ಜಾತಿಗಣತಿ ವರದಿ ಸಲ್ಲಿಸಲು ಹಿಂದುಳಿದ ವರ್ಗಗಳ ಆಯೋಗಕ್ಕೆ ತಿಳಿಸಲಾಗಿದ್ದು, ವರದಿ ನೀಡಿದರೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು
ಬೆಳಗಾವಿಯಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಹೆಚ್ ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ಕಾಂತರಾಜ್ ಅವರು ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರಾಗಿದ್ದು, ವರದಿ ತಯಾರು ಮಾಡಿದ್ದರು. ವರದಿ ಸಲ್ಲಿಸಲು ಹೋದಾಗ ಅದನ್ನು ಅವರು ಸ್ವೀಕರಿಸಲಿಲ್ಲ. ಆಗಿನ ಕಾರ್ಯದರ್ಶಿಗಳು ವರದಿಗೆ ಸಹಿ ಮಾಡಿಲ್ಲ. ಈಗಿನ ಕಾರ್ಯದರ್ಶಿಗಳ ಬಳಿ ಸಹಿ ಮಾಡಿಸಿ ಅವರು ಸಲ್ಲಿಸಬೇಕು” ಎಂದು ಹೇಳಿದರು.
“ಜಾತಿ ಗಣತಿ ಹಾಗೂ ಸಾಮಾಜಿಕ ಆರ್ಥಿಕ ಸಮೀಕ್ಷೆ ಮಾಡಬೇಕೆಂದು ನಾನೇ ಹಿಂದೆ ಆದೇಶ ಮಾಡಿದ್ದು. ಆಗ ಕಾಂತರಾಜ್ ಅವರು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದರು. ನಮ್ಮ ಸರ್ಕಾರದ ಅವಧಿಯಲ್ಲಿ ವರದಿ ಪೂರ್ಣವಾಗಿರಲಿಲ್ಲ” ಎಂದರು.
“ಸಮ್ಮಿಶ್ರ ಸರ್ಕಾರ ಇರುವಾಗ ಅಂದಿನ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ, ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರಾಗಿ ಪುಟ್ಟರಂಗಶೆಟ್ಟಿ ಇದ್ದರು. ಆಗ ವರದಿಯನ್ನು ಪಡೆಯಲಿಲ್ಲ. ನಂತರ ಆಯೋಗಕ್ಕೆ ಜಯಪ್ರಕಾಶ್ ಹೆಗಡೆಯವರನ್ನು ಬಿಜೆಪಿ ಸರ್ಕಾರ ನೇಮಿಸಿತ್ತು. ಅವರು ವರದಿಯನ್ನು ಸಲ್ಲಿಸುವಂತೆ ತಿಳಿಸಲಾಗಿದೆ, ಆದರೆ ಈವರೆಗೂ ಕೊಟ್ಟಿಲ್ಲ” ಎಂದು ಹೇಳಿದರು.
ಶಿವಮೊಗ್ಗ ಪ್ರಕರಣ
ಶಿವಮೊಗ್ಗದಲ್ಲಿ ಜಿಲ್ಲಾ ರಕ್ಷಣಾಧಿಕಾರಿಗಳು ಸೇರಿದಂತೆ ಪೊಲೀಸರ ಮೇಲೆ ಕಲ್ಲು ತೂರಾಟವಾಗಿರುವ ಬಗ್ಗೆ ಮಾತನಾಡಿ ಘಟನೆಗೆ ಕಾರಣರಾದವರ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದರು.