ಬಾಗಲಕೋಟೆಯ ಸವಿತಾ ಸಮಾಜ ಹಾಗೂ ಅದರ ಉಪಜಾತಿಗಳಿಗೆ ಸೇರಿದ ನಿರುದ್ಯೋಗಿಗಳು ಮತ್ತು ವಿದ್ಯಾರ್ಥಿಗಳಿಗೆ ಸ್ವಯಂ ಉದ್ಯೋಗ, ಉನ್ನತ ಶಿಕ್ಷಣ ಹಾಗೂ ವಿದೇಶಿ ವ್ಯಾಸಂಗಕ್ಕೆ ಆರ್ಥಿಕ ನೆರವು ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ ವಿವಿಧ ಸಾಲ ಯೋಜನೆಗಳಡಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಸೇವಾ ಸಿಂಧು ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಸ್ವಯಂ ಉದ್ಯೋಗ ಆರಂಭಿಸಲು ಬಯಸುವ ಸವಿತಾ ಸಮಾಜದ ನಿರುದ್ಯೋಗಿಗಳಿಗೆ ಗರಿಷ್ಠ ₹2 ಲಕ್ಷದವರೆಗೆ ಆರ್ಥಿಕ ನೆರವು ನೀಡಲಾಗುತ್ತದೆ. ₹1 ಲಕ್ಷದವರೆಗಿನ ಸಾಲಕ್ಕೆ ಶೇ.20ರಷ್ಟು ಹಾಗೂ ₹1 ಲಕ್ಷದಿಂದ ₹2 ಲಕ್ಷದವರೆಗಿನ ಸಾಲಕ್ಕೆ ಶೇ.15ರಷ್ಟು ಸಹಾಯಧನ ನೀಡುವ ವ್ಯವಸ್ಥೆ ಇದೆ.
ಅರ್ಜಿದಾರರ ವಯಸ್ಸು 18ರಿಂದ 55 ವರ್ಷದೊಳಗಿರಬೇಕು. ಕುಟುಂಬದ ವಾರ್ಷಿಕ ಆದಾಯ ಗ್ರಾಮೀಣ ಪ್ರದೇಶದಲ್ಲಿ ₹98 ಸಾವಿರ ಹಾಗೂ ಪಟ್ಟಣ ಪ್ರದೇಶದಲ್ಲಿ ₹1.20 ಲಕ್ಷದೊಳಗಿರಬೇಕು. ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಿಇಟಿ ಮತ್ತು ನೀಟ್ ಮೂಲಕ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳಿಗೆ ಎಂಜಿನಿಯರಿಂಗ್, ವೈದ್ಯಕೀಯ, ದಂತ ವೈದ್ಯಕೀಯ ಸೇರಿದಂತೆ ಒಟ್ಟು 28 ಕೋರ್ಸ್ಗಳ ವ್ಯಾಸಂಗಕ್ಕೆ ಸಾಲ ಸೌಲಭ್ಯ ದೊರೆಯಲಿದೆ.
ಕೋರ್ಸ್ನ ಅವಧಿಗೆ ಅನುಗುಣವಾಗಿ ವಾರ್ಷಿಕ ಗರಿಷ್ಠ ₹1 ಲಕ್ಷದವರೆಗೆ, ಒಟ್ಟು ₹4 ಲಕ್ಷದಿಂದ ₹5 ಲಕ್ಷದವರೆಗೆ ಸಾಲವನ್ನು ವಾರ್ಷಿಕ ಶೇ.2ರ ಬಡ್ಡಿ ದರದಲ್ಲಿ ನೀಡಲಾಗುತ್ತದೆ. ಈ ಯೋಜನೆಗೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ ₹3.50 ಲಕ್ಷ ಮೀರಿರಬಾರದು.
ವಿದೇಶದ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಮಾಡಲು ಬಯಸುವ ಅರ್ಹ ಅಭ್ಯರ್ಥಿಗಳಿಗೆ ಮತ್ತೊಂದು ಮಹತ್ವದ ಅವಕಾಶವಿದೆ. ಈ ಯೋಜನೆಯಡಿ ವಾರ್ಷಿಕ ₹25 ಲಕ್ಷದಿಂದ ₹50 ಲಕ್ಷದವರೆಗೆ ಬಡ್ಡಿ ರಹಿತ ಸಾಲ ನೀಡಲಾಗುತ್ತದೆ. ಈ ಯೋಜನೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯ ₹15 ಲಕ್ಷ ಮೀರಿರಬಾರದು ಎಂದು ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದ ಪ್ರಕಟಣೆ ತಿಳಿಸಿದೆ.
ಸ್ವಯಂ ಉದ್ಯೋಗ ಆರಂಭಿಸುವ ನಿರುದ್ಯೋಗಿಗಳು ಹಾಗೂ ಉನ್ನತ ಶಿಕ್ಷಣದ ಕನಸು ಹೊತ್ತಿರುವ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ನಿಗಮ ಮನವಿ ಮಾಡಿದೆ.




