2018ರ ವಿಧಾನಸಭಾ ಚುನಾವಣೆ ವೇಳೆ ಹಾಸನ ಜಿಲ್ಲೆಯ ಸಕಲೇಶಪುರ ಮೀಸಲು ಕ್ಷೇತ್ರದಲ್ಲಿ ಜೆಡಿಎಸ್ಗೆ ಪ್ರಬಲ ಸ್ಪರ್ಧೆ ನೀಡಿದ್ದ ನಾರ್ವೆ ಸೋಮಶೇಖರ್ ಅವರು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಸಮ್ಮುಖದಲ್ಲಿ ಅಧಿಕೃತವಾಗಿ ಜೆಡಿಎಸ್ಗೆ ಸೇರ್ಪಡೆಯಾಗಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ನಾರ್ವೆ ಸೋಮಶೇಖರ್, 53 ಸಾವಿರಕ್ಕೂ ಅಧಿಕ ಮತಗಳನ್ನು ಪಡೆದಿದ್ದರು. ಇದೀಗ, ಅವರು ಜೆಡಿಎಸ್ಗೆ ಸೇರ್ಪಡೆಯಾಗಿದ್ದು, ಸಕಲೇಶಪುರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಚ್.ಕೆ ಕುಮಾರಸ್ವಾಮಿ ಅವರಿಗೆ ಆನೆಬಲ ಬಂದಂತಾಗಿದೆ ಎಂದು ಹೇಳಲಾಗಿದೆ.
ಹಾಸನ ಶಾಸಕ, ಬಿಜೆಪಿ ಅಭ್ಯರ್ಥಿ ಪ್ರೀತಂ ಗೌಡ ಅವರ ವಿರುದ್ಧ ಸಿಟ್ಟಾಗಿರುವ ನಾರ್ವೆ ಸೋಮಶೇಖರ್, ಸಕಲೇಶಪುರದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಲು ಪಣತೊಟ್ಟಿದ್ದಾರೆ. ಅದಕ್ಕಾಗಿ, ಜೆಡಿಎಸ್ ಅಭ್ಯರ್ಥಿ ಪರವಾಗಿ ಕೆಲಸ ಮಾಡಲು ಮುಂದಾಗಿದ್ದಾರೆ. ಜೊತೆಗೆ ಹಾಸನ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸ್ವರೂಪ್ ಅವರ ಗೆಲುವಿಗೆ ಶ್ರಮಿಸುವುದಾಗಿ ಹೇಳಿಕೊಂಡಿದ್ದಾರೆ.
“ತಮಗೆ ಬಿಜೆಪಿ ಟಿಕೆಟ್ ತಪ್ಪಿಸುವಲ್ಲಿ ಯಶಸ್ವಿಯಾಗಿರುವುದಲ್ಲದೆ, ಮೀಸಲು ಕ್ಷೇತ್ರದಲ್ಲೂ ತಮ್ಮದೇ ಹಿಡಿತ ಸಾಧಿಸುವ ದೃಷ್ಟಿಯಿಂದ ಹಾಸನ ಕ್ಷೇತ್ರದ ಶಾಸಕ ಪ್ರೀತಂ ಗೌಡ ತಮ್ಮ ಬೆಂಬಲಿಗ ಸಿಮೆಂಟ್ ಮಂಜು ಅವರಿಗೆ ಟಿಕೆಟ್ ಕೊಡಿಸಿದ್ದಾರೆ” ಎಂದು ನಾರ್ವೆ ಸೋಮಶೇಖರ್ ಕೋಪಗೊಂಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಅಪ್ಪು ಹೆಸರು ಎಳೆದು ತಂದ ಬಿಜೆಪಿಗರಿಗೆ ತಿರುಗೇಟು ನೀಡಿದ ಶಿವಣ್ಣ
“ದೇವೇಗೌಡ ಅಪ್ಪಾಜಿಯವರ ಮಾರ್ಗದರ್ಶನದಲ್ಲಿ ನನ್ನ ರಾಜಕೀಯ ಭವಿಷ್ಯ ರೂಪಿಸಿಕೊಳ್ಳುತ್ತೇನೆ. ಈ ಬಾರಿ ಜೆಡಿಎಸ್ ಅಭ್ಯರ್ಥಿ ಎಚ್ ಕೆ.ಕುಮಾರಸ್ವಾಮಿ ಅವರನ್ನು ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಗೆಲ್ಲಿಸುವುದರ ಮೂಲಕ ನನ್ನ ರಾಜಕೀಯ ಭವಿಷ್ಯ ಮುಗಿಸಲು ಪ್ರಯತ್ನಿಸುತ್ತಿರುವ ವ್ಯಕ್ತಿಗಳಿಗೆ ಪಾಠ ಕಲಿಸಬೇಕು” ಎಂದು ನಾರ್ವೆ ಸೋಮಶೇಖರ್ ಹೇಳಿದ್ದಾರೆ.