ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಮೇ 13ರಂದು ನಡೆಯಲಿದ್ದು, ಮತ ಎಣಿಕೆ ಪ್ರಕ್ರಿಯೆಯನ್ನು ತಾಳ್ಮೆ ಮತ್ತು ಎಚ್ಚರಿಕೆಯಿಂದ ನಿರ್ವಹಿಸುವಂತೆ ಅಧಿಕಾರಿಗಳಿಗೆ ಕೊಡಗು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಬಿ.ಸಿ ಸತೀಶ್ ಸೂಚನೆ ನೀಡಿದ್ದಾರೆ.
ಜಿಲ್ಲೆಯ ಮಡಿಕೇರಿಯ ಸಂತ ಜೋಸೆಫರ ಶಾಲೆಯಲ್ಲಿ ಮತ ಎಣಿಕೆ ನಡೆಯಲಿದೆ. ಅದಕ್ಕಾಗಿ ಅಧಿಕಾರಿಗಳಿಗೆ ಆಯೋಜಿಸಿದ್ದ ತರಬೇತಿ ಕಾರ್ಯಗಾರದಲ್ಲಿ ಜಿಲ್ಲಾಧಿಕಾರಿ ಸತೀಶ್ ಮಾತನಾಡಿದರು.
“ಮತ ಎಣಿಕೆ ಪ್ರಕ್ರಿಯೆ ಮೇ 13ರ ಬೆಳಗ್ಗೆ 8ಕ್ಕೆ ಆರಂಭವಾಗಲಿದೆ. ಚುನಾವಣಾ ಆಯೋಗದ ನಿಯಮದ ಪ್ರಕಾರ ಮತ ಎಣಿಕೆ ಕೈಗೊಳ್ಳಬೇಕು. ಮತ ಎಣಿಕೆ ಸ್ಥಳಕ್ಕೆ ಮೊಬೈಲ್ ತರಬಾರದು. ಮತ ಎಣಿಕೆ ಕಾರ್ಯವು ಸರಳ ಪ್ರಕ್ರಿಯೆ ಆಗಿದ್ದು, ಯಾವುದೇ ರೀತಿಯ ಗೊಂದಲಕ್ಕೆ ಒಳಗಾಗದೆ ನಿಯಮಾನುಸಾರ ಕರ್ತವ್ಯ ನಿರ್ವಹಿಸಿ ಮತ ಎಣಿಕೆ ಕಾರ್ಯವನ್ನು ಯಶಸ್ಸುಗೊಳಿಸಬೇಕು” ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು.
ಈ ಸುದ್ದಿ ಓದಿದ್ದೀರಾ? ರಾಜ್ಯದ 34 ಕಡೆ ಮತ ಎಣಿಕೆ : ಕೌಂಟಿಂಗ್ ಸೆಂಟರ್ ಮಾಹಿತಿ ಬಿಡುಗಡೆ ಮಾಡಿದ ಆಯೋಗ
“ಯಾವುದಾದರೂ ಸಮಸ್ಯೆಗಳು ಇದ್ದಲ್ಲಿ ಚುನಾವಣಾಧಿಕಾರಿ ಗಮನಕ್ಕೆ ತರಬೇಕು. ಮತ ಎಣಿಕೆ ಮೇಲ್ವಿಚಾರಕರು ಮತ್ತು ಮತ ಎಣಿಕೆ ಸಹಾಯಕರು ಕಾರ್ಯನಿರ್ವಹಿಸಲಿದ್ದು, ಜೊತೆಗೆ ಮೈಕ್ರೋ ವೀಕ್ಷಕರು ಇರಲಿದ್ದಾರೆ. ಎದುರಿಗೆ ಹಲವು ಪಕ್ಷದ ಏಜೆಂಟರು ಇರುತ್ತಾರೆ” ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮಾಹಿತಿ ನೀಡಿದರು.