ್ಕುವ ಯಾವುದೇ ಪ್ರಯತ್ನಗಳು ನಿರಾಶಾದಾಯಕ ಮತ್ತು ನಮ್ಮ ಪ್ರಜಾಪ್ರಭುತ್ವದ ಬೆಳವಣಿಗೆಯ ಬಗ್ಗೆಯೇ ಗಂಭೀರ ಪ್ರಶ್ನೆಗಳನ್ನು ಎತ್ತುತ್ತವೆ ಎಂದು ತಿಳಿಸಿದೆ.

ಪ್ಯಾಲೆಸ್ತೀನ್ಗೆ ಬೆಂಬಲ ವ್ಯಕ್ತಪಡಿಸಿ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿಯವರು ಬರೆದಿರುವ ಸುದೀರ್ಘವಾದ ಲೇಖನವನ್ನು ನಾವು ಕೂಡ ಕುತೂಹಲದಿಂದ ಓದಿದ್ದೇವೆ. ವೈವಿಧ್ಯಮಯ ಅಭಿಪ್ರಾಯಗಳನ್ನು ಗೌರವಿಸುವುದು ಮತ್ತು ಅಂತಾರಾಷ್ಟ್ರೀಯ ವಿಷಯಗಳ ಬಗ್ಗೆ ಮುಕ್ತ ಸಂವಾದವನ್ನು ಪ್ರೋತ್ಸಾಹಿಸುವುದು ಈಗಿನ ಅತ್ಯಗತ್ಯ. ಪ್ರತೀಕಾರದ ಭಯವಿಲ್ಲದೆ ನಾಗರಿಕರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಮುಕ್ತವಾಗಿ ಭಾವಿಸುವ ವಾತಾವರಣವನ್ನು ಬೆಳೆಸುವುದು ಸರ್ಕಾರದ ಜವಾಬ್ದಾರಿ. ಆದರೆ ಕರ್ನಾಟಕದಲ್ಲಿ ‘ಪೊಲೀಸ್ ರಾಜ್’ನ ವರದಿಗಳು ಮತ್ತು ಶಾಂತಿಯುತ ಪ್ರತಿಭಟನಾಕಾರರನ್ನು ನಿಗ್ರಹಿಸುವುದು ನಮ್ಮ ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ, ಈ ಪರಿಸ್ಥಿತಿಯನ್ನು ತಾವುಗಳು ಪರಿಶೀಲಿಸಬೇಕು ಮತ್ತು ನಮ್ಮ ಸಂವಿಧಾನವು ಪ್ರತಿಪಾದಿಸಿರುವ ಹಕ್ಕುಗಳು ಮತ್ತು ಸ್ವಾತಂತ್ರ್ಯಗಳನ್ನು ಎತ್ತಿ ಹಿಡಿಯಲು ನಾವು ನಿಮ್ಮನ್ನು ಒತ್ತಾಯಿಸುತ್ತೇವೆ ಎಂದು ಸ್ವರಾಜ್ ಇಂಡಿಯಾ ಪಕ್ಷ ಮುಖ್ಯಮಂತ್ರಿ ಸಿದ್ದರಾಮಯ್ಯನವರಲ್ಲಿ ಪತ್ರದ ಮೂಲಕ ಆಗ್ರಹಿಸಿದೆ.
ಇದನ್ನು ಓದಿ: ಪ್ಯಾಲೆಸ್ತೀನ್ ಪರ ವಿಚಾರಗೋಷ್ಠಿಗೆ ತಡೆ | ರಾಜ್ಯ ಸರ್ಕಾರದ ಕಿಡಿಗೇಡಿ ನಡೆ: ರಂಗಕರ್ಮಿ ರಘುನಂದನ
ಪ್ಯಾಲೆಸ್ತೀನ್ ವಿಷಯದಲ್ಲಿ ಶಾಂತಿಯುತವಾಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುವವರ ವಿರುದ್ಧ ಅತಿಯಾದ ಬಲಪ್ರಯೋಗ, ಅನಿಯಂತ್ರಿತ ಬಂಧನ ಅಥವಾ ಬೆದರಿಕೆಯ ಬಗ್ಗೆ ತನಿಖೆ ಮಾಡಲು ರಾಜ್ಯ ಸರ್ಕಾರವು ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಕೂಡ ಪತ್ರದಲ್ಲಿ ಸಿಎಂ ಅವರನ್ನು ಸ್ವರಾಜ್ ಇಂಡಿಯಾ ಪಕ್ಷ ಒತ್ತಾಯಿಸಿದೆ.

ಕರ್ನಾಟಕವು ಪ್ರಗತಿಪರ ಮತ್ತು ಎಲ್ಲರನ್ನೂ ಒಳಗೊಳ್ಳುವ ರಾಜ್ಯವಾಗಿ, ವೈವಿಧ್ಯಮಯ ಅಭಿಪ್ರಾಯಗಳನ್ನು ಗೌರವಿಸುವ ವಾತಾವರಣವನ್ನು ಬೆಳೆಸುವ ಮೂಲಕ ಮಾದರಿಯಾಗಬೇಕಿದೆ. ಪ್ಯಾಲೆಸ್ತೀನ್ನಲ್ಲಿ ನಡೆಯುತ್ತಿರುವ ಘಟನೆಗಳ ಬಗ್ಗೆ ನಾಗರಿಕರು ತಮ್ಮ ಕಳವಳಗಳನ್ನು ವ್ಯಕ್ತಪಡಿಸಲು ಅಧಿಕಾರ ಹೊಂದಿದ್ದಾರೆ. ಹಾಗಾಗಿ, ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಎತ್ತಿ ಹಿಡಿಯಲು ನೀವು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು. ಕರ್ನಾಟಕದಲ್ಲಿ ಪ್ರಜಾಸತ್ತಾತ್ಮಕ ತತ್ವಗಳ ರಕ್ಷಣೆಯನ್ನು ಖಾತ್ರಿಪಡಿಸುವ ಸಕಾರಾತ್ಮಕ ಸ್ಪಂದಿಸಬೇಕು ಎಂದು ಸ್ವರಾಜ್ ಇಂಡಿಯಾ ಪಕ್ಷದ ಬೆಂಗಳೂರು ಬೆಂಗಳೂರು ನಗರ ಜಿಲ್ಲಾ ಘಟಕದ ಅಧ್ಯಕ್ಷ ವಿಜಯ್ ಕುಮಾರ್ ಎಸ್ ಹಾಗೂ ಸದಸ್ಯರಾದ ಗುಲಾಬ್ ಪಾಷಾ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.