ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಕಾವು ಜೋರಾಗಿದೆ. ಏ.26 ರಂದು ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯಲಿದೆ. ಅಭ್ಯರ್ಥಿಗಳು ಮತ ಬೇಟೆಗೆ ಇಳಿದಿದ್ದು, ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಈ ಮಧ್ಯೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಇಬ್ಬರು ಪ್ರಮುಖ ರಾಜಕಾರಣಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷನ ವಿರುದ್ಧ ಎಫ್ಐಆರ್ ದಾಖಲು
ಧರ್ಮ, ಭಾಷೆ, ಜಾತಿ, ಸೌಹಾರ್ದ್ಯತೆ ವಿಚಾರದಲ್ಲಿ ಸಮಾಜದ ಸ್ವಾಸ್ಥ್ಯ ಕೆಡಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ವಿರುದ್ಧ ದೂರು ದಾಖಲಾಗಿತ್ತು. ಈ ಹಿನ್ನೆಲೆ, ಮಲ್ಲೇಶ್ವರ ಪೊಲೀಸ್ ಠಾಣೆಯಲ್ಲಿ ಬಿಜೆಪಿ ನಾಯಕ ಬಿವೈ ವಿಜಯೇಂದ್ರ ಹಾಗೂ ಬಿಜೆಪಿ ಫಾರ್ ಕರ್ನಾಟಕ ಖಾತೆ ಮೇಲೆ ಎಫ್ಐಆರ್ ದಾಖಲಾಗಿದೆ.
FIR is lodged by FST of Bengaluru against B Y Vijayendra, State President, for a derogatory post posted on official X handle of BJP Karnataka on 19.04.24. The FIR No.60/2024 at Malleshwaram PS is lodged u/s 125 of RP Act and 505, 153(A) of IPC on disturbing public tranquility.
— Chief Electoral Officer, Karnataka (@ceo_karnataka) April 20, 2024
ಏ. 17ರಂದು ಹೇಳಿಕೆ ನೀಡಿದ್ದ ಬಿ.ವೈ ವಿಜಯೇಂದ್ರ ಅವರ ವಿರುದ್ಧ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು.
ಅಲ್ಲದೇ, ಏ.19ರಂದು ಬಿಜೆಪಿ ಕರ್ನಾಟಕದ ಅಧಿಕೃತ ಎಕ್ಸ್ ಹ್ಯಾಂಡಲ್ನಿಂದ ಅವಹೇಳನಕಾರಿ ಪೋಸ್ಟ್ ಮಾಡಲಾಗಿತ್ತು. ಸಾರ್ವಜನಿಕ ನೆಮ್ಮದಿಗೆ ಭಂಗ ಉಂಟು ಮಾಡಿದ ಆರೋಪದ ಮೇಲೆ ಆರ್ಪಿ ಕಾಯಿದೆಯ u/s 125 ಮತ್ತು ಐಪಿಸಿ 505, 153(ಎ) ಅಡಿ ಪ್ರಕರಣ ದಾಖಲಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ಏ.20ರಂದು ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ವಿಜಯೇಂದ್ರ ಹಾಗೂ ಬಿಜೆಪಿ ಎಕ್ಸ್ ಖಾತೆ ಉಸ್ತುವಾರಿ ವಹಿಸಿಕೊಂಡಿರುವವರ ವಿರುದ್ಧ ಗಾಂಧಿನಗರದ ಚುನಾವಣಾ ನೊಡೆಲ್ ಅಧಿಕಾರಿ ಅರ್ಜುನ್ ಆಯೂರ್ ಎಂಬುವರು ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರುದ್ಧ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಡಿ.ಕೆ.ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲು
ಆರ್.ಆರ್.ನಗರದಲ್ಲಿ ಅಪಾರ್ಟ್ಮೆಂಟ್ ಮಾಲೀಕರನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಂಸಿಸಿ ಉಲ್ಲಂಘನೆ ಮಾಡಿದ್ದಾರೆ. ಈ ಹಿನ್ನೆಲೆ, ಅವರ ವಿರುದ್ಧ ಬೆಂಗಳೂರಿನ ಎಫ್ಎಸ್ಟಿ ಎಫ್ಐಆರ್ ದಾಖಲಿಸಿದೆ.