ರಾಜಧಾನಿ ಬೆಂಗಳೂರಿನಲ್ಲಿ ವಾಡಿಕೆಯಂತೆ ಮಳೆಯಾಗದೇ ತತ್ತರಿಸುತ್ತಿದೆ. ಸದ್ಯ ನಗರದಲ್ಲಿರುವ 6,900 ಕೊಳವೆಬಾವಿಗಳು ಬತ್ತಿ ಹೋಗಿವೆ. ಇನ್ನು 7 ಸಾವಿರ ಕೊಳವೆ ಬಾವಿಗಳು ಜೀವಂತವಾಗಿವೆ. ಬರ ಪರಿಸ್ಥಿತಿಯಲ್ಲಿ ನಾವೇಲ್ಲರೂ ನೀರನ್ನು ಜವಾಬ್ದಾರಿಯಿಂದ ಬಳಕೆ ಮಾಡಬೇಕು. ಹೀಗಾಗಿ, ನೀರಿನ ಸಮರ್ಪಕ ಬಳಕೆ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
ವಿಧಾನಸೌಧದ ಆವರಣದಲ್ಲಿ ಬಿಡಬ್ಲ್ಯೂಎಸ್ಎಸ್ ಬಿ ವತಿಯಿಂದ ಆರಂಭಿಸಿರುವ ‘ನೀರು ಉಳಿಸಿ ಬೆಂಗಳೂರು ಬೆಳೆಸಿ’ ಅಭಿಯಾನಕ್ಕೆ ಚಾಲನೆ ನೀಡಿದ ಶಿವಕುಮಾರ್ ಅವರು ಅಂತರ್ಜಲ, ಜಲಸಂರಕ್ಷಕ, ಜಲಮಿತ್ರ, ಜಲಸ್ನೇಹಿ ಆಪ್ಗಳನ್ನು ಬಿಡುಗಡೆ ಮಾಡಿದರು.
ಬಳಿಕ ಮಾತನಾಡಿದ ಅವರು, “ಹೊಸ ಕೊಳವೆ ಬಾವಿ ಕೊರೆಯಲು ಅನುಮತಿ ನೀಡಬೇಕು. ಆ ಕೊಳವೆ ಬಾವಿಗಳ ನೀರನ್ನು ಸರಿಯಾಗಿ ನಿಯಂತ್ರಿಸಿ ಸದ್ಬಳಕೆ ಮಾಡುವ ಪ್ರಯತ್ನ ಮಾಡಲಾಗುತ್ತಿದೆ. ಬರ ಪರಿಸ್ಥಿತಿಯ ಸಮಯದಲ್ಲಿ ನಾವೆಲ್ಲರೂ ನೀರನ್ನು ಬಹಳ ಜವಾಬ್ದಾರಿಯಿಂದ ಸಮರ್ಪಕವಾಗಿ ಬಳಸಬೇಕು. ಈ ವಿಚಾರವಾಗಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಅಗತ್ಯ” ಎಂದರು.
“ಅಂತರ್ಜಲ, ಜಲಸಂರಕ್ಷಕ, ಜಲಮಿತ್ರ ಹಾಗೂ ಜಲಸ್ನೇಹಿ ಎಂಬ ನಾಲ್ಕು ಆಪ್ಗಳನ್ನು ಗುರುವಾರ ಪರಿಚಯಿಸುತ್ತಿದ್ದೇವೆ. ಯಾರೇ ಹೊಸ ಕೊಳವೆಬಾವಿ ಕೊರೆಯಬೇಕೆಂದರೇ, ಬಿಡಬ್ಲ್ಯೂಎಸ್ಎಸ್ಬಿಯಿಂದ ಅನುಮತಿ ಪಡೆಯಬೇಕಾಗಿದೆ. ಇದರಲ್ಲಿ ಹೆಚ್ಚುವರಿ ನೀರನ್ನು ಸರ್ಕಾರ ಯಾರಿಗೆ ಹಂಚಿಕೆ ಮಾಡಬೇಕು ಎಂದು ತೀರ್ಮಾನಿಸಲು ಹಾಗೂ ನೀರಿನ ಸಮರ್ಪಕ ಬಳಕೆಗೆ ಈ ಆಪ್ ತರಲಾಗಿದೆ” ಎಂದು ತಿಳಿಸಿದರು.
“ನೀರಿನ ದರವನ್ನು ಕಳೆದ ಹತ್ತು ವರ್ಷಗಳಿಂದ ಏರಿಕೆ ಮಾಡಿಲ್ಲ. ಬೆಂಗಳೂರಿನ ಕುಡಿಯುವ ನೀರಿಗಾಗಿ ನಮ್ಮ ನೀರು ನಮ್ಮ ಹಕ್ಕು ಹೋರಾಟ ಮಾಡಿಕೊಂಡು ಬಂದಿದ್ದೇವೆ. ನೀರನ್ನು ಉಳಿಸಿ, ಮುಂದಿನ ಪೀಳಿಗೆ ಕಣ್ಣೀರು ತಪ್ಪಿಸಲು ನಾವು ಶ್ರಮಿಸುತ್ತಿದ್ದೇವೆ” ಎಂದರು.
“ಜಲ ರಕ್ಷಣೆಗಾಗಿ ಜನರಲ್ಲಿ ಅರಿವು ಮೂಡಿಸಬೇಕು. ಈ ಹಿನ್ನೆಲೆ, ನಮ್ಮ ಅಧಿಕಾರಿಗಳು ಹಗಲು ರಾತ್ರಿ ಬೆಂಗಳೂರಿನ ಖಾಸಗಿ ಟ್ಯಾಂಕರ್ಗಳನ್ನು ನೋಂದಣಿ ಮಾಡಿಕೊಂಡಿದ್ದಾರೆ. ಸರ್ಕಾರದಿಂದ ರಿಯಾಯಿತಿ ದರ ನಿಗದಿ ಮಾಡಲಾಗಿದೆ. ಆ ಮೂಲಕ ನೀರಿನ ಪೂರೈಕೆ ಹೆಸರಲ್ಲಿ ನಡೆಯುತ್ತಿದ್ದ ದಂಧೆಗೆ ಕಡಿವಾಣ ಹಾಕಲಾಗಿದೆ” ಎಂದು ವಿವರಿಸಿದರು.
ಈ ಸುದ್ದಿ ಓದಿದ್ದೀರಾ? ‘ಕೆಎಸ್ಪಿಸಿಬಿ’ಯಲ್ಲಿ 152 ಹುದ್ದೆಗಳಿಗೆ ನೇರ ನೇಮಕಾತಿ: ಸಚಿವ ಈಶ್ವರ ಬಿ. ಖಂಡ್ರೆ
“ನೀರಿನ ಅಭಾವ ಸ್ಥಿತಿಯನ್ನು ಸರಿಯಾಗಿ ನಿರ್ವಹಣೆ ಮಾಡುತ್ತಿದ್ದೇವೆ. ಚುನಾವಣೆ ಇದೆ ಎಂಬ ಕಾರಣಕ್ಕೆ ನೀರಿನ ಸಮಸ್ಯೆ ಬಗ್ಗೆ ಹೆಚ್ಚಿನ ಪ್ರಚಾರ ಹಾಗೂ ರಾಜಕೀಯ ಮಾಡಲಾಗುತ್ತಿದೆ. ಆ ಬಗ್ಗೆ ತಲೆಕೆಡಿಸಿಕೊಳ್ಳದೇ ಸಮಸ್ಯೆ ನಿವಾರಣೆಗೆ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಚುನಾವಣೆ ನೀತಿ ಸಂಹಿತೆ ಏನೇ ಬರಲಿ, ಕುಡಿಯುವ ನೀರಿನ ವಿಚಾರದಲ್ಲಿ ತೊಂದರೆ ಆಗದಂತೆ ನೋಡಿಕೊಳ್ಳಿ. ಎಲ್ಲೆಲ್ಲಿ ನೀರಿನ ಅಭಾವವಿದೆ ಅಲ್ಲಿ ನೀರನ್ನು ಪೂರೈಸಲು ಅಗತ್ಯ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸುತ್ತೇನೆ. ಈ ಪರಿಸ್ಥಿತಿಯಲ್ಲಿ ನೀರಿನ ಸಮರ್ಪಕ ಬಳಕೆಗೆ ಎಲ್ಲರೂ ಎಚ್ಚರಿಕೆಯಿಂದ ಜವಾಬ್ದಾರಿ ನಿಭಾಯಿಸಬೇಕು” ಎಂದರು.