ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಗ್ರಾಮದ ವಾರ್ಡ್ ಸಂಖ್ಯೆ 2ರ ಬುಖಾರಿ ಕಾಲೋನಿಯಲ್ಲಿ ಕಳೆದ 24 ವರ್ಷಗಳಿಂದ ರಸ್ತೆ ನಿರ್ಮಾಣವಾಗದೆ ಇರುವುದನ್ನು ಖಂಡಿಸಿ ಹಾಗೂ ಕೂಡಲೇ ರಸ್ತೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬುಖಾರಿ ಕಾಲೋನಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಶೇಕ್ ಸಯ್ಯಿದ್, ಉಪಾಧ್ಯಕ್ಷ ಎಂ.ಎಂ. ಖಾಜಾ ಹಾಗೂ ಕಾರ್ಯದರ್ಶಿ ಅಬ್ದುಲ್ ಹಮೀದ್ ನೇತೃತ್ವದಲ್ಲಿ ಬೈಂದೂರು ತಾಲೂಕು ಕಛೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.
ಕಳೆದ ಎರಡು ದಶಕಗಳಿಗೂ ಹೆಚ್ಚು ಕಾಲದಿಂದ ಬುಖಾರಿ ಕಾಲೋನಿ ನಿವಾಸಿಗಳು ಮೂಲಸೌಕರ್ಯದ ಕೊರತೆಯಿಂದ ಸಮಸ್ಯೆ ಎದುರಿಸುತ್ತಿದ್ದು, ರಸ್ತೆ ನಿರ್ಮಾಣ ಮಾಡಿಕೊಡುವಂತೆ ಹಲವು ಬಾರಿ ಸಂಬಂಧಪಟ್ಟ ಚುನಾಯಿತ ಪ್ರತಿನಿಧಿಗಳು ಹಾಗೂ ಕ್ಷೇತ್ರದ ನಾಯಕರಿಗೆ ಮನವಿ ಸಲ್ಲಿಸುತ್ತಾ ಬಂದಿದ್ದಾರೆ. ಆದರೆ ವರ್ಷಗಳು ಕಳೆದರೂ ತಮ್ಮ ಬೇಡಿಕೆ ಈಡೇರಿಲ್ಲ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.

ಬುಖಾರಿ ಕಾಲೋನಿಯ ರಸ್ತೆ ನಿರ್ಮಾಣದ ಬೇಡಿಕೆ ಹೊಸದಲ್ಲ. ಕಳೆದ 24 ವರ್ಷಗಳಿಂದ ಈ ಕುರಿತು ನಿರಂತರವಾಗಿ ಧ್ವನಿ ಎತ್ತಲಾಗುತ್ತಿದೆ. ವಾರ್ಡ್ನ ಚುನಾಯಿತ ಪ್ರತಿನಿಧಿಗಳು ಹಾಗೂ ಅಭಿವೃದ್ಧಿಯನ್ನು ಬಯಸುವ ಸ್ಥಳೀಯರು ಹಲವು ಬಾರಿ ಬೈಂದೂರು ಕ್ಷೇತ್ರದ ನಾಯಕರನ್ನು ಭೇಟಿ ಮಾಡಿ, ಕಾಲೋನಿಯ ನಿವಾಸಿಗಳ ಸಮಸ್ಯೆಯನ್ನು ವಿವರಿಸಿ ರಸ್ತೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾಗಿ ಸಮಿತಿ ತಿಳಿಸಿದೆ.
ಪ್ರತಿ ಬಾರಿ ಮನವಿ ಮಾಡಿದಾಗಲೂ ರಸ್ತೆ ನಿರ್ಮಾಣದ ಕುರಿತು ಆಶ್ವಾಸನೆಗಳನ್ನು ನೀಡಲಾಗುತ್ತಿದೆಯಾದರೂ, ಆ ಭರವಸೆಗಳು ಕಾರ್ಯರೂಪಕ್ಕೆ ಬಂದಿಲ್ಲ. ಇದರಿಂದಾಗಿ ನಿವಾಸಿಗಳು ಹಲವು ವರ್ಷಗಳಿಂದ ನಿರಾಸೆ ಅನುಭವಿಸುವಂತಾಗಿದೆ. ರಸ್ತೆ ನಿರ್ಮಾಣದ ವಿಚಾರದಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಗಮನ ಸೆಳೆಯಲು ಹಲವು ರೀತಿಯಲ್ಲಿ ಮನವಿ ಮಾಡಿದ್ದರೂ ಸಮಸ್ಯೆ ಬಗೆಹರಿದಿಲ್ಲ ಎಂದು ಅವರು ದೂರಿದರು.
ಆಶ್ವಾಸನೆ ಕೇಳಿ ಕೇಳಿ ಸಾಕಾಗಿದೆ
ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಬುಖಾರಿ ಕಾಲೋನಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಶೇಕ್ ಸಯ್ಯಿದ್, “ಕಳೆದ 24 ವರ್ಷಗಳಿಂದ ನಮ್ಮ ವಾರ್ಡ್ನ ರಸ್ತೆ ನಿರ್ಮಾಣಕ್ಕಾಗಿ ಮನವಿ ಮಾಡುತ್ತಿದ್ದೇವೆ. ಚುನಾಯಿತ ಪ್ರತಿನಿಧಿಗಳು ಹಾಗೂ ಕ್ಷೇತ್ರದ ನಾಯಕರನ್ನು ಹಲವು ಬಾರಿ ಭೇಟಿ ಮಾಡಿ ಸಮಸ್ಯೆಯನ್ನು ವಿವರಿಸಿದ್ದೇವೆ. ಪ್ರತೀ ಬಾರಿ ರಸ್ತೆ ನಿರ್ಮಿಸಿಕೊಡುವ ಭರವಸೆ ನೀಡಲಾಗಿದೆ. ಆದರೆ ಇದುವರೆಗೆ ಯಾವುದೇ ಶಾಶ್ವತ ಪರಿಹಾರ ದೊರೆತಿಲ್ಲ. ಆಶ್ವಾಸನೆ ಹಾಗೂ ಹಾರಿಕೆ ಉತ್ತರಗಳನ್ನು ಕೇಳಿ ಕೇಳಿ ನಾವು ಸಾಕಾಗಿದ್ದೇವೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಜನಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಸ್ಥಳೀಯರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ರಸ್ತೆ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಹೋರಾಟ ತೀವ್ರಗೊಳಿಸುವ ಎಚ್ಚರಿಕೆ
ಪ್ರತಿಭಟನೆ ಬಳಿಕವೂ ರಸ್ತೆ ನಿರ್ಮಾಣದ ಕುರಿತು ಯಾವುದೇ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸುವುದಾಗಿ ಬುಖಾರಿ ಕಾಲೋನಿ ಅಭಿವೃದ್ಧಿ ಸಮಿತಿ ಎಚ್ಚರಿಸಿದೆ.
“ಈ ಪ್ರತಿಭಟನೆ ನಮ್ಮ ಸಮಸ್ಯೆಯನ್ನು ಸಂಬಂಧಪಟ್ಟವರ ಗಮನಕ್ಕೆ ತರುವ ಉದ್ದೇಶದಿಂದ ನಡೆಸಲಾಗಿದೆ. ಇದಾದ ಬಳಿಕವೂ ರಸ್ತೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಇನ್ನಷ್ಟು ಉಗ್ರ ಹೋರಾಟ ನಡೆಸಬೇಕಾಗುತ್ತದೆ. ನಮ್ಮ ಬೇಡಿಕೆ ಈಡೇರುವವರೆಗೆ ಹೋರಾಟ ಮುಂದುವರಿಸಲಾಗುವುದು” ಎಂದು ಸಮಿತಿ ಪದಾಧಿಕಾರಿಗಳು ತಿಳಿಸಿದ್ದಾರೆ.
24 ವರ್ಷಗಳಿಂದ ರಸ್ತೆಗಾಗಿ ಕಾಯುತ್ತಿರುವ ನಿವಾಸಿಗಳ ಬೇಡಿಕೆಗೆ ಸಂಬಂಧಪಟ್ಟ ಇಲಾಖೆ ಹಾಗೂ ಜನಪ್ರತಿನಿಧಿಗಳು ಸ್ಪಂದಿಸಿ, ಸ್ಥಳ ಪರಿಶೀಲನೆ ನಡೆಸಿ, ಅಗತ್ಯ ಅನುದಾನ ಬಿಡುಗಡೆ ಮಾಡಿ ರಸ್ತೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂಬುದು ಪ್ರತಿಭಟನಾಕಾರರ ಪ್ರಮುಖ ಆಗ್ರಹವಾಗಿದೆ.
ಪ್ರತಿಭಟನೆಯನ್ನು ಉದ್ದೇಶಿಸಿ ಎಚ್.ಎಸ್. ಸಿದ್ದೀಕ್, ಪಟ್ಗಾರ್ ಶಕೀಲ್, ಶಾನು ಖಾಲೀದ್, ಫಾಹೀಕ್ ಖಾನ್, ಅಬ್ದುಲ್ ರಝಾಕ್ ಹಾಗೂ ಅನ್ವರ್ ಶಿರೂರು ಮಾತನಾಡಿದರು. ಎಂ.ಎಂ. ಮುಸ್ತಕೀಮ್ ಉಪಸ್ಥಿತರಿದ್ದರು.






